ಹಾಸನ,ಜುಲೈ, 27,2025 (www.justkannada.in): ನಾವು ಜಾರಿಗೆ ತಂದ ಐದು ಗ್ಯಾರಂಟಿಗಳ ಕಾರಣದಿಂದ ಕರ್ನಾಟಕ ರಾಜ್ಯ ತಲಾ ಆದಾಯದಲ್ಲಿ ದೇಶದಲ್ಲೇ ನಂಬರ್ ಒನ್ ಆಗಿದೆ. ಬಿಜೆಪಿಯವರಿಗೆ ಆರ್ಥಿಕತೆ ಅರ್ಥವಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.
ಅರಸೀಕೆರೆ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ ಫಲಾನುಭವಿಗಳ ಸಮಾವೇಶ ಉದ್ಘಾಟಿಸಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು.
ಕ್ಷೇತ್ರದ ಜನಪರ ಅಭಿವೃದ್ಧಿ ಕೆಲಸ ಮಾಡುವುದರಲ್ಲೇ ಇರಲಿ, ವಿಧಾನಸಭೆಯಲ್ಲಿ ಪಕ್ಷ ಮತ್ತು ಸರ್ಕಾರದ ಜನಪರ ಕಾರ್ಯಗಳನ್ನು ಸಮರ್ಥವಾಗಿ ಮಂಡಿಸುವುದರಲ್ಲೂ ಮುಂದಿದ್ದಾರೆ. ನಾಲ್ಕು ಬಾರಿ ಶಾಸಕರಾಗಿರುವ ಶಿವಲಿಂಗೇಗೌಡರು ಮುಂದಿನ ಚುನಾವಣೆಯಲ್ಲೂ ಗೆಲ್ಲುವುದು ಶತಸಿದ್ಧ ಎಂದು ವಿಶ್ವಾಸ ವ್ಯಕ್ತಪಡಿಸಿದರು.
148 ಕೋಟಿ ವೆಚ್ಚದಲ್ಲಿ 10 ಕೆರೆಗಳನ್ನು ತುಂಬಿಸುವ, ಕುಡಿಯುವ ನೀರು ಕೊಡುವ ಪುಣ್ಯದ ಕೆಲಸವನ್ನು ಶಿವಲಿಂಗೇಗೌಡರು ಮಾಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಿವರಿಸಿದರು.
ತಲಾ ಆದಾಯದಲ್ಲಿ ರಾಜ್ಯ ನಂಬರ್ ಒನ್
ಕರ್ನಾಟಕ ರಾಜ್ಯ ತಲಾ ಆದಾಯದಲ್ಲಿ ಇಡಿ ದೇಶದಲ್ಲಿ ನಂಬರ್ ಒನ್ ಆಗಿದೆ. ಇದಕ್ಕೆ ಪ್ರಮುಖ ಕಾರಣ ಜನರ ಕೊಳ್ಳುವ ಶಕ್ತಿ ಹೆಚ್ಚಾಗಿರುವುದು. ಕೊಳ್ಳುವ ಶಕ್ತಿ ಹೆಚ್ಚಾಗಲು ನಮ್ಮ ಗ್ಯಾರಂಟಿ ಯೋಜನೆಗಳು ಪ್ರಮುಖ ಕಾರಣ. ಬಿಜೆಪಿಯವರಿಗೆ ಆರ್ಥಿಕತೆ ಅರ್ಥ ಆಗೋದಿಲ್ಲ. ಅದಕ್ಕೇ ರಾಜ್ಯ ಸರ್ಕಾರದ ಬಳಿ ಅಭಿವೃದ್ಧಿಗೆ ಹಣ ಇಲ್ಲ ಎಂದು ಸುಳ್ಳು, ಅಪಪ್ರಚಾರ ಮಾಡುತ್ತಿದ್ದಾರೆ. ರಾಜಕೀಯ ಪ್ರೇರಿತ ಸುಳ್ಳುಗಳನ್ನು ಹೇಳಿ ರಾಜ್ಯದ ಜನರ ದಾರಿ ತಪ್ಪಿಸುವ ಯತ್ನ ಮಾಡಿದರೂ ರಾಜ್ಯದ ಜನತೆ ಯಾಮಾರುವುದಿಲ್ಲ ಎಂದರು.
ಸರ್ಕಾರದ ಸಾಧನಾ ಸಮಾವೇಶದಲ್ಲಿ ಲಕ್ಷ ಲಕ್ಷ ಜನ ಫಲಾನುಭವಿಗಳು ಸೇರಿ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುತ್ತಿದ್ದಾರೆ. ಇದು ನುಡಿದಂತೆ ನಡೆದ ನಮ್ಮ ಸರ್ಕಾರದ ಸಾಧನೆ ಎಂದರು.
