Tuesday, August 4, 2026

BDA Apartments

Home Front Page ಹಿಂದಿ ಹೇರಿಕೆ ಹುನ್ನಾರಕ್ಕೆ ನಮ್ಮ ಭಾಷೆ ಬಲಿ ಕೊಡುವ ನಿಮ್ಮ ‘ಬೆನ್ನು ಮೂಳೆ’ ಇಲ್ಲದ ರಾಜಕೀಯಕ್ಕೆ...

ಹಿಂದಿ ಹೇರಿಕೆ ಹುನ್ನಾರಕ್ಕೆ ನಮ್ಮ ಭಾಷೆ ಬಲಿ ಕೊಡುವ ನಿಮ್ಮ ‘ಬೆನ್ನು ಮೂಳೆ’ ಇಲ್ಲದ ರಾಜಕೀಯಕ್ಕೆ ಖಂಡನೆ:  ಜೆಡಿಎಸ್ ಕಿಡಿ.

ಬೆಂಗಳೂರು,ಜನವರಿ,10,2023(www.justkannada.in):  ರಾಜ್ಯದಲ್ಲಿ ಹಿಂದಿ ಹೇರಿಕೆಯನ್ನ ಬಲವಾಗಿ ಖಂಡಿಸಿರುವ ಜೆಡಿಎಸ್  ಇದೀಗ ಟ್ವಟ್ಟರ್ ನಲ್ಲಿ ಬಿಜೆಪಿ ವಿರುದ್ದ ಕಿಡಿಕಾರಿದೆ.

ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಜೆಡಿಎಸ್,  ಒಕ್ಕೂಟ ಸರ್ಕಾರದ ಅಣತಿಯಂತೆ, ವಿಶ್ವ ಹಿಂದಿ ದಿವಸದ ಬಗ್ಗೆ ಉತ್ಸುಕರಾಗಿರುವ ರಾಜ್ಯ ಬಿಜೆಪಿಯವರೆ, ನಿಮ್ಮ ಗುಲಾಮಗಿರಿಗೆ ಕನ್ನಡಿಗರ ಒಕ್ಕೊರಲ ಧಿಕ್ಕಾರ. ಹಿಂದಿ ಹೇರಿಕೆಯ ಹುನ್ನಾರಕ್ಕೆ ನಮ್ಮ ಭಾಷೆಯನ್ನು ಬಲಿ ಕೊಡುವ ನಿಮ್ಮ ‘ಬೆನ್ನು ಮೂಳೆ’ ಇಲ್ಲದ ರಾಜಕೀಯವನ್ನು ಬಲವಾಗಿ ಖಂಡಿಸುತ್ತೇವೆ ಎಂದಿದೆ.

ಬಹು ಭಾಷೆಯ, ಬಹುಸಂಸ್ಕ್ರತಿಯ ದೇಶ ನಮ್ಮ ಭಾರತ. ಕೇವಲ‌ ಒಂದು ಭಾಷೆಯನ್ನು ಮೆರೆಸುವ ಈ ಕೀಳು ಮಟ್ಟದ ರಾಜಕೀಯ ಏಕೆ? ಒಂದು ಭಾಷೆಯ ವೈಭವೀಕರಣದಿಂದಾಗಿ ಭಾರತದ ಅನ್ಯ ಭಾಷೆಗಳ ಶ್ರೀಮಂತಿಕೆಯನ್ನು ಗೌಣವಾಗಿಸುವ ಈ ಹುನ್ನಾರಕ್ಕೆ ಕನ್ನಡಿಗರ ಪ್ರಬಲ ವಿರೋಧ.

ನಮ್ಮ ದೇಶದ ಸಂವಿಧಾನದಲ್ಲಿ ರಾಷ್ಟ್ರಭಾಷೆಯೆಂಬ‌ ಪರಿಕಲ್ಪನೆಯೇ ಇಲ್ಲ. ಹಾಗಿದ್ದಾಗ, ಯಾವಾಗಿಂದ ಹಿಂದಿ ರಾಷ್ಟ್ರಭಾಷೆಯಾಯ್ತು? ಅಂತರರಾಷ್ಟ್ರೀಯ ಮಟ್ಟದಲ್ಲಿ ಹಿಂದಿಯನ್ನು ಈ ಪರಿ ವಿಜೃಂಭಿಸುವ ನಿಮ್ಮ ರಾಜಕೀಯವನ್ನು ಸ್ವಾಭಿಮಾನಿ‌ ಕನ್ನಡಿಗರು ಒಪ್ಪುವುದಿಲ್ಲ. ಇದಕ್ಕೆ ತಕ್ಕ‌ ಪ್ರತಿಫಲ ಉಣ್ಣುತ್ತೀರಿ ಎಂದು ಬಿಜೆಪಿ ನಾಯಕರಿಗೆ ಜೆಡಿಎಸ್  ಟಾಂಗ್ ನೀಡಿದೆ.

ಹಿಂದಿ‌ ಭಾಷಿಕ‌ ಪ್ರದೇಶಗಳು ಕನ್ನಡವೂ ಸೇರಿದಂತೆ ಭಾರತದ ಭಿನ್ನ ಭಾಷೆಗಳ ದಿವಸವನ್ನು ಆಚರಿಸುತ್ತವೆಯೇ? ಕೇವಲ ಒಂದು ಭಾಷೆಗೆ ಈ ಮಟ್ಟದ ಆದ್ಯತೆ ಏಕೆ? ಕೇಂದ್ರ ಬಿಜೆಪಿಯ ತಾಳಕ್ಕೆ ಕುಣಿಯುವುದು ಬಿಟ್ಟು ಬೇರೇನೂ ಬಾರದ ರಾಜ್ಯ ಬಿಜೆಪಿಯವರೆ, ನಿಮ್ಮ ಅಭಿಮಾನ ಶೂನ್ಯ ನಡೆಯು ತಲೆತಗ್ಗಿಸುವಂತದ್ದು.

“ನನ್ನ ಕನ್ನಡಕ್ಕಿಂತ ಯಾರೂ ದೊಡ್ಡವರಲ್ಲ” ಎಂದ ಕುವೆಂಪು ಅವರ ಕನ್ನಡಾಭಿಮಾನ ನಮ್ಮದೂ ಕೂಡ. ಭಾರತದ ಅಸಂಖ್ಯ ಶ್ರೀಮಂತ ಭಾಷೆಗಳಲ್ಲಿ ಹಿಂದಿಯೂ ಒಂದು. ಅದರ ಹೊರತಾಗಿ, ಹಿಂದಿ ಹೇರಿಕೆ, ವೈಭವೀಕರಣದ ಯಾವುದೇ ಕುತಂತ್ರದ ರಾಜಕೀಯಕ್ಕೆ ಧಿಕ್ಕಾರವೇ ಸೈ ಎಂದು ಜೆಡಿಎಸ್  ವಾಗ್ದಾಳಿ ನಡೆಸಿದೆ.

Key words: Condemn –backboneless-politics – language –Hind-i imposition- JDS