ಬೆಲೆ ಕುಸಿತ: ರೈತರ ನೆರವಿಗೆ ಧಾವಿಸಲು ಪ್ರಧಾನಿ ಮೋದಿಗೆ ಮನವಿ- ಸಿಎಂ ಸಿದ್ದರಾಮಯ್ಯ

ಬೆಂಗಳೂರು,ನವೆಂಬರ್,28,2025 (www.justkannada.in): ರಾಜ್ಯದಲ್ಲಿ ಮೆಕ್ಕೆಜೋಳ ಹಾಗೂ ಹೆಸರುಕಾಳು ಬೆಲೆ ಕುಸಿತ ಹಿನ್ನೆಲೆಯಲ್ಲಿ ರೈತರ ಸಮಸ್ಯೆ ಬಗೆಹರಿಸಲು ಮನವಿ ಮಾಡಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಾಜ್ಯ ಸರ್ಕಾರದ ವತಿಯಿಂದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ ಪತ್ರ ಸಲ್ಲಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿರುವ ಸಿಎಂ ಸಿದ್ದರಾಮಯ್ಯ, ರಾಜ್ಯದ ಮೆಕ್ಕೆಜೋಳ ಹಾಗೂ ಹೆಸರುಕಾಳು ಬೆಳೆಗಾರರು ಮಾರುಕಟ್ಟೆ ಬೆಲೆ ಕುಸಿತದಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೇಂದ್ರ ಸರ್ಕಾರವು ತಕ್ಷಣ ಮಧ್ಯಪ್ರವೇಶ ಮಾಡಿ ಕನಿಷ್ಠ ಬೆಂಬಲ ಬೆಲೆ, ಎಥೆನಾಲ್ ಹಂಚಿಕೆಯಲ್ಲಿನ ಸಮಸ್ಯೆಗಳನ್ನು ಸರಿಪಡಿಸಿ, ರೈತರಿಗೆ ದೊರೆಕಬೇಕಾದ ನ್ಯಾಯಯುತ ಬೆಲೆ ಸಿಗುವಂತೆ ಮಾಡಬೇಕೆಂದು ಪ್ರಧಾನಿ ಮೋದಿ ಅವರಿಗೆ ಪತ್ರದ ಮೂಲಕ ಒತ್ತಾಯಿಸಿದ್ದೆ.

ಇಂದು ಪ್ರಧಾನಿಗಳು ಉಡುಪಿಗೆ ಭೇಟಿ ನೀಡಲು ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ವೇಳೆ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಮೋದಿಯವರನ್ನು ರಾಜ್ಯಕ್ಕೆ ಬರಮಾಡಿಕೊಂಡು, ನಮ್ಮ ಮನವಿ ಪತ್ರವನ್ನು ಅವರಿಗೆ ನೀಡಿದ್ದಾರೆ.

ಪ್ರಧಾನಿ ಮೋದಿ ಅವರು ತಕ್ಷಣ ರಾಜ್ಯದ ರೈತರ ಕಷ್ಟವನ್ನು ಅರ್ಥೈಸಿಕೊಂಡು, ರೈತರು ಎದುರಿಸುತ್ತಿರುವ ಸಮಸ್ಯೆಗಳನ್ನು ಬಗೆಹರಿಸುತ್ತಾರೆ ಎಂದು ಭಾವಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

Key words: CM Siddaramaiah, appeals, PM Modi, farmers