ನಾವು ಅಭಿವೃದ್ಧಿ ಯೋಜನೆಗಳಿಗೆ 1.20 ಲಕ್ಷ ಕೋಟಿ ಖರ್ಚು ಮಾಡುವುದರ ಜೊತೆಗೆ ಗ್ಯಾರಂಟಿ ಯೋಜನೆಗಳಿಗೆ 56 ಸಾವಿರ ಕೋಟಿ ಖರ್ಚು ಮಾಡಿ ಜನರ ಮನೆ ಬಾಗಿಲಿಗೆ ಅಭಿವೃದ್ಧಿ ಕಾರ್ಯಗಳನ್ನು ತಲುಪಿಸಿದ್ದೇವೆ ಎಂದು ವಿವರಿಸಿದರು.
ಶಿವಲಿಂಗೇಗೌಡರಿಗೆ ರಾಜಕೀಯ ಭವಿಷ್ಯವಿದೆ: ಮಂತ್ರಿಯಾಗುವ ಎಲ್ಲಾ ಅರ್ಹತೆ ಹೊಂದಿದ್ದಾರೆ
ಶಿವಲಿಂಗೇಗೌಡರಿಗೆ ರಾಜಕೀಯ ಭವಿಷ್ಯವಿದೆ. ಮಂತ್ರಿಯಾಗುವ ಎಲ್ಲಾ ಅರ್ಹತೆ ಹೊಂದಿದ್ದಾರೆ. ಜೊತೆಗೆ ಕ್ಷೇತ್ರದ ಜನರ ಆಶೀರ್ವಾದವೂ ಗಟ್ಟಿಯಾಗಿದೆ. ಈ ಕಾರಣಕ್ಕೇ ನಾಲ್ಕು ಬಾರಿ ಗೆದ್ದಿರುವ ಶಿವಲಿಂಗೇಗೌಡರು ಮುಂದಿನ ಬಾರಿಯೂ ಗೆದ್ದು ಬರುತ್ತಾರೆ. ಆದರೆ ಕೆಲವೊಂದು ರಾಜಕೀಯ ಸಂಗತಿಗಳನ್ನು ಬಹಿರಂಗವಾಗಿ ಚರ್ಚಿಸಲು ಸಾಧ್ಯವಿಲ್ಲ ಎಂದರು.
ರಾಹುಲ್ ಗಾಂಧಿಯವರಿಗೆ ಒಬಿಸಿ ಸಮುದಾಯಗಳು ಅರ್ಥವಾಗಿದ್ದಾರೆ
ದೆಹಲಿಯಲ್ಲಿ ನಡೆದ ಹಿಂದುಳಿದ ಸಮುದಾಯಗಳ ಸಮ್ಮೇಳನದಲ್ಲಿ ರಾಹುಲ್ ಗಾಂಧಿಯವರು “ಹಿಂದುಳಿದ ಸಮುದಾಯಗಳ ಬಗ್ಗೆ ತಮ್ಮ ಗ್ರಹಿಕೆಯನ್ನು ಸ್ಪಷ್ಟಪಡಿಸಿದ್ದಾರೆ”. ಹಿಂದುಳಿದ ವರ್ಗಗಳು, ಮಹಿಳೆಯರು, ದಲಿತರು, ಶೋಷಿತರು, ಎಲ್ಲಾ ಜಾತಿಯ ಬಡವರ ಬದುಕಿಗೆ ಬೇಕಾದ ಕಾರ್ಯಕ್ರಮಗಳನ್ನು ನಮ್ಮ ಸರ್ಕಾರ ರೂಪಿಸಿದೆ ಎಂದು ಸಿಎಂ ಸಿದ್ದರಾಮಯ್ಯ ವಿವರಿಸಿದರು.
ಕಾಂಗ್ರೆಸ್ ಸಾಮಾಜಿಕ ನ್ಯಾಯ ಮತ್ತು ಬಡವರ ಪ್ರಗತಿಗಾಗಿ , ಸಂವಿಧಾನದ ಮೌಲ್ಯಗಳ ಈಡೇರಿಕೆಗಾಗಿ ಕಾರ್ಯಕ್ರಮ ರೂಪಿಸಿ ಜಾರಿ ಮಾಡುವ ಏಕೈಕ ಪಕ್ಷ. ದೇಶದಲ್ಲಿ, ರಾಜ್ಯದಲ್ಲಿ ಸಾಮಾಜಿಕ ನ್ಯಾಯದ ಕಾರ್ಯಗಳನ್ನು ಜಾರಿ ಮಾಡಿರುವುದು ಕಾಂಗ್ರೆಸ್ ಮಾತ್ರ. ಚರಿತ್ರೆ ನೋಡಿ ಎಂದು ಬಿಜೆಪಿಗೆ ಸವಾಲು ಹಾಕಿದರು.
Key words: Karnataka , No.1, country, Per capita income, CM Siddaramaiah