ಕೋವಿಡ್ ಪ್ರಕರಣ ಹೆಚ್ಚಳ: ಮಾರ್ಗಸೂಚಿ ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರ

ಬೆಂಗಳೂರು,ಮೇ,24,2025 (www.justkannada.in):   ದೇಶದಲ್ಲಿ ಮತ್ತೆ ಕೊರೊನಾ ಹಾವಳಿ ಲಗ್ಗೆ ಇಡುತ್ತಿದ್ದು, ರಾಜ್ಯದಲ್ಲೂ 35 ಕೋವಿಡ್ ಪ್ರಕರಣಗಳು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ.

ದೆಹಲಿ, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಕರ್ನಾಟಕ, ಮಹಾರಾಷ್ಟ್ರ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಕೋವಿಡ್ ಪ್ರಕರಣಗಳು ಕಂಡು ಬಂದಿದ್ದು ಅಲ್ಲಿನ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ. ರಾಜ್ಯದಲ್ಲಿಯೂ ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣ ಹೆಚ್ಚುತ್ತಿದ್ದು, 35 ಸಕ್ರಿಯ ಕೋವಿಡ್ ‍ಪ್ರಕರಣ ಕಂಡು ಬಂದಿದೆ.  ಈ ಪೈಕಿ ಬೆಂಗಳೂರಿನಲ್ಲಿಯೇ 32 ಸಕ್ರಿಯ ಪ್ರಕರಣಗಳು ದಾಖಲಾಗಿವೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಸಾರ್ವಜನಿಕರು ಅನುಸರಿಸಬೇಕಾದ ಮುಂಜಾಗೃತಾ ಕ್ರಮ, ಮಾರ್ಗಸೂಚಿ ಬಿಡುಗಡೆ ಮಾಡಿದೆ.

ಮಕ್ಕಳು, ವೃದ್ಧರು, ಆರೋಗ್ಯ ಸಮಸ್ಯೆಯಿಂದ ಬಳಲುವವರು ಮಾಸ್ಕ್ ಧರಿಸುವುದು ಹಾಗೂ ಕೈಗಳ ನೈರ್ಮಲ್ಯ ಕಾಪಾಡುವುದು ಮುಖ್ಯ. ನೆಗಡಿ, ಕೆಮ್ಮು, ಜ್ವರದಂತಹ ಆರೋಗ್ಯ ಸಮಸ್ಯೆ ಕಂಡುಬಂದಲ್ಲಿ ನಿರ್ಲಕ್ಷ್ಯ ಬೇಡ. ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಬೇಕು. ಗರ್ಭಿಣಿಯರು, ಮಕ್ಕಳು, ಇತರ ಕಾಯಿಲೆಗಳಿಂದ ಬಳಲುತ್ತಿರುವವರು ಹಾಗೂ ರೋಗನಿರೋಧಕ ಶಕ್ತಿ ಕಡಿಮೆ ಇರುವವರು ಜನದಟ್ಟಣೆ ಪ್ರದೇಶಗಳಲ್ಲಿ ಫೇಸ್ ಮಾಸ್ಕ್ ಧರಿಸಿ ಓಡಾಡುವಂತೆ ಸೂಚಿಸಲಾಗಿದೆ.

ಸಾರ್ವಜನಿಕರು ನಿಯಮಿತವಾಗಿ ಹ್ಯಾಂಡ್ ಸ್ಯಾನಟೈಸರ್ ಬಳಸಬೇಕು. ಉಸಿರಾಟದ ಸಮಸ್ಯೆಯಿರುವವರು ಸಕಾಲದಲ್ಲಿ ಚಿಕಿತ್ಸೆ ಪಡೆಯಬೇಕು. ಸಂಭಾವ್ಯ ಅಪಾಯ ತಡೆಗಟ್ಟಲು ಕೋವಿಡ್-19 ಪರೀಕ್ಷೆಗಳನ್ನು ತಕ್ಷಣವೇ ಮಾಡಿಸಿಕೊಳ್ಳಬೇಕು ಎಂದು ರಾಜ್ಯ ಸರ್ಕಾರ ಸೂಚಿಸಿದೆ.

Key words: Increase, Covid cases,  State government, guidelines