ಬೆಂಗಳೂರು, ಮೇ, 27,2025 (www.justkannada.in): ಖ್ಯಾತ ಕ್ರೀಡಾಪಟು, ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಅವರನ್ನು ಅರಣ್ಯ ಮತ್ತು ವನ್ಯಜೀವಿ ರಾಯಭಾರಿಯಾಗಿ ನಾಮ ನಿರ್ದೇಶನ ಮಾಡಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.
ತಾವು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿ 2 ವರ್ಷ ತುಂಬಿದ ಸಂದರ್ಭದಲ್ಲಿಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಈಶ್ವರ್ ಖಂಡ್ರೆ ಅವರು, ಈ ಹಿಂದೆ ಕರ್ನಾಟಕ ವನ್ಯಜೀವಿ ಮಂಡಳಿಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ ಅನುಭವ ಇರುವ ಅನಿಲ್ ಕುಂಬ್ಳೆ ವಿಶ್ವದ್ಯಂತ ಖ್ಯಾತಿ ಹೊಂದಿದ್ದು, ಅರಣ್ಯ ಸಂರಕ್ಷಣೆ, ಅರಣ್ಯ ಸಂವರ್ಧನೆ, ವೃಕ್ಷ ಸಂರಕ್ಷಣೆ, ವನ್ಯಜೀವಿ ಸಂರಕ್ಷಣೆಯ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಿದ್ದಾರೆ ಎಂದರು.
ಯಾವುದೇ ಸಂಭಾವನೆ ಇಲ್ಲ:
ಅನಿಲ್ ಕುಂಬ್ಳೆ ಅವರಿಗೆ ವನ್ಯಜೀವಿಗಳ ಬಗ್ಗೆ ಅಪಾರ ಕಾಳಜಿ ಇದೆ. ಅರಣ್ಯದ ಬಗ್ಗೆ ಪ್ರೀತಿ ಇದೆ. ಹೀಗಾಗಿ ಅವರು ಯಾವುದೇ ಸಂಭಾವನೆ ಪಡೆಯದೆ ರಾಯಭಾರಿ ಆಗಲು ಸಮ್ಮತಿಸಿದ್ದಾರೆ ಎಂದು ಈಶ್ವರ್ ಖಂಡ್ರೆ ಸ್ಪಷ್ಟಪಡಿಸಿದರು.
ಮಾದಪ್ಪನಹಳ್ಳಿ 153 ಎಕರೆಯಲ್ಲಿ ಬೃಹತ್ ಉದ್ಯಾನ ನಿರ್ಮಾಣ:ಈಶ್ವರ ಖಂಡ್ರೆ
ಬೆಂಗಳೂರಿನಲ್ಲಿ ಶ್ವಾಸತಾಣಗಳನ್ನು ಉಳಿಸಲು, ಬೆಳೆಸಲು ಸರ್ಕಾರ ನಿರ್ಧರಿಸಿದ್ದು, ಯಲಹಂಕ ಬಳಿಯ ಮಾದಪ್ಪನಹಳ್ಳಿಯ 153 ಎಕರೆ ಪ್ರದೇಶದಲ್ಲಿ ಮತ್ತೊಂದು ಬೃಹತ್ ಉದ್ಯಾನ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದರು.
ಬೆಂಗಳೂರಿನಲ್ಲಿ ಲಾಲ್ ಬಾಗ್ ಹೈದರಾಲಿಯ ಕಾಲದಲ್ಲಿ ನಿರ್ಮಾಣವಾಗಿತ್ತು, ಕಬ್ಬನ್ ಪಾರ್ಕ್ ಬ್ರಿಟಿಷರ ಕಾಲದಲ್ಲಿ ರೂಪುಗೊಂಡಿತು. ಶತಮಾನವೇ ಕಳೆದರೂ ಮತ್ತೊಂದು ಬೃಹತ್ ಉದ್ಯಾನ ಬೆಂಗಳೂರಿನಲ್ಲಿ ಆಗಲಿಲ್ಲ. ಹೀಗಾಗಿ ತಾವು ಅರಣ್ಯ ಸಚಿವನಾದ ತರುವಾಯ ನೀಲಗಿರಿ ಬೆಳೆಸಲು ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮಕ್ಕೆ ನೀಡಿದ್ದ 153 ಎಕರೆ ಜಮೀನನ್ನು ಜೂ.2ರಂದು ಮರಳಿ ಅರಣ್ಯ ಇಲಾಖೆಗೆ ಪಡೆದು ಅಲ್ಲಿ ಉದ್ಯಾನ ನಿರ್ಮಿಸಲಾಗುವುದು ಎಂದರು.
