Saturday, September 12, 2026

BDA Apartments

ಮುಡಾ ಹಗರಣ, ಅರ್ಜಿಗೆ ವೈಟ್ನರ್‌ ಆರೋಪ: ದಾಖಲೆ ಸಮೇತ ತಿರುಗೇಟು ಕೊಟ್ಟ ಸಿಎಂ ಸಿ...
Home Front Page ಮುಡಾ ಹಗರಣ, ಅರ್ಜಿಗೆ ವೈಟ್ನರ್‌ ಆರೋಪ: ದಾಖಲೆ ಸಮೇತ ತಿರುಗೇಟು ಕೊಟ್ಟ ಸಿಎಂ ಸಿದ್ದರಾಮಯ್ಯ

ಮುಡಾ ಹಗರಣ, ಅರ್ಜಿಗೆ ವೈಟ್ನರ್‌ ಆರೋಪ: ದಾಖಲೆ ಸಮೇತ ತಿರುಗೇಟು ಕೊಟ್ಟ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಆಗಸ್ಟ್,26,2024 (www.justkannada.in): ಮುಡಾ ಹಗರಣ ಸಂಬಂಧ ದಾಖಲೆ ತಿದ್ದುಪಡಿಗೆ ವೈಟ್ನರ್‌ ಹಚ್ಚಲಾಗಿದೆ  ಎಂದು ಆರೋಪಿಸಿದ್ದ ಬಿಜೆಪಿ,ಜೆಡಿಎಸ್ ನಾಯಕರಿಗೆ ಸಿಎಂ ಸಿದ್ದರಾಮಯ್ಯ ವಿಡಿಯೋ ಸಮೇತ ಟ್ವೀಟ್ ಮಾಡಿ ತಿರುಗೇಟು ಕೊಟ್ಟಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಮುಡಾ ಅಕ್ರಮವಾಗಿ ಸ್ವಾದೀನಪಡಿಸಿಕೊಂಡ ನಮ್ಮ ಕುಟುಂಬದ ಜಮೀನಿಗೆ ಬದಲಿ ಭೂಮಿ ನೀಡುವಂತೆ ನನ್ನ ಪತ್ನಿ ಸಲ್ಲಿಸಿದ್ದ ಅರ್ಜಿಯಲ್ಲಿ ನಾಲ್ಕೈದು ಪದಗಳಿಗೆ ವೈಟ್ನರ್‌ ಹೆಚ್ಚಿದನ್ನೇ ಮಹಾನ್‌ ಅಪಾರಾಧವೆಂಬಂತೆ ಗಂಟಲು ಹರಿದುಕೊಂಡ ಬಿಜೆಪಿ – ಜೆಡಿಎಸ್‌ ನಾಯಕರೇ, ವೈಟ್ನರ್‌ ಹಿಂದಿರುವ ಅಕ್ಷರಗಳೇನು ಎಂಬುದು ಈ ವೀಡಿಯೋದಲ್ಲಿ ಸ್ಪಷ್ಟವಾಗಿ ಕಾಣುತ್ತಿದೆ, ನಿಮ್ಮ ದ್ವೇಷದ ಕನ್ನಡಕ ಕಳಚಿಟ್ಟು ಸರಿಯಾಗಿ ಕಣ್ಣುಬಿಟ್ಟು ನೋಡಿ ಎಂದು ಟಾಂಗ್ ಕೊಟ್ಟಿದ್ದಾರೆ.

ನನ್ನ ಪತ್ನಿ ಬದಲೀ ಭೂಮಿ ಕೇಳಿದ್ದು ತನ್ನದೇ ಜಮೀನನ್ನು ಮುಡಾ ವಶಕ್ಕೆ ಪಡೆದು ಅಭಿವೃದ್ಧಿಪಡಿಸಲಾದ ದೇವನೂರು 3ನೇ ಹಂತದ ಬಡಾವಣೆಯಲ್ಲಿ ಅಥವಾ ನಂತರ ಪ್ರಾಧಿಕಾರವು ಅಭಿವೃದ್ಧಿ ಪಡಿಸಿದ ಸಮಾನಾಂತರ ಬಡಾವಣೆಯಲ್ಲಿ. ಅಲ್ಲಿ ನಿವೇಶನಗಳು ಲಭ್ಯವಿರದ ಕಾರಣಕ್ಕೆ “ದೇವನೂರು 3ನೇ ಹಂತದ ಬಡಾವಣೆಯಲ್ಲಿ ಅಥವಾ ನಂತರ” ಎಂಬ ನಾಲ್ಕೈದು ಪದಗಳಿಗೆ ವೈಟ್ನರ್‌ ಹಾಕಿ, ಪ್ರಾಧಿಕಾರ ಅಭಿವೃದ್ಧಿ ಪಡಿಸಿದ ಸಮಾನಂತರ ಬಡಾವಣೆಯಲ್ಲಿ ನಿವೇಶನ ನೀಡಬೇಕೆಂಬ ಮನವಿ ಮಾಡಿದ್ದಾರೆ. ಇದರಲ್ಲಿ ಟಿಪ್ಪಣಿಯೂ ಇಲ್ಲ, ಆದೇಶವೂ ಇಲ್ಲ, ಅಪ್ಪಣೆಯೂ ಇಲ್ಲ. ತನಗೆ ಸೇರಿದ ಭೂಮಿಯಲ್ಲೇ ನಿವೇಶನ ಕೊಡಿ ಎಂಬ ಮನವಿ ಅಷ್ಟೆ ಇದೆ ಎಂದಿದ್ದಾರೆ.

ಸ್ವಯಂ ಘೋಷಿತ ಕಾನೂನು ಪಂಡಿತರು ಈಗೇನು ಹೇಳುತ್ತಾರೆ?

“ವೈಟ್ನರ್‌ ಹಚ್ಚಿ ಕಪ್ಪು ಚುಕ್ಕೆ ಅಳಿಸಿಕೊಳ್ಳಲು ಸಾಧ್ಯವಿಲ್ಲ, ಸಿಎಂ ಪತ್ನಿ ನಿವೇಶನ ಕೇಳಿದ್ದು ವಿಜಯನಗರದಲ್ಲಿ, ಮುಡಾ ವಿಚಾರ ಚರ್ಚೆಗೆ ಬಂದ ನಂತರ ಸಿದ್ದರಾಮಯ್ಯ ಅವರ ಪರವಾಗಿ ಯಾರೋ ಹೋಗಿ ವೈಟ್ನರ್‌ ಹಚ್ಚಿ ಬಂದಿದ್ದಾರೆಂದು” ಬೊಬ್ಬೆ ಹಾಕುತ್ತಿದ್ದ ಸ್ವಯಂ ಘೋಷಿತ ಕಾನೂನು ಪಂಡಿತರು ಈಗೇನು ಹೇಳುತ್ತಾರೆ? ಆತುರದಲ್ಲಿ ಮೂಗು ಕತ್ತರಿಸಿಕೊಂಡು, ರಾತ್ರಿಯೆಲ್ಲ ಕನ್ನಡಿ ಮುಂದೆ ನಿಂತು ಕಣ್ಣೀರು ಹಾಕಿದ್ದರಂತೆ ಹಾಗಾಯಿತು ಕೆಲವು ಅತಿ ಬುದ್ದಿವಂತರ ಕತೆ ಎಂದು ಸಿಎಂ ಸಿದ್ದರಾಮಯ್ಯ ಳೇವಡಿ ಮಾಡಿದ್ದಾರೆ.

ಕಪೋಲ ಕಲ್ಪಿತ ಕಟ್ಟುಕತೆಗಳ ಮೂಲಕ ನನ್ನನ್ನು ಹಾಗೂ ನನ್ನ ಕುಟುಂಬವನ್ನು ವಿನಾಃಕಾರಣ ಅಪರಾಧಿಗಳಂತೆ ಬಿಂಬಿಸಿ ಬಾಯಿಗೆ ಬಂದಂತೆ ಮಾತನಾಡಿರುವ ಬಿಜೆಪಿ – ಜೆಡಿಎಸ್‌ ಪಕ್ಷಗಳ ವಿವೇಕ ಶೂನ್ಯ ನಾಯಕರು ಇಂದು ಜನರೆದುರು ಬೆತ್ತಲಾಗಿದ್ದಾರೆ. ಸತ್ಯ ಹಾಗೆಯೇ, ಅರಿವಿಗೆ ಬರುವುದು ಸ್ವಲ್ಪ ತಡವಾಗಬಹುದು, ಆದರೆ ಅಂತಿಮ ಗೆಲುವು ಸತ್ಯದ್ದೇ ಆಗಿರುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Key words: Muda scam, whitener, CM Siddaramaiah