ಮಂಡ್ಯ ಡಿಸೆಂಬರ್,5,2025 (www.justkannada.in): ರೈತರು ತಮ್ಮ ವ್ಯವಸಾಯ ಪದ್ದತಿಯಲ್ಲಿ ಸಮಗ್ರ ಕೃಷಿ ಪದ್ಧತಿಯನ್ನು ಅನುಸರಿಸಬೇಕು ಹಾಗೂ ಉತ್ಪಾದಿಸಿದ ಉತ್ಪನ್ನಗಳನ್ನು ಮೌಲ್ಯವರ್ಧನೆ ಮಾಡಬೇಕು ಎಂದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಹೇಳಿದರು.
ಇಂದು ಕೃಷಿ ಮತ್ತು ತೋಟಗಾರಿಕೆ ಇಲಾಖೆ, ಪಶು ಸಂಗೋಪನೆ ಮತ್ತು ಪಶುವೈದ್ಯಕೀಯ ಸೇವೆಗಳು ಜಲಾನಯನ ಅಭಿವೃದ್ಧಿ ಇಲಾಖೆ, ರೇಷ್ಮೆ, ಅರಣ್ಯ, ಮೀನುಗಾರಿಕೆ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ನಬಾರ್ಡ್ ಇವರುಗಳ ಸಂಯುಕ್ತಾಶ್ರಯದಲ್ಲಿ ನಗರದ ವಿ.ಸಿ ಫಾರಂ ಆವರಣದಲ್ಲಿ ಆಯೋಜಿಸಲಾಗಿದ್ದ “ಕೃಷಿ ಮೇಳ 2025” ಸಮಗ್ರ ಕೃಷಿಯಿಂದ ಸುಸ್ಥಿರತೆ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದರು.
ಮಂಡ್ಯದಲ್ಲಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯ ಸ್ಥಾಪಿಸಲು ನನ್ನ ಮುಂದೆ ಮೊದಲು ಬೇಡಿಕೆ ಇಟ್ಟವರು ಕೃಷಿ ಸಚಿವರು, ಮಂಡ್ಯ ಮೈಸೂರು ಚಾಮರಾಜನಗರ ಕೊಡಗು ಭಾಗದ ರೈತರಿಗಾಗಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯ ಅಗತ್ಯವಿದೆ ಎಂದು ನನಗೂ ಸಹ ತಿಳಿಯಿತು. ನಂತರ ಸದರಿ ವಿಚಾರವನ್ನು ಕ್ಯಾಬಿನೆಟ್ ನಲ್ಲಿ ಚರ್ಚೆ ಮಾಡಿ ಎಲ್ಲಾ ಸಚಿವರ ಒಪ್ಪಿಗೆ ಪಡೆದು ಮಂಡ್ಯದಲ್ಲಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯವನ್ನು ಸ್ಥಾಪಿಸಲಾಯಿತು ಎಂದು ಹೇಳಿದರು.
ಮಂಡ್ಯ ಭಾಗದ 5 ಜಿಲ್ಲೆಗಳ ಪ್ರಮುಖ ಬೆಳೆಗಳ ಪ್ರಾತ್ಯಕ್ಷಿಕೆಗಳನ್ನು ಕೃಷಿ ಮೇಳದಲ್ಲಿ ಆಯೋಜಿಸಲಾಗಿದೆ. ಕೃಷಿ ವಿಜ್ಞಾನ ವಿಶ್ವವಿದ್ಯಾನಿಲಯಗಳು ಅಭಿವೃದ್ಧಿಪಡಿಸಿದ ತಳಿಗಳು ಮತ್ತು ತಂತ್ರಜ್ಞಾನವನ್ನು ತಮ್ಮಲ್ಲಿಗೆ ಇಟ್ಟುಕೊಂಡರೆ ಪ್ರಯೋಜನವಿಲ್ಲ ಅದನ್ನು ರೈತರಿಗೆ ತಲುಪಿಸಬೇಕು ಆಗ ಮಾತ್ರ ರೈತರು ಆರ್ಥಿಕವಾಗಿ ಸಬಲರಾಗಲು ಸಾಧ್ಯವಾಗುತ್ತದೆ. ಭಾರತ ಕೃಷಿ ಪ್ರಧಾನ ಜಿಲ್ಲೆ ಇತ್ತೀಚಿನ ದಿನಗಳಲ್ಲಿ ಕೃಷಿಕರ ಸಂಖ್ಯೆ ಇಳಿಮುಖವಾಗಿದೆ ಎಂದು ಅಭಿಪ್ರಾಯಪಟ್ಟರು.