8,848 ವನಮಹೋತ್ಸವ: ಈಶ್ವರ ಖಂಡ್ರೆ
ಜಾಗತಿಕ ತಾಪಮಾನ ಏರಿಕೆ ಮತ್ತು ಹವಾಮಾನ ಬದಲಾವಣೆಯ ಪರಿಣಾಮವನ್ನು ಜಗತ್ತೇ ಎದುರಿಸುತ್ತಿದ್ದು, ಈ ಕಾಲಘಟ್ಟದಲ್ಲಿ ಹಸಿರು ಹೊದಿಕೆಯ ಹೆಚ್ಚಳ, ಅರಣ್ಯ ಸಂರಕ್ಷಣೆ ಮತ್ತು ನಿರ್ವಹಣೆ ಇಲಾಖೆಯ ಜವಾಬ್ದಾರಿಯಾಗಿದ್ದು, ಕಳೆದ 2 ವರ್ಷಗಳಲ್ಲಿ ಸುಮಾರು 8848 ವನಮಹೋತ್ಸವ ನಡೆಸಲಾಗಿದ್ದು, ಅರಣ್ಯ ಪ್ರದೇಶ, ರಸ್ತೆಬದಿ ಮತ್ತು ಸರ್ಕಾರಿ ಜಾಗದಲ್ಲಿ ಸುಮಾರು 8.5 ಕೋಟಿ ಸಸಿಗಳನ್ನು ನೆಟ್ಟು, ಪೋಷಿಸಲಾಗಿದೆ, 2023-24 ಮತ್ತು 2024-25ರ ಸಾಲಿನಲ್ಲಿ ಒಟ್ಟು 120975 ಹೆಕ್ಟೇರ್ ಪ್ರದೇಶದಲ್ಲಿ ನೆಡುತೋಪು, 25 ಹೊಸ ವೃಕ್ಷೋದ್ಯಾನ ಮತ್ತು 35 ದೇವರ ಕಾಡು ನಿರ್ಮಾಣ ಮಾಡಲಾಗಿದೆ ಎಂದು ವಿವರ ನೀಡಿದರು.
ಕಳೆದ 2 ವರ್ಷದಲ್ಲಿ ಕೃಷಿಕರಿಗೆ ತಮ್ಮ ಜಮೀನಿನಲ್ಲಿ ನಾಟಿ ಮಾಡಲು ಮತ್ತು ಇತರ ಜಮೀನಿನಲ್ಲಿ ನೆಡಲು ಒಟ್ಟಾರೆ 3.70 ಕೋಟಿ ಸಸಿಗಳನ್ನು ವಿತರಣೆ ಮಾಡಲಾಗಿದೆ ಎಂದೂ ಸಚಿವ ಈಶ್ವರ್ ಖಂಡ್ರೆ ತಿಳಿಸಿದರು.
ಬೆಂಗಳೂರಿನಲ್ಲಿ 4000 ಕೋಟಿ ರೂ. ಮೌಲ್ಯದ 128 ಎಕರೆ ಅರಣ್ಯ ಒತ್ತುವರಿ ತೆರವು:
ಬೆಂಗಳೂರು ಮಹಾನಗರದಲ್ಲಿ ಭೂಮಿಗೆ ಬಂಗಾರದ ಬೆಲೆ ಇದೆ. ಇಲ್ಲಿ ಹಲವು ದಶಕದಿಂದ ಅರಣ್ಯ ಭೂಮಿ ಒತ್ತುವರಿ ಆಗಿದ್ದು, ತಾವು ಸಚಿವರಾದ ತರುವಾಯ 2 ವರ್ಷದಲ್ಲಿ ಸುಮಾರು 4000 ಕೋಟಿ ರೂ. ಮಾರುಕಟ್ಟೆ ಮೌಲ್ಯದ 128 ಎಕರೆ ಅರಣ್ಯ ಒತ್ತುವರಿಯನ್ನು ತೆರವು ಮಾಡಿಸಿರುವುದಾಗಿ ತಿಳಿಸಿದರು.
