ಮೈಸೂರು,ಜುಲೈ,2,2025 (www.justkannada.in): ರಾಜ್ಯದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಮೇಲೆ ಬಿಜೆಪಿ ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ವಿರುದ್ದ ಪ್ರಕರಣ ದಾಖಲಿಸುವಂತೆ ಪೊಲೀಸ್ ಮಹಾನಿರ್ದೇಶಕರಿಗೆ ಮೈಸೂರಿನ ಒಡನಾಡಿ ಸೇವಾ ಸಂಸ್ಥೆ ಆಗ್ರಹಿಸಿದೆ.
ಈ ಸಂಬಂಧ ಪೊಲೀಸ್ ಮಹಾನಿರ್ದೇಶಕರು ಮತ್ತು ರಾಜ್ಯ ಮಹಿಳಾ ಆಯೋಗಕ್ಕೂ ಪತ್ರ ಬರೆದಿರುವ ಒಡನಾಡಿ ಸೇವಾ ಸಂಸ್ಥೆ ಸಂಸ್ಥಾಪಕ ಅಧ್ಯಕ್ಷ ಪರಶುರಾಮ್.ಎಂ.ಎಲ್ ಹಾಗೂ ಸಂಸ್ಥಾಪಕ ಕಾರ್ಯದರ್ಶಿ ಸ್ಟ್ಯಾನ್ಲಿ. ಕೆ.ವಿ ಅವರು, ‘ರಾಜ್ಯದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ರವರು ರಾತ್ರಿಯಿಡೀ ರಾಜ್ಯ ಸರ್ಕಾರಕ್ಕಾಗಿ ಮತ್ತು ಇಡೀ ದಿನ ಮುಖ್ಯಮಂತ್ರಿಗಾಗಿ ಕೆಲಸ ಮಾಡುತ್ತಾರೆ’ ಎಂದು ಬಿಜೆಪಿಯ ಎನ್.ರವಿಕುಮಾರ್ ಹೇಳಿಕೆ ನೀಡಿದ್ದು ಈ ದ್ವಂದ್ವ ಮಾತುಗಳು ಆಶ್ಚರ್ಯ ಹಾಗೂ ಅಸಹನೀಯವಾಗಿದೆ. ಇವರ ಹೇಳಿಕೆಯು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಈ ನಿಟ್ಟಿನಲ್ಲಿ ರವಿಕುಮಾರ್ ವಿರುದ್ದ ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ನಡೆಸಬೇಕು.
ಇವರ ಹೇಳಿಕೆಯು ರಾಜ್ಯದಲ್ಲಿ ಉದ್ಯೋಗ ಮಾಡುತ್ತಿರುವ ಹೆಣ್ಣು ಮಕ್ಕಳ ಘನತೆಗೆ ಧಕ್ಕೆ ತರುವಂತಹ ಪರಿಸ್ಥಿತಿ ನಿರ್ಮಾಣವಾಗಲು ಕಾರಣವಾಗುತ್ತದೆ. ತಾವು ದಯಮಾಡಿ ಈ ವಿಚಾರದಲ್ಲಿ ಸತ್ಯಾಸತ್ಯತೆಯನ್ನು ಪರಿಶೀಲಿಸಲು ಎನ್ .ರವಿಕುಮಾರ್ ರವರ ವಿರುದ್ಧ ಎಫ್.ಐ.ಆರ್ ದಾಖಲಿಸಬೇಕು ಎಂದು ಮನವಿ ಮಾಡಿದ್ದಾರೆ
ಮುಖ್ಯವಾಗಿ ಸಾಮಾಜಿಕ ಹೋರಾಟದ ಮೂಂಚೂಣಿಯಲ್ಲಿರುವ ಒಡನಾಡಿ ಸಂಸ್ಥೆಯು ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಕಳೆದ 35 ವರ್ಷಗಳಿಂದ ಮಹಿಳೆಯರ ಶಸಕ್ತತೆ ಹಾಗೂ ಅವರ ಘನತೆಯುಕ್ತ ಜೀವನ ಕಟ್ಟಿಕೊಡುವಲ್ಲಿ ಶ್ರಮಿಸುತ್ತಿದೆ. ಇವರ ಹೇಳಿಕೆಯು ಮಹಿಳೆಯರ ಘನತೆಯನ್ನು ಕುಗ್ಗಿಸುವಂತಲ್ಲದೇ ಆತಂಕವನ್ನು ಸೃಷ್ಟಿಸುವಂತಾಗಿದೆ. ತಾವು ದಯಮಾಡಿ ಸೂಕ್ತ ತನಿಖೆಯನ್ನು ಕೈಗೊಳ್ಳಬೇಕೆಂದು ಒಡನಾಡಿ ಸೇವಾ ಸಂಸ್ಥೆ ಮನವಿ ಮಾಡಿದೆ.
Key words: CS, Shalini Rajneesh, case, N. Ravikumar, Mysore