ಮಂಡ್ಯ ಕೃಷಿ ಪ್ರಧಾನವಾದ ಜಿಲ್ಲೆ ನಾನು ರಾಜಕೀಯಕ್ಕೆ ಬರುವ ಮೊದಲು ಸಹ ಕೃಷಿಕನಾಗಿದ್ದೆ. ಮೈಸೂರಿನ ರೈತ ಸಂಘದ ಮೊದಲ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸಿದ್ದೇನೆ. ಕೃಷಿಯನ್ನು ವೈಜ್ಞಾನಿಕ ವಿಧಾನದಲ್ಲಿ ಮಾಡಿದಾಗ ಕೃಷಿಯಿಂದ ಹೆಚ್ಚಿನ ಲಾಭಗಳಿಸಬಹುದು. ರೈತರು ತಾವು ಬೆಳೆದ ಬೆಳೆಗಳನ್ನು ಮೌಲ್ಯವರ್ತನೆ ಮಾಡಬೇಕು ಎಂದು ಹೇಳಿದರು.
ಇತ್ತೀಚಿನ ದಿನಗಳಲ್ಲಿ ಕೃಷಿ ಕಾರ್ಯಕ್ಕೆ ಮಾನವ ಸಂಪನ್ಮೂಲ ಕಡಿಮೆ ಇದೆ ರೈತರು ಆಧುನಿಕ ಯಂತ್ರೋಪಕರಣಗಳನ್ನು ಬೆಳೆಸಿ ಕೃಷಿ ಮಾಡಬೇಕು ಇದರಿಂದ ಸಮಯ ಮತ್ತು ಹಣ ಎರಡು ಉಳಿತಾಯವಾಗುತ್ತದೆ. ಸರ್ಕಾರ ಕೃಷಿ ಯಂತ್ರೋಪಕರಣಗಳು ಸೇರಿದಂತೆ ಅನೇಕ ಸವಲತ್ತುಗಳನ್ನು ನೀಡುತ್ತಾ ಬಂದಿದೆ ಎಂದು ಹೇಳಿದರು.
ಅಂತರಾಷ್ಟ್ರೀಯ ಸ್ಯಾಂಡ್ವಿಚ್ ಸ್ನಾತಕೋತರ ಪದವಿ ಸ್ಥಾಪನೆಗೆ ಬೇಡಿಕೆ
ಮಂಡ್ಯ ವಿಜ್ಞಾನಿಗಳ ವಿಶ್ವವಿದ್ಯಾನಿಲಯದಲ್ಲಿ ಅಂತರಾಷ್ಟ್ರೀಯ ಸ್ಯಾಂಡ್ವಿಚ್ ಸ್ನಾತಕೋತರ ಪದವಿಯನ್ನು ತೆರೆಯಲು ಕೃಷಿ ವಿಜ್ಞಾನಿಗಳು ಬೇಡಿಕೆ ಇಟ್ಟಿದ್ದಾರೆ ಸದರಿಯ ಸ್ನಾತಕೋತರ ಪದವಿಯನ್ನು ತೆರೆಯಲು ಪ್ರಯತ್ನ ಪಡುತ್ತೇನೆ. ಕೃಷಿಯ ಕುರಿತಾಗಿ ನನಗೆ ಅಪಾರವಾದ ಕಾಳಜಿ ಇದೆ ನಮ್ಮ ದೇಶದ ಜಿಡಿಪಿಗೆ ಕೃಷಿ ವಲಯ ಹೆಚ್ಚು ಶ್ರಮಿಸುತ್ತಿದೆ. ಎಂದರು.
