ಅಲ್ಪಸಂಖ್ಯಾತರಿಗೆ ವಸತಿ ಮೀಸಲಾತಿ: ಸ್ಪಷ್ಟನೆ ನೀಡಿದ ಸಚಿವ ಜಮೀರ್ ಅಹ್ಮದ್ ಖಾನ್

ಬೆಂಗಳೂರು, ಜೂನ್,​ 20,2025 (www.justkannada.in): ವಸತಿ ಯೋಜನೆಗಳಲ್ಲಿ ಅಲ್ಪಸಂಖ್ಯಾತರಿಗೆ ಶೇ 10ರಿಂದ ಶೇ 15ಕ್ಕೆ ಮೀಸಲಾತಿ ಹೆಚ್ಚಳಕ್ಕೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದ್ದು ಇದಕ್ಕೆ ತೀವ್ರ ವಿರೋಧ ಟೀಕೆಗಳು ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಈ ವಚಾರ ಕುರಿತು ವಸತಿ ಇಲಾಖೆ ಸಚಿವ ಜಮೀರ್​ ಅಹ್ಮದ್ ಖಾನ್ ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸಚಿವ ಜಮೀರ್ ಅಹ್ಮದ್ ಖಾನ್, ವಸತಿ ಇಲಾಖೆ ಯೋಜನೆಗಳಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಶೇ.15ರಷ್ಟು ಮೀಸಲಾತಿ ನೀಡುವ ನಿರ್ಧಾರ ಈಗ ಕೈಗೊಂಡ ತೀರ್ಮಾನವಲ್ಲ. 2019ರಲ್ಲಿ ಮೈತ್ರಿ ಸರ್ಕಾರದಲ್ಲಿ ಹೆಚ್​ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದಾಗ ಶೇ 15 ರಷ್ಟು ಮೀಸಲಾತಿ ಬಗ್ಗೆ ಸಂಪುಟ ಉಪಸಮಿತಿ ಶಿಫಾರಸು ಮಾಡಿತ್ತು ಎಂದು ತಿಳಿಸಿದ್ದಾರೆ.

ಸಾಚಾರ್ ಸಮಿತಿಯ ವರದಿ ಪ್ರಕಾರ ಕೇಂದ್ರದ ವಸತಿ ಯೋಜನೆಗಳಲ್ಲಿ ಅಲ್ಪಸಂಖ್ಯಾತರಿಗೆ ಶೇ 15 ರಷ್ಟು ಮೀಸಲಾತಿ ನೀಡಬೇಕೆಂದು ಇದೆ. ಅದೇ ರೀತಿ ರಾಜ್ಯದಲ್ಲೂ ಮೀಸಲಾತಿ ನೀಡಬೇಕು ಎಂಬ ಬೇಡಿಕೆ ಇತ್ತು. ಹೀಗಾಗಿ ಕೇಂದ್ರದ ಮಾದರಿಯನ್ನೇ ರಾಜ್ಯದಲ್ಲೂ ಅನುಸರಿಸಲಾಗಿದೆ. ಹೆಚ್​ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ ಸಮಯದಲ್ಲಿ ರಚಿಸಿದ್ದ ಸಂಪುಟ ಉಪಸಮಿತಿ ಶಿಫಾರಸು ಮಾಡಿತ್ತು. ಇದೀಗ ಸಂಪುಟದ ಮುಂದೆ ಬಂದು ಒಪ್ಪಿಗೆ ದೊರೆತಿದೆ. ಈಗಾಗಲೇ ಇದ್ದ ಶೇ 10 ರಷ್ಟು ಮೀಸಲಾತಿ ಪ್ರಮಾಣ ಶೇ.15ಕ್ಕೆ ಹೆಚ್ಚಿಸಲಾಗಿದೆ. ಅಲ್ಪಸಂಖ್ಯಾತ ಸಮುದಾಯದಲ್ಲಿ ವಸತಿ ರಹಿತರ ಸಂಖ್ಯೆ ಹೆಚ್ಚಾಗಿದೆ. ಹೀಗಾಗಿ ಮೀಸಲಾತಿ ಪ್ರಮಾಣ ಹೆಚ್ಚಿಸುವ ಬೇಡಿಕೆ ಇತ್ತು. ಶೇ.15ರಷ್ಟು ಮೀಸಲಾತಿ ಜಾರಿಗೊಳಿಸಬೇಕೆಂದು 2021ರ ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗ ಸಹ ತಿಳಿಸಿತ್ತು. ವಾಸ್ತವಾಂಶ ತಿಳಿಯದೆ ಪ್ರತಿಪಕ್ಷಗಳು ಅನಗತ್ಯವಾಗಿ ಟೀಕೆ ಮಾಡುತ್ತಿರುವುದು ಶೋಭೆ ತರುವುದಿಲ್ಲ ಎಂದು ಸಚಿವ ಜಮೀರ್ ಕಿಡಿಕಾರಿದ್ದಾರೆ.vtu

Key words: Housing Scheme, reservation , minorities, Minister, Zameer Ahmed Khan