ಕೊಪ್ಪಳ, ಅಕ್ಟೋಬರ್ 9,2025 (www.justkannada.in): ಡಿಸಿಎಂ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಬೇಕು. ಆಗ್ತಾರೆ ಎಂದು ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದು ಈ ಮೂಲಕ ಮತ್ತೆ ಸಿಎಂ ಬದಲಾವಣೆ ಬಗ್ಗೆ ಮಾತನಾಡಿದ್ದಾರೆ.
ಈ ಕುರಿತು ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಇಕ್ಬಾಲ್ ಹುಸೇನ್, ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಬೇಕು ಎಂಬುದೇ ನನ್ನ ಅಭಿಲಾಷೆ. ಅವರು ಸಿಎಂ ಆಗಲಿದ್ದಾರೆ. ನನ್ನ ಅಭಿಪ್ರಾಯವನ್ನು ಕಾಂಗ್ರೆಸ್ ಹೈಕಮಾಂಡ್ಗೂ ತಿಳಿಸಿದ್ದೇನೆ. ಇದು ನಮ್ಮ ಮನಸ್ಸಿನ ಮಾತು. ಇದಕ್ಕಾಗಿ ಹೋರಾಟ ಮಾಡುತ್ತೇವೆ. ಮಾಧ್ಯಮ ಮುಂದೆ ಮಾತಾಡದಂತೆ ಎಐಸಿಸಿ ಸೂಚನೆ ನೀಡಿದೆ.
ಕಾಂಗ್ರೆಸ್ ಶಿಸ್ತಿನ ಪಕ್ಷ, ಹೈಕಮಾಂಡ್ ಸೂಕ್ತ ತೀರ್ಮಾನ ತೆಗೆದುಕೊಳ್ಳಲಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಎಲ್ಲರೂ ಸೇರಿ ಸೂಕ್ತ ತೀರ್ಮಾನ ತೆಗೆದುಕೊಳ್ಳುತ್ತಾರೆ. ನನ್ನ ಅನಿಸಿಕೆ, ಅಭಿಲಾಷೆಯನ್ನು ಹೈಕಮಾಂಡ್ ಬಳಿ ಸ್ಪಷ್ಟವಾಗಿ ಹೇಳಿದ್ದೇನೆ. ಇದಕ್ಕೆ ನಾನು ಬದ್ಧನಾಗಿದ್ದೇನೆ, ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದು ಇಕ್ಬಾಲ್ ಹುಸೇನ್ ತಿಳಿಸಿದರು.
Key words: D.K. Shivakumar, become, CM, Congress MLA