Wednesday, August 12, 2026

BDA Apartments

Home Front Page ಇಬ್ಬರು ಶಿಕ್ಷಕರ ಆತ್ಮಹತ್ಯೆ: ಸಿಎಂ ಬೊಮ್ಮಾಯಿ ಕಣ್ಣು ಬಿಟ್ಟು ನೋಡಲು ಇನ್ನೆಷ್ಟು ಹೆಣ ಬೀಳಬೇಕು..? ಸಿದ್ಧರಾಮಯ್ಯ...

ಇಬ್ಬರು ಶಿಕ್ಷಕರ ಆತ್ಮಹತ್ಯೆ: ಸಿಎಂ ಬೊಮ್ಮಾಯಿ ಕಣ್ಣು ಬಿಟ್ಟು ನೋಡಲು ಇನ್ನೆಷ್ಟು ಹೆಣ ಬೀಳಬೇಕು..? ಸಿದ್ಧರಾಮಯ್ಯ ತರಾಟೆ.

ಬೆಂಗಳೂರು,ಫೆಬ್ರವರಿ,25,2023(www.justkannada.in):  ಅನುದಾನಿತ ಶಾಲಾ-ಕಾಲೇಜು ಶಿಕ್ಷಕರ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ನಿವೃತ್ತ ಶಿಕ್ಷಕರಿಬ್ಬರು ಆತ್ಮಹತ್ಯೆಗೆ ಶರಣಾದ ಪ್ರಕಣಕ್ಕೆ ಸಂಬಂಧಿಸಿದಂತೆ  ಸರಣಿ ಟ್ವೀಟ್  ಮಾಡಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ  ವಿಪಕ್ಷ ನಾಯಕ ಸಿದ್ಧರಾಮಯ್ಯ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಣ್ಣು ಬಿಟ್ಟು ನೋಡಲು ಇನ್ನೆಷ್ಟು ಹೆಣ ಬೀಳಬೇಕು..? ಸದಾ ಕಾಲ ಕಿವಿಯಲ್ಲಿ ಕಮಿಷನ್ ಸದ್ದು ಗುಂಯ್ ​ಗುಡುವಾಗ ಬಡವರ ಕೂಗು ಕೇಳುವುದಾದರೂ ಹೇಗೆ ಎಂದು ಕಿಡಿಕಾರಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿ ಸರ್ಕಾರಕ್ಕೆ ಚಾಟಿ ಬೀಸಿರುವ  ಮಾಜಿ ಸಿಎಂ ಸಿದ್ಧರಾಮಯ್ಯ, ಪಿಂಚಣಿಗಾಗಿ ಮುಷ್ಕರದಲ್ಲಿ ತೊಡಗಿದ್ದ ಬಾಗಲಕೋಟೆ ಮೂಲದ ಶಿಕ್ಷಕ ಸಿದ್ದಯ್ಯ ಹಿರೇಮಠ ಮತ್ತು ರಾಯಚೂರು ಜಿಲ್ಲೆ ಸಿಂಧನೂರು ಮೂಲಕ ಶಂಕರಪ್ಪ ಬೋರಡ್ಡಿ ಅವರು ಸರ್ಕಾರ ತಮ್ಮ ಹೋರಾಟಕ್ಕೆ ಸ್ಪಂದಿಸದ ಹಿನ್ನೆಲೆಯಲ್ಲಿ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದನ್ನು ಸರ್ಕಾರಿ ಕೊಲೆಗಳು ಅನ್ನದೆ ಬೇರೇನು ಹೇಳಬೇಕು ಎಂದು ಪ್ರಶ್ನಿಸಿದ್ದಾರೆ.

ಕಳೆದ 141 ದಿನಗಳಿಂದ ಫ್ರೀಡಂ ಪಾರ್ಕ್​​ನಲ್ಲಿ ಮುಷ್ಕರನಿರತರಾಗಿರುವ ಅನುದಾನಿತ ಶಾಲಾ ಶಿಕ್ಷಕರ ಗೋಳು ಕೇಳುವವರಿಲ್ಲ. ಶಿಕ್ಷಕರು ಕೇಳುತ್ತಿರುವುದು ತಮ್ಮ ಹಕ್ಕಿನ ಪಿಂಚಣಿಯನ್ನು ಎಂಬ ಕನಿಷ್ಠ ಜ್ಞಾನವಾದರೂ ಬಿಜೆಪಿ ಸರ್ಕಾರಕ್ಕೆ ಬೇಡವೇ?  ಸಿಎಂ ಬೊಮ್ಮಾಯಿ ಅವರು ಕಣ್ಣು ಬಿಟ್ಟು ನೋಡಲು ಇನ್ನೆಷ್ಟು ಹೆಣ ಬೀಳಬೇಕು..? ಎಂದು ಸಿದ್ಧರಾಮಯ್ಯ ಗುಡುಗಿದ್ದಾರೆ.

ಅನುದಾನಿತ ಶಾಲಾ ಶಿಕ್ಷಕರು ಪ್ರತಿಭಟನೆ ಆರಂಭಿಸಿ 141 ದಿನಗಳು ಕಳೆದರೂ ಇನ್ನು ಈ ವಿಚಾರ ತಮ್ಮ ಗಮನಕ್ಕೆ ಬಂದಿರಲಿಲ್ಲ ಎಂದು ಹೇಳುವ ಮೂಲಕ ರಾಜ್ಯ ಬಿಜೆಪಿ ಸರ್ಕಾರ ಇಷ್ಟು ದಿನ ಕೋಮಾದಲ್ಲಿತ್ತು ಎಂಬುದನ್ನು ಸ್ವತಃ ಒಪ್ಪಿಕೊಂಡಿದೆ. ಸದಾ ಕಾಲ ಕಿವಿಯಲ್ಲಿ ಕಮಿಷನ್ ಸದ್ದು ಗುಂಯ್​ಗುಡುವಾಗ ಬಡವರ ಕೂಗು ಕೇಳುವುದಾದರೂ ಹೇಗೆ ಎಂದು ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.

ಕೋಮುಗಲಭೆ ನಡೆದು ಕೊಲೆಯಾದರೆ ಗಂಟೆಯೊಳಗೆ ಹೆಣದ ಸುತ್ತ ನೊಣದಂತೆ ಹೋಗಿ ಕೂರುವ ಬಿಜೆಪಿ ಸರ್ಕಾರಕ್ಕೆ, ಸಾವಿರಾರು ಮಕ್ಕಳ ಭವಿಷ್ಯ ರೂಪಿಸುವ ಶಿಕ್ಷಕರ ಜೀವಗಳು ಅಮೂಲ್ಯ ಅನ್ನಿಸುವುದಿಲ್ಲವೇ..?

ಇನ್ನಷ್ಟು ಜೀವಗಳು ಬಲಿಯಾಗುವ ಮುನ್ನ ಮುಷ್ಕರದಲ್ಲಿ ತೊಡಗಿರುವ ಅನುದಾನಿತ ಶಾಲಾ ಶಿಕ್ಷಕರನ್ನು ಕರೆದು ಬಿಜೆಪಿ ಸರ್ಕಾರ ಮಾತುಕತೆ ನಡೆಸಿ, ಅವರ ಬೇಡಿಕೆಗಳನ್ನು ತಕ್ಷಣ ಈಡೇರಿಸುವ ಕೆಲಸ ಮಾಡಬೇಕು. ಈಗಾಗಲೇ ಪ್ರಾಣ ಕಳೆದುಕೊಂಡವರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಮುಖ್ಯಮಂತ್ರಿ ಬೊಮ್ಮಾಯಿ ಅವರನ್ನು ಒತ್ತಾಯಿಸುತ್ತೇನೆ ಎಂದು ಸಿದ್ಧರಾಮಯ್ಯ ಟ್ವೀಟ್ ಮಾಡಿದ್ದಾರೆ.

Key words: Two –Teachers-Suicide-Siddaramaiah –class- CM Bommai