ಬೆಂಗಳೂರು,ಜುಲೈ,30,2025 (www.justkannada.in): ಲೋಕಸಭೆ ಚುನಾವಣೆಯಲ್ಲಿ ಒಂದು ಕ್ಷೇತ್ರದಲ್ಲಿ ಚುನಾವಣಾ ಅಕ್ರಮ ನಡೆದಿದೆ ಎಂದು ಆರೋಪಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬೆಂಗಳೂರಿನಲ್ಲಿ ಪಾದಯಾತ್ರೆಯಲ್ಲಿ ಭಾಗವಹಿಸಲಿದ್ದು ಈ ಬಗ್ಗೆ ವಿಪಕ್ಷ ನಾಯಕ ಆರ್.ಅಶೋಕ್ ಟ್ವೀಟ್ ಮಾಡಿ ಕಿಡಿಕಾರಿದ್ದಾರೆ.
ಈ ಕುರಿತು ಟ್ವಿಟ್ ಮಾಡಿರುವ ಆರ್.ಅಶೋಕ್, “ಕೈ”ಲಾಗದವನು ಮೈಪರಚಿಕೊಂಡ ಎಂಬಂತೆ ಕೈಲಾಗದ ರಾಹುಲ್ ಗಾಂಧಿ ಚುನಾವಣಾ ಪ್ರಕ್ರಿಯೆ ಬಗ್ಗೆ ಕ್ಯಾತೆ ತೆಗೆಯುತ್ತಿದ್ದಾರೆ. ಮೂರು ಲೋಕಸಭಾ ಚುನಾವಣೆಗಳಲ್ಲಿ ಮೂರಂಕಿ ದಾಟಲಾಗದೆ, ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಕಾಂಗ್ರೆಸ್ ಪಕ್ಷವನ್ನು ಸಂಪೂರ್ಣವಾಗಿ ಮುಳುಗಿಸಿ ಸೋತು ಸುಣ್ಣವಾಗಿರುವ ಬಾಲಕ ಬುದ್ಧಿ ರಾಹುಲ್ ಗಾಂಧಿ ಅವರು ಈಗ ಕರ್ನಾಟಕದಲ್ಲಿ ಚುನಾವಣಾ ಆಯೋಗದ ವಿರುದ್ಧ ಪಾದಯಾತ್ರೆ ಮಾಡುತ್ತಾರಂತೆ ಎಂದು ಲೇವಡಿ ಮಾಡಿದ್ದಾರೆ.
ಮಿಸ್ಟರ್ ರಾಹುಲ್ ಗಾಂಧಿ ಅವರೇ, ಯಾವ ಪುರುಷಾರ್ಥಕ್ಕಾಗಿ ಈ ಪಾದಯಾತ್ರೆ? ಹರಿಯಾಣ, ಮಹಾರಾಷ್ಟ್ರ, ದೆಹಲಿ ನಂತರ ಈಗ ಬಿಹಾರದಲ್ಲೂ ಹೀನಾಯ ಸೋಲಿನ ಮುನ್ಸೂಚನೆ ಸಿಕ್ಕಿದೆಯೇ? ಇಷ್ಟಕ್ಕೂ ನಿಮಗೆ ಕರ್ನಾಟಕ ಈಗ ನೆನಪಾಯಿತೇ? ಕಳೆದ 24 ತಿಂಗಳಲ್ಲಿ 2,000ಕ್ಕೂ ಹೆಚ್ಚು ರೈತರು ಆತ್ಮಹತ್ಯೆಗೆ ಶರಣಾದಾಗ ಬರಲಿಲ್ಲ. ಸರ್ಕಾರಿ ಆಸ್ಪತ್ರೆಗಳಲ್ಲಿ ಕಳಪೆ ಔಷಧಿ ಪೂರೈಕೆಯಿಂದ 500ಕ್ಕೂ ಹೆಚ್ಚು ಗರ್ಭಿಣಿ, ಬಾಣಂತಿ ಮಹಿಳೆಯರು, ನವಜಾತ ಶಿಶುಗಳು ಮರಣ ಹೊಂದಿದಾಗ ಬರಲಿಲ್ಲ ಎಂದು ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.
ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳದಿಂದ 50ಕ್ಕೂ ಹೆಚ್ಚು ಬಡವರು ಆತ್ಮಹತ್ಯೆ ಮಾಡಿಕೊಂಡಾಗ ಬರಲಿಲ್ಲ. ಐಪಿಎಲ್ ವಿಜಯೋತ್ಸವದ ಸಂದರ್ಭದಲ್ಲಿ ಸರ್ಕಾರದ ಎಡವಟ್ಟಿನಿಂದ 11 ಜನ ಅಮಾಯಕ ಯುವಕರು ಸತ್ತಾಗ ಬರಲಿಲ್ಲ. ಈಗ ನಾಳೆ ಎದುರಾಗಲಿರುವ ಬಿಹಾರ ಚುನಾವಣಾ ಸೋಲಿಗೆ ಕುಂಟು ನೆಪ ಸೃಷ್ಟಿಸಿ, ತಮ್ಮ ಅಸಾಮರ್ಥ್ಯಕ್ಕೆ, ವೈಫಲ್ಯಕ್ಕೆ anticipatory bail ತೆಗೆದುಕೊಳ್ಳೋಕೆ ಬರುತ್ತಿದ್ದೀರಲ್ಲ. ನಿಮ್ಮ ಕಾಂಗ್ರೆಸ್ ಪಕ್ಷದ ಲಜ್ಜೆಗೇಡಿತನಕ್ಕೆ ಕನ್ನಡಿಗರು ರೋಸಿ ಹೋಗಿದ್ದಾರೆ. ಅದು ಯಾವ ಮುಖ ಇಟ್ಟುಕೊಂಡು ಕರ್ನಾಟಕಕ್ಕೆ ಬರುತ್ತಿದ್ದೀರೋ ನಾಕಾಣೆ ಎಂದು ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ.
Key words: Rahul Gandhi, padayatra, Bangalore, R.Ashok