ಎಲ್ಲ ಜಾತಿ ಧರ್ಮಗಳಲ್ಲೂ ಬಡವರು ಹಾಗೂ ಕೃಷಿಕರು ಇದ್ದಾರೆ ಎಲ್ಲರಲ್ಲೂ ಸಮಾನತೆ ಬರಬೇಕು. ಡಾ. ಬಿ.ಆರ್ ಅಂಬೇಡ್ಕರ್ ಅವರು ಹೇಳಿದಂತೆ ಎಲ್ಲಾ ಸಮಾಜದಲ್ಲೂ ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಸಮಾನತೆ ಬಂದಾಗ ಮಾತ್ರ ಅಸಮಾನತೆಯನ್ನು ಓಡಿಸಬಹುದು. ಸಮಾಜದಲ್ಲಿ ಅನ್ಯಾಯ ಕೊಳಗಾದ ಶೋಷಿತ ಸಮುದಾಯಗಳ ಮಹಿಳೆಯರ, ದೀನ ದುರ್ಬಲರನ್ನು ಸರಿದೂಗಿಸಲು ನಮ್ಮ ಸರ್ಕಾರ ಅನೇಕ ಕಾರ್ಯಕ್ರಮಗಳನ್ನು ನೀಡುತ್ತಾ ಬಂದಿದ್ದೇವೆ ಎಂದು ಹೇಳಿದರು.
ನಮ್ಮ ಸರ್ಕಾರ ರೈತರ ಪರವಾಗಿ ಇರುತ್ತದೆ ರೈತರನ್ನು ಸಬಲೀಕರಣ ಮಾಡುವುದು ನಮ್ಮ ಉದ್ದೇಶ. ರಾಜ್ಯದ ಸರ್ಕಾರಿ ಸ್ವಾಮ್ಯದಲ್ಲಿರುವ ಏಕೈಕ ಸಕ್ಕರೆ ಕಾರ್ಖಾನೆ, ಮೈ ಶುಗರ್ ಅನ್ನು ಉಳಿಸಿಕೊಳ್ಳಲು ರಾಜ್ಯ ಸರ್ಕಾರ 50 ಕೋಟಿ ಹಣವನ್ನು ನೀಡಿದೆ. ಮೈ ಶುಗರ್ ಸಕ್ಕರೆ ಕಾರ್ಖಾನೆಯ ವಿದ್ಯುತ್ ಬಿಲ್ಲನ್ನು ಮನ್ನಾ ಮಾಡಿದೆ. ಮೈ ಶುಗರ್ ಕಾರ್ ಕಾರ್ಖಾನೆ ಹೊಸ ಬಾಯ್ಲಿಂಗ್ ಹೌಸ್ ನೀಡಲಾಗುವುದು ಎಂದರು.
ನಮ್ಮ ರಾಜ್ಯದ ಕಬ್ಬು ಹಾಗೂ ಹೊರ ರಾಜ್ಯದ ಕಬ್ಬಿನ ಗುಣಮಟ್ಟದಲ್ಲಿ ವ್ಯತ್ಯಾಸವಿದೆ, ಮಂಡ್ಯ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯ ಇದರ ಕುರಿತಾಗಿ ಸಂಶೋಧನೆಯನ್ನು ನಡೆಸಿ ಕಬ್ಬಿನ ಗುಣಮಟ್ಟ ಹೆಚ್ಚಿಸಿ ಎಂದು ಹೇಳಿದರು.
ಮಂಡ್ಯ ಜಿಲ್ಲಾ ಉಸ್ತುವಾರಿ ಹಾಗೂ ಕೃಷಿ ಸಚಿವ ಎನ್ ಚೆಲುವರಾಯಸ್ವಾಮಿ ಅವರು ಮಾತನಾಡಿ. ಪ್ರತಿ ವರ್ಷ ವಿ.ಸಿ ಫಾರಂ ನಲ್ಲಿ ಕೃಷಿ ಮೇಳ ಆಯೋಜನೆ ಮಾಡಿಕೊಂಡು ಬರಲಾಗುತ್ತಿದೆ. ಸದರಿ ವರ್ಷ ಮಂಡ್ಯ ವಿಶ್ವವಿದ್ಯಾಲಯ ಸ್ಥಾಪನೆಯಾದ ನಂತರ ಮೊದಲ ಬೃಹತ್ ಕೃಷಿ ಮೇಳವನ್ನು ಆಯೋಜಿಸಲಾಗಿದೆ. ಕೃಷಿ ಮೇಳ 2025ರಲ್ಲಿ ಹೆಚ್ಚಿನ ಕೃಷಿ ತಳಿಗಳು, ತಂತ್ರಜ್ಞಾನಗಳನ್ನು ಆಧುನಿಕ ಯಂತ್