ಕೇಂದ್ರ ಸರ್ಕಾರಿ ಸ್ವಾಮ್ಯದ ಎಚ್.ಎಂ.ಟಿ. ತನ್ನ ವಶದಲ್ಲಿರುವ ಸುಮಾರು 14,300 ಕೋಟಿ ರೂ. ಮೌಲ್ಯದ 444 ಎಕರೆ ಅರಣ್ಯ ಭೂಮಿಯನ್ನು ರಿಯಲ್ ಎಸ್ಟೇಟ್ ಸಂಸ್ಥೆಗಳು ಸೇರಿದಂತೆ ಹಲವು ಸಂಸ್ಥೆಗಳಿಗೆ ಮಾರಾಟ ಮಾಡುವುದನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ. ಈ ಅರಣ್ಯ ಜಮೀನು ಹಿಂಪಡೆದು, ಉದ್ಯಾನವಾಗಿ ಉಳಿಸಿಕೊಳ್ಳಲು ತೀರ್ಮಾನಿಸಲಾಗಿದ್ದು, ಇದಕ್ಕಾಗಿ ಕಾನೂನು ಹೋರಾಟ ನಡೆದಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದರು.
ಹಳೆ ಮೈಸೂರು ಭಾಗದಲ್ಲಿ ಬ್ರಿಟಿಷರ ಕಾಲದಲ್ಲಿ ವಿವಿಧ ವ್ಯಕ್ತಿ, ಸಂಸ್ಥೆಗಳಿಗೆ ಸುಮಾರು 5050 ಎಕರೆ ಅರಣ್ಯ ಭೂಮಿಯನ್ನು ದೀರ್ಘಕಾಲದ (999 ವರ್ಷ) ಗುತ್ತಿಗೆ ನೀಡಲಾಗಿತ್ತು. ಈ 999 ವರ್ಷದ ಗುತ್ತಿಗೆ ಅವಧಿಯನ್ನು ಸರ್ಕಾರ 99 ವರ್ಷಕ್ಕೆ ಇಳಿಕೆ ಮಾಡಿ ಗೆಜೆಟ್ ಅಧಿಸೂಚನೆ ಹೊರಡಿಸಿದೆ. ಈಗ ಇವುಗಳಲ್ಲಿ ಕೆಲವು ಗುತ್ತಿಗೆ ಅವಧಿ ಮುಗಿದಿದ್ದರೂ ಅರಣ್ಯ ಇಲಾಖೆಗೆ ಜಮೀನು ಬಿಟ್ಟುಕೊಡದೆ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ಈ ಎಲ್ಲ ಭೂಮಿ ಹಿಂಪಡೆಯಲು ಮತ್ತು ಆ ಸಂಸ್ಥೆಗಳಿಂದ ಇಲಾಖೆಗೆ ಬರಬೇಕಾದ ಸಾವಿರಾರು ಕೋಟಿ ರೂ. ಬಾಕಿ ವಸೂಲಿಗೆ ಕಾನೂನು ಹೋರಾಟ ಮಾಡಲಾಗುತ್ತಿದೆ. ಹೈಕೋರ್ಟ್ ನಲ್ಲಿ ಈ ಪ್ರಕರಣಗಳ ಅರ್ಜಿಯ ವಿಚಾರಣೆ ಹಂತದಲ್ಲಿದೆ ಎಂದು ವಿವರ ನೀಡಿದರು.
