Thursday, August 13, 2026

BDA Apartments

Home Front Page ಉತ್ತರ ಕರ್ನಾಟಕದ ಅಭಿವೃದ್ಧಿಗೆ ಸರ್ಕಾರ ಬದ್ಧ: ಪ್ರತ್ಯೇಕ ರಾಜ್ಯದ  ಬೇಡಿಕೆ ಸಲ್ಲದು- ಸಿಎಂ ಸಿದ್ದರಾಮಯ್ಯ

ಉತ್ತರ ಕರ್ನಾಟಕದ ಅಭಿವೃದ್ಧಿಗೆ ಸರ್ಕಾರ ಬದ್ಧ: ಪ್ರತ್ಯೇಕ ರಾಜ್ಯದ  ಬೇಡಿಕೆ ಸಲ್ಲದು- ಸಿಎಂ ಸಿದ್ದರಾಮಯ್ಯ

ಬೆಳಗಾವಿ, ಡಿಸೆಂಬರ್, 15,2023(www.justkannada.in): ಸರ್ಕಾರ ಉತ್ತರ ಕರ್ನಾಟಕದ ಅಭಿವೃದ್ಧಿಗೆ ಬದ್ಧವಾಗಿದ್ದು, ಪ್ರತ್ಯೇಕ ರಾಜ್ಯದ ಬೇಡಿಕೆ ಸಲ್ಲದು ಹಾಗೂ ಅದು ತಾರತಮ್ಯ ನಿವಾರಣೆಗೆ ಪರಿಹಾರವೂ ಅಲ್ಲ  ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ವಿಧಾನಮಂಡಲದಲ್ಲಿ ಇಂದು ಉತ್ತರ ಕರ್ನಾಟಕದ ಮೇಲಿನ ಚರ್ಚೆಗೆ ಉತ್ತರ ನೀಡಿದ  ಸಿಎಂ ಸಿದ್ದರಾಮಯ್ಯ ಈ ಮಾತುಗಳನ್ನಾಡಿದರು.

ಪ್ರತ್ಯೇಕ ಕರ್ನಾಟಕಕ್ಕೆ ಒತ್ತಾಯ ಮಾಡುವುದು ಏಕೀಕರಣಕ್ಕೆ ಹೋರಾಡಿ, ಪ್ರಾಣ ತ್ಯಾಗ ಮಾಡಿದವರಿಗೆ ನಾವು ಮಾಡುವ ಅವಮಾನವಾಗಿದೆ.  ಏಕೀಕರಣಕ್ಕಾಗಿ ಬಹಳ ಜನ ಹೋರಾಡಿದರು. ಭಾಷಾವಾರು ಪ್ರಾಂತ್ರ್ಯ ರಚನೆಯಾಗುವಾಗಲು ಹೋರಾಟ ಮಾಡಿದವರಿದ್ದಾರೆ.  ಹೈದರಾಬಾದ್ ಕರ್ನಾಟಕಕ್ಕೆ 371ಗೆ ತಿದ್ದುಪಡಿ ಆಗಿ 371 ಜೆ ಪರಿಚ್ಛೇದಕ್ಕಾಗಿ ಮಲ್ಲಿಕಾರ್ಜುನ ಖರ್ಗೆ,  ಧರ್ಮಸಿಂಗ್,  ವೈಜನಾಥ್ ಪಾಟೀಲ್ ಮುಂತಾದವರು ಹೋರಾಡಿದರು. ನಾನು ಹಿಂದೆ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ 2014 ಮತ್ತು 2017 ರಲ್ಲಿ ಉತ್ತರ ಕರ್ನಾಟಕದದ ಬಗ್ಗೆ ಚರ್ಚೆಯಾಗಿತ್ತು. ಒಮ್ಮೆ ಈ ಬಗ್ಗೆ ಎರಡು ಗಂಟೆಗಳಿಗೂ ಹೆಚ್ಚು ಕಾಲ ಉತ್ತರ ನೀಡಿದ್ದೆ ಎಂದು ಸ್ಮರಿಸಿದರು.
ಅಭಿವೃದ್ಧಿಗಾಗಿ ಮೀಸಲಿಟ್ಟ ಅನುದಾನ ಖರ್ಚಾಗಿ ಅಭಿವೃದ್ಧಿಯಾಗಬೇಕು. ಕಿತ್ತೂರು ಕರ್ನಾಟದ  5 ತಾಲ್ಲೂಕುಗಳು ಸೇರಿದಂತೆ ಅತಿ ಹಿಂದುಳಿದ ಅತ್ಯಂತ ಹಿಂದುಳಿದ ತಾಲ್ಲೂಕುಗಳಿಗೂ ಅನುದಾನ ಕೊಡಲಾಗುವುದು. ಕಲ್ಯಾಣ ಕರ್ನಾಟಕಕ್ಕೆ 2013-14 ರಿಂದ ಈವರೆಗೆ 14877.36 ಕೋಟಿ ರೂ.ಗಳು ಮೀಸಲಿಡಲಾಗಿದೆ. ಬಿಡುಗಡೆಯಾಗಿದ್ದು  10280 ಕೋಟಿ ರೂ. ಹಾಗೂ  8330 ಕೋಟಿ ರೂ. ವೆಚ್ಚವಾಗಿದೆ.  ಮುಂದಿನ ವರ್ಷದಿಂದ 5000 ಕೋಟಿ ರೂ.ಗಳನ್ನು ಕಲ್ಯಾಣ ಕರ್ನಾಟಕಕ್ಕೆ ನೀಡಲಾಗುವುದು. ಮುಂಬೈ ಕರ್ನಾಟಕದ ಹಿಂದುಳಿದ ತಾಲ್ಲೂಕುಗಳಿಗೂ ಅನುದಾನ ನೀಡಲಾಗುವುದು ಎಂದರು.

Key words: Government – development – North Karnataka-separate state -not good – CM Siddaramaiah.