ಮಂಡ್ಯ,ಜುಲೈ,2,2025 (www.justkannada.in): ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ ರಾಜ್ಯಾದ್ಯಂತ ಜುಲೈ 12 ರಂದು ರಾಷ್ಟ್ರೀಯ ಲೋಕ್-ಅದಾಲತ್ ಅನ್ನು ಹಮ್ಮಿಕೊಂಡಿದ್ದು, ಇದು ಪ್ರಸಕ್ತ ವರ್ಷ ನಡೆಯುತ್ತಿರುವ 2 ನೇ ಲೋಕ್ ಅದಾಲತ್ ಆಗಿರುತ್ತದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶ ಆನಂದ್ ಎಂ ಅವರು ತಿಳಿಸಿದ್ದಾರೆ.
ಮಂಡ್ಯ ಜಿಲ್ಲೆಯಲ್ಲಿ ಬರುವಂತಹ 7 ತಾಲ್ಲೂಕುಗಳಲ್ಲಿಯೂ ಸಹ ಜುಲೈ 12 ರಂದು ಲೋಕ್ ಅದಾಲತ್ ಮುಖಾಂತರ ಪ್ರಕರಣಗಳನ್ನು ಇತ್ಯರ್ಥಗೊಳಿಸುವ ನಿಟ್ಟಿನಲ್ಲಿ ಪೂರ್ವಭಾವಿ ಬೈಠೆಕ್ಗಳನ್ನು ನಡೆಸುತ್ತಿದ್ದು, ಆಸ್ತಿ ವಿವಾದಗಳನ್ನು ಒಳಗೊಂಡಂತೆ ಸಿವಿಲ್ ವ್ಯಾಜ್ಯಗಳು, ವಿಭಾಗದ ದಾವೆಗಳು, ಹಣ ವಸೂಲಾತಿ ದಾವೆಗಳು, ನಿರ್ದಿಷ್ಟ ಪರಿಹಾರ ಕಾಯ್ದೆಯಡಿ ದಾಖಲಿಸಿರುವ ದಾವೆಗಳು, (MVC) ಮೋಟಾರು ವಾಹನಗಳ ಪ್ರಕರಣಗಳು, MMRD ಪ್ರಕರಣಗಳು, ಜೀವನಾಂಶ ಪ್ರಕರಣ, ದಾಂಪತ್ಯ ಪುನರ್ ಸ್ಥಾಪನೆ ಪ್ರಕರಣಗಳು, ರಾಜಿ ಆಗಬಹುದಾದಂತಹ ಕ್ರಿಮಿನಲ್ ಪ್ರಕರಣಗಳನ್ನು ಮತ್ತು ಚೆಕ್ ಬೌನ್ಸ್ ಪ್ರಕರಣಗಳನ್ನು ರಾಜಿಗೆ ತೆಗೆದುಕೊಂಡು ಆಯಾ ನ್ಯಾಯಾಲಯಗಳಲ್ಲಿ ಲೋಕ್ ಅದಾಲತ್ ನ್ಯಾಯಾಲಯಗಳನ್ನು ರಚಿಸಿ ಪ್ರಕರಣಗಳನ್ನು ಇತ್ಯರ್ಥಗೊಳಿಸುವ ಪ್ರಯತ್ನ ಮಾಡಲಾಗುವುದು ಎಂದು ಆನಂದ್ ಎಂ ತಿಳಿಸಿದ್ದಾರೆ.
ಲೋಕ ಅದಾಲತ್ನಲ್ಲಿ ನ್ಯಾಯಾಲಯಗಳಲ್ಲಿ ಬಾಕಿ ಇರುವಂತಹ ಪ್ರಕರಣಗಳ ಜೊತೆಗೆ, ನ್ಯಾಯಾಲಯಕ್ಕೆ ದಾಖಲಾಗುವ ಮುನ್ನ ಅಂದರೆ, ವ್ಯಾಜ್ಯಪೂರ್ವ ಪ್ರಕರಣಗಳು (ಬ್ಯಾಂಕ್ ವಸೂಲಾತಿ ಪ್ರಕರಣಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ಕಾರ್ಮಿಕ ವಿವಾದ ಪ್ರಕರಣಗಳು,) ಇಂತಹ ಪ್ರಕರಣಗಳಿಗೆ ಸಂಬಂಧಿಸಿದಂತೆ ಉಭಯ ಪಕ್ಷಗಾರರಿಗೆ ನೋಟೀಸ್ ನೀಡಿ ಕರೆಸಿ ಪ್ರಾಧಿಕಾರದ ವತಿಯಿಂದ ಪೂರ್ವಭಾವಿ ಬೈಠಕ್ ನಡೆಸಿ ಅದಾಲತ್ ನಲ್ಲಿ ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ ಹಾಗೂ ಇಂತಹ ಪ್ರಕರಣಗಳಿಗೆ ನ್ಯಾಯಾಲಯಕ್ಕೆ ಶುಲ್ಕ ಪಾವತಿಸುವ ಅವಶ್ಯಕತೆ ಇರುವುದಿಲ್ಲ. ವಕೀಲರ ಮುಖಾಂತರ ಅಥವಾ ಖುದ್ದಾಗಿ ಪ್ರಾಧಿಕಾರಕ್ಕೆ ಭೇಟಿ ನೀಡಿ ಪ್ರಕರಣವನ್ನು ರಾಜಿಮಾಡಿಕೊಳ್ಳಬಹುದಾಗಿದೆ ಎಂದು ಆನಂದ್ ಎಂ ಮಾಹಿತಿ ನೀಡಿದ್ದಾರೆ.
ಈ ಬಾರಿಯ ಲೋಕ್-ಅದಾಲತ್ ನಲ್ಲಿ ಕಕ್ಷಿದಾರರ ಹೆಚ್ಚಿನ ಪ್ರಕರಣಗಳನ್ನು ಇತ್ಯರ್ಥಪಡಿಸಿ ಕಕ್ಷಿದಾರರಿಗೆ ಅನುಕೂಲವಾಗುವ ರೀತಿಯಲ್ಲಿ ನ್ಯಾಯಧಾನ ಮಾಡಬೇಕೆಂಬ ಇಚ್ಫೆಯಿಂದ ಸದರಿ ಪ್ರಕರಣಗಳನ್ನು ತೆಗೆದುಕೊಂಡಿದ್ದು, ಜನ ಸಾಮಾನ್ಯರು ಹಾಗೂ ಕಕ್ಷಿದಾರರು ಇದರ ಸದುಪಯೋಗವನ್ನು ಪಡೆದುಕೊಂಡು ಲೋಕ್ ಅದಾಲತ್ನಲ್ಲಿ ಭಾಗವಹಿಸಿ ತಮ್ಮ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳುವ ಮೂಲಕ ಲೋಕ್-ಅದಾಲತ್ ಅನ್ನು ಯಶಸ್ವಿಗೊಳಿಸುವಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಆನಂದ್ ಅವರು ಕೋರಿದ್ದಾರೆ.
Key words: National Lok Adalat, July 12, Mandya,