ಹೆಸರುಘಟ್ಟ ಹುಲ್ಲುಗಾವಲು- ಹಲವು ದಶಕಗಳ ಬೇಡಿಕೆ ಈಡೇರಿಕೆ: ಈಶ್ವರ ಖಂಡ್ರೆ
ಬೆಂಗಳೂರು ನಗರದ ಹೆಸರಘಟ್ಟದಲ್ಲಿ ಅಪರೂಪದ ಹುಲ್ಲುಗಾವಲಿದೆ. ಇದು ನೂರಾರು ಪ್ರಭೇದದ ಪಕ್ಷಿಗಳ ಸಂತಾನೋತ್ಪತ್ತಿಯ ತಾಣವಾಗದ್ದು, ಇಷ್ಟು ಸುಂದರ ಪರಿಸರ ಉಳಿಸಲು ದಶಕಗಳಿಂದ ಹೋರಾಟ ನಡೆದಿತ್ತು. ತಾವು ಸಚಿವರಾದ ಬಳಿಕ, ಹಲವು ಒತ್ತಡದ ನಡುವೆಯೂ ಹೆಸರುಘಟ್ಟ ಕೆರೆ ಸುತ್ತಮುತ್ತಲ್ಲಿರುವ ಅಪರೂಪದ ಹುಲ್ಲುಗಾವಲು ರಕ್ಷಣೆಗಾಗಿ 5678 ಎಕರೆ ಪ್ರದೇಶವನ್ನು ಗ್ರೇಟರ್ ಹೆಸರುಘಟ್ಟ ಸಂರಕ್ಷಿತ ಹುಲ್ಲುಗಾವಲು ಎಂದು ಘೋಷಿಸಿದ್ದಾಗಿ ತಿಳಿಸಿದರು.
6251.31 ಎಕರೆ ಅರಣ್ಯ ತೆರವು
ಕಳೆದ 2 ವರ್ಷಗಳಲ್ಲಿ 1205 ಒತ್ತುವರಿ ಪ್ರಕರಣಗಳಲ್ಲಿ ಕೋಟ್ಯಂತರ ರೂಪಾಯಿ ಬೆಲೆ ಬಾಳುವ 6251.31 ಎಕರೆ ಅರಣ್ಯ ತೆರವು ಮಾಡಿಸಲಾಗಿದೆ. ಒತ್ತುವರಿ ತೆರವು ನಿರಂತರ ಪ್ರಕ್ರಿಯೆಯಾಗಿದೆ ಎಂದು ಸಚಿವ ಈಶ್ವರ್ ಖಂಡ್ರೆ ಹೇಳಿದರು.
ಚಿರತೆ ಸಫಾರಿಗೆ ಉತ್ತಮ ಸ್ಪಂದನೆ
ಬೆಂಗಳೂರಿಗೆ ಸಮೀಪದಲ್ಲೇ ಇರುವ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಲ್ಲಿ ಚಿರತೆ ಸಫಾರಿ ಆರಂಭಿಸಬೇಕೆಂಬ ಬೇಡಿಕೆ ಇತ್ತು, ತಾವು ಸಚಿವರಾದ ತರುವಾಯ ಇದಕ್ಕೆ ಚಾಲನೆ ನೀಡಿದ್ದು, ಇದು ಜನಾಕರ್ಷಣೆಯ ಕೇಂದ್ರವಾಗಿದೆ. ಉದ್ಯಾನಕ್ಕೆ ಭೇಟಿ ನೀಡುವ ಪ್ರವಾಸಿಗರ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ ಎಂದರು.
ಡೀಮ್ಡ್ ಅರಣ್ಯ ಗೊಂದಲ ನಿವಾರಣೆಗೆ ಕ್ರಮ
ನಿರ್ದಿಷ್ಟ ಕ್ಷೇತ್ರೀಯ ಮಾನದಂಡಗಳ ರೀತ್ಯ ಜಿಲ್ಲಾಮಟ್ಟದ ಸಮಿತಿಗಳ ಶಿಫಾರಸಿನಂತೆ 3,30,186.93 ಹೆಕ್ಟೇರ್ ಪ್ರದೇಶವನ್ನು ಪರಿಭಾವಿತ ಅರಣ್ಯ ಅಥವಾ ಡೀಮ್ಡ್ ಫಾರೆಸ್ಟ್ ಎಂದು ಅಧಿಸೂಚಿಸಲಾಗಿದೆ. ಹೀಗೆ ಗುರುತಿಸಿರುವ ಭೂಮಿಯಲ್ಲಿ ಸರ್ಕಾರಿ ಕಚೇರಿ, ಆಸ್ಪತ್ರೆ, ಪಟ್ಟಾ ಜಮೀನು ಇರುವ ಕಾರಣ ಸುಪ್ರೀಂಕೋರ್ಟ್ ಗೆ ಮನವಿ ಮಾಡಲಾಗಿದ್ದು, ಸಮಿತಿ ರಚಿಸಿ ಪರಿಷ್ಕರಣೆ ಮಾಡಿ ಸಲ್ಲಿಸಲು ಸೂಚಿಸಿದೆ ಎಂದು ಸಚಿವ ಈಶ್ವರ ಖಂಡ್ರೆ ತಿಳಿಸಿದರು.
ಈಗ ಕೊನೆಯ ಅವಕಾಶ ಇದ್ದು, ಪರಿಭಾವಿತ ಅರಣ್ಯ ಎಂದು ಈಗಾಗಲೇ ಸುಪ್ರೀಂಕೋರ್ಟ್ ಗೆ ಸಲ್ಲಿಸಿರುವ ಪ್ರದೇಶದ ಪೈಕಿ ಕೈಬಿಡುವ ಪ್ರದೇಶಕ್ಕೆ ಪರ್ಯಾಯವಾಗಿ ಬೇರೆ ಜಮೀನು ನೀಡಿ ಪರಿಭಾವಿತ ಪ್ರದೇಶದ ವ್ಯಾಪ್ತಿಯನ್ನು 3,30,186.93 ಹೆಕ್ಟೇರ್ ಉಳಿಸಿಕೊಂಡು, ಪರಿಹಾರ ಒದಗಿಸಲು ತೀರ್ಮಾನಿಸಲಾಗಿದೆ. ಈ ಕಾರ್ಯ ಪ್ರಗತಿಯಲ್ಲಿದೆ ಎಂದು ತಿಳಿಸಿದರು.
ಮಾನವ-ವನ್ಯಜೀವಿ ಸಂಘರ್ಷ ತಡೆಗೆ ಕ್ರಮ
ಮಾನವ ವನ್ಯಜೀವಿ ಸಂಘರ್ಷ ಇಂದು ದೊಡ್ಡ ಸವಾಲಾಗಿದೆ. ಮಾನವ -ವನ್ಯಜೀವಿ ಸಂಘರ್ಷ ನಿಯಂತ್ರಿಸಿ ಅಮೂಲ್ಯ ಜೀವಹಾನಿ ಮತ್ತು ಬೆಳೆ ಹಾನಿ ತಪ್ಪಿಸಲು ಕ್ರಮ ಕೈಗೊಳ್ಳಲಾಗಿದೆ. ದಕ್ಷಿಣ ರಾಜ್ಯಗಳ ನಡುವೆ ಸಮನ್ವಯ ಸಾಧಿಸಲು ತಮಿಳುನಾಡು, ಆಂಧ್ರಪ್ರದೇಶ, ಕೇರಳ ರಾಜ್ಯಗಳ ಅರಣ್ಯ ಸಚಿವರು ಮತ್ತು ಅಧಿಕಾರಿಗಳ ನಡುವೆ 10.03.2024 ರಂದು ಬಂಡೀಪುರದಲ್ಲಿ ಅಂತರ ರಾಜ್ಯ ಸಮಾವೇಶವನ್ನೂ ನಡೆಸಲಾಗಿದೆ. ಆನೆ- ಮಾನವ ಸಂಘರ್ಷ ನಿಯಂತ್ರಿಸಲು ವಿಶ್ವಾದ್ಯಂತದ ಉತ್ತಮ ರೂಢಿಗಳನ್ನು ಅಳವಡಿಸಿಕೊಳ್ಳಲು ಬೆಂಗಳೂರಿನಲ್ಲಿ 2024ರ ಆಗಸ್ಟ್ 12ರಂದು ಅಂತಾರಾಷ್ಟ್ರೀಯ ಸಮ್ಮೇಳನವನ್ನು ಯಶಸ್ವಿಯಾಗಿ ಆಯೋಜಿಸಲಾಗಿತ್ತು ಎಂದು ಈಶ್ವರ ಖಂಡ್ರೆ ತಿಳಿಸಿದರು.
ನೆರೆಯ ರಾಜ್ಯದೊಂದಿಗೆ ಸೌಹಾರ್ದ ಸಂಬಂಧ ಕಾಪಾಡಲು ಆಂಧ್ರಪ್ರದೇಶಕ್ಕೆ 6 ಕುಮ್ಕಿ ಆನೆಗಳನ್ನು ವಿಧ್ಯುಕ್ತವಾಗಿ ನೀಡಲಾಗಿದೆ. ಅದಕ್ಕೆ ನೀವೆಲ್ಲಾ ಸಾಕ್ಷಿಯಾಗಿದ್ದೀರಿ ಎಂದರು.
15 ಸಾವಿರ ಎಕರೆ ಅರಣ್ಯ ಹೆಚ್ಚಳ
ರಾಜ್ಯದಲ್ಲಿ ವನ್ಯಜೀವಿಗಳ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದೆ. ಆದರೆ ಅದಕ್ಕೆ ಅನುಗುಣವಾಗಿ ಅರಣ್ಯ ಪ್ರದೇಶ ಹೆಚ್ಚಳವಾಗುತ್ತಿಲ್ಲ. ಇದನ್ನು ಮನಗಂಡು, ನಾನು ಅರಣ್ಯ ಸಚಿವನರಾದ ಬಳಿಕ ಅರಣ್ಯ ವಿಸ್ತರಣೆಗೆ ಕ್ರಮ ವಹಿಸಿದ್ದು, 2 ವರ್ಷದಲ್ಲಿ 15000 ಎಕರೆಗೂ ಹೆಚ್ಚು ಭೂಮಿಯನ್ನು ಅರಣ್ಯ ಎಂದು ಅಧಿಸೂಚನೆ ಮಾಡಲಾಗಿದೆ.
ಆನೆ ನಿಯಂತ್ರಣಕ್ಕೆ ರೈಲ್ವೆ ಬ್ಯಾರಿಕೇಡ್
ಕಾಡಿನಿಂದ ನಾಡಿಗೆ ಕಾಡಾನೆಗಳು ಬಾರದಂತೆ ತಡೆಯಲು ಆನೆ ಕಂದಕ, ಸೌರ ತಂತಿ ಬೇಲಿ ಮತ್ತು ರೈಲ್ವೆ ಬ್ಯಾರಿಕೇಡ್ ಅಳವಡಿಸಲಾಗುತ್ತಿದೆ. ನಾನು ಅರಣ್ಯ ಸಚಿವನಾಗುವವರೆಗೆ ಅಂದರೆ 2023ರ ಜೂನ್ ವರೆಗೆ ರಾಜ್ಯದಲ್ಲಿ 312.918 ಕಿ.ಮೀ ಮಾತ್ರ ರೈಲ್ವೆ ಬ್ಯಾರಿಕೇಡ್ ಅಳವಡಿಸಲಾಗಿತ್ತು. ಆದರೆ ಕಳೆದ 2 ವರ್ಷದಲ್ಲಿ 115.085 ಕಿ.ಮೀ ರೈಲ್ವೆ ಬ್ಯಾರಿಕೇಡ್ ಕಾಮಗಾರಿ ಪೂರ್ಣಗೊಳಿಸಲಾಗಿದ್ದು, ಇನ್ನೂ 193 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ ಅನುಮೋದನೆ ನೀಡಲಾಗಿದೆ ಎಂದು ವಿವರ ನೀಡಿದರು.
ಅರಣ್ಯದಂಚಿನಲ್ಲಿ ಅಳವಡಿಸಲಾಗಿರುವ ರೈಲ್ವೆ ಬ್ಯಾರಿಕೇಡ್ ಗೆ ಹೊಂದಿಕೊಂಡಂತೆ ಬಿದಿರು ಮತ್ತು ಕತ್ತಾಳೆ ಬೆಳೆಸಿದರೆ ಅದು ಜೈವಿಕ ಮತ್ತು ಸ್ವಾಭಾವಿಕ ಬ್ಯಾರಿಕೇಡ್ ನಂತೆ ಕಾರ್ಯ ನಿರ್ವಹಿಸುತ್ತದೆ. ಅರಣ್ಯ ಒತ್ತುವರಿಯನ್ನೂ ತಡೆಯುತ್ತದೆ. ಜೊತೆಗೆ ಆನೆಗಳಿಗೆ ಆಹಾರವೂ ಆಗುತ್ತದೆ. ಆನೆಗಳನ್ನು ಮರಳಿ ಕಾಡಿಗೆ ಕಳುಹಿಸಲು ಮತ್ತು ಚಿರತೆಗಳನ್ನು ಸೆರೆ ಹಿಡಿಯಲು ಕಳೆದ 2 ವರ್ಷದಲ್ಲಿ ಹೊಸದಾಗಿ 2 ಆನೆ ಕಾರ್ಯಪಡೆ ಹಾಗೂ 1 ಚಿರತೆ ಕ್ಷಿಪ್ರ ಕಾರ್ಯಪಡೆ ರಚಿಸಲಾಗಿದೆ ಎಂದು ತಿಳಿಸಿದರು.
ಹಾಸನ, ಚಿಕ್ಕಮಗಳೂರು ಮತ್ತು ರಾಜ್ಯದ ಇತರ ಭಾಗಗಳಲ್ಲಿ ಸಾರ್ವಜನಿಕರಿಗೆ ಉಪಟಳ ನೀಡುತ್ತಿದ್ದ ಪುಂಡಾನೆಗಳನ್ನು ಸೆರೆ ಹಿಡಿದು ಸ್ಥಳಾಂತರಿಸಲಾಗಿದೆ ಎಂದರು.
ಸೆರೆ ಹಿಡಿದ ಆನೆಗಳಿಗೆ ಅಳವಡಿಸಲು ಇಷ್ಟು ದಿನ ವಿದೇಶದಿಂದ ಭಾರವಾದ ರೆಡಿಯೋ ಕಾಲರ್ ಖರೀದಿಸಲಾಗುತ್ತಿತ್ತು. ಈಗ ದೇಶೀಯವಾಗಿ ರೇಡಿಯೋ ಕಾಲರ್ ಅಭಿವೃದ್ಧಿ ಪಡಿಸಲಾಗಿದ್ದು, ಇವುಗಳ ಅಳವಡಿಕೆ ಮಾಡಲಾಗುತ್ತಿದೆ. ಆನೆ ಸೆರೆ ಕಾರ್ಯಾಚರಣೆ ವೇಳೆ ಹುತಾತ್ಮನಾದ ದಸರಾ ಆನೆ ಅರ್ಜುನನಿಗೆ ಬಳ್ಳೆ ಶಿಬಿರದಲ್ಲಿ ಮತ್ತು ಯಸಳೂರು ಬಳಿ ಸ್ಮಾರಕ ನಿರ್ಮಿಸಲು ಕ್ರಮವಹಿಸಲಾಗಿದ್ದು, ಸ್ಮಾರಕ ಸಿದ್ಧವಾಗಿದೆ. ಮುಂದಿನ ತಿಂಗಳು ಇದರ ಲೋಕಾರ್ಪಣೆ ನೆರವೇರಲಿದೆ ಎಂದು ತಿಳಿಸಿದರು.
ಅರಣ್ಯ ಸಂರಕ್ಷಣೆ ಮತ್ತು ವನ್ಯಜೀವಿ ಸಂರಕ್ಷಣೆಗೆ ಹಾಗೂ ರಾಜ್ಯದ ಹಸಿರು ಹೊದಿಕೆ ಹೆಚ್ಚಿಸಲು ಸಿಬ್ಬಂದಿ ಸೇವೆ ಅತಿ ಮುಖ್ಯವಾಗಿದ್ದು, ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮ ವಹಿಸಲಾಗಿದೆ ಎಂದರು.
ಸಿಬ್ಬಂದಿ ನೇಮಕಾತಿ
310 ಅರಣ್ಯ ವೀಕ್ಷಕರ ಹುದ್ದೆಗಳ ಭರ್ತಿಗೆ ಪ್ರಕ್ರಿಯೆ ನಡೆದು 265 ಜನರಿಗೆ ನೇಮಕಾತಿ ಪತ್ರ ನೀಡಲಾಗಿದೆ. 540 ಅರಣ್ಯ ರಕ್ಷಕರ ಮತ್ತು ಇನ್ನಿತರ ಉದ್ದೆಗಳ ನೇಮಕಾತಿಗೆ ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ತಿಳಿಸಿದರು.
ಅರಣ್ಯವಾಸಿಗಳ ಸ್ವಯಂ ಇಚ್ಛೆಯಂತೆ ಸ್ಥಳಾಂತರ
ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕು ಭೀಮಗಢ ಅರಣ್ಯದೊಳಗೆ ಹಲವು ದಶಕಗಳಿಂದ ವಾಸಿಸುತ್ತಿದ್ದ 27 ಕುಟುಂಬಗಳು ಸ್ವಯಂ ಪ್ರೇರಿತವಾಗಿ ಅರಣ್ಯದಿಂದ ಹೊರಬಂದು ಮುಖ್ಯವಾಹಿನಿಗೆ ಸೇರಲು ಬಯಸಿದ ಹಿನ್ನೆಲೆಯಲ್ಲಿ. ಪ್ರತಿ ಕುಟುಂಬ ಘಟಕಕ್ಕೆ ತಲಾ 15 ಲಕ್ಷ ರೂ. ಹಣವನ್ನು ರಾಜ್ಯ ಕಾಂಪಾನಿಧಿಯಿಂದ ನೀಡಿ ಸ್ಥಳಾಂತರ ಮಾಡಲಾಗುತ್ತಿದ್ದು, ಇತ್ತೀಚೆಗೆ ಪ್ರಥಮ ಕಂತಿನ 10 ಲಕ್ಷ ರೂ. ಚೆಕ್ ಅನ್ನು ವಿತರಿಸಲಾಗಿದೆ. ಹುಲಿ ಸಂರಕ್ಷಿತ ಪ್ರದೇಶವಲ್ಲದ ಅರಣ್ಯದಲ್ಲಿ ನಡೆದ ಪ್ರಥಮ ಸ್ಥಳಾಂತರ ಇದಾಗಿದೆ ಎಂದು ಈಶ್ವರ ಖಂಡ್ರೆ ತಿಳಿಸಿದರು.
ಪರಿಸರ ಪ್ರವಾಸೋದ್ಯಮಕ್ಕೆ ಒತ್ತು ನೀಡಲಾಗಿದ್ದು, ರಾಜ್ಯದ ಎಲ್ಲ ಚಾರಣ ಪಥಗಳ ಬುಕ್ಕಿಂಗ್ ಅನ್ನು ಆನ್ ಲೈನ್ ಮಾಡಲಾಗಿದೆ, ಅರಣ್ಯ ಅಪರಾಧಗಳನ್ನು ತಡೆಯಲು ಮತ್ತು ಅಪರಾಧಿಗಳಿಗೆ ಶಿಕ್ಷೆಯಾಗುವಂತೆ ಮಾಡಲು ಗರುಡಾಕ್ಷಿ – ಆನ್ ಲೈನ್ ಎಫ್.ಐ.ಆರ್. ವ್ಯವಸ್ಥೆ ಜಾರಿಗೆ ತರಲಾಗಿದೆ ಎಂದು ತಿಳಿಸಿದರು.
ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಅಜುಂ ಪರ್ವೇಜ್, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಅರಣ್ಯ ಪಡೆ ಮುಖ್ಯಸ್ಥರಾದ ಮೀನಾಕ್ಷಿ ನೇಗಿ, ಮತ್ತಿತರರು ಉಪಸ್ಥಿತರಿದ್ದರು.
Key words: Former cricketer, Anil Kumble , ambassador , Forest Department, Ishwar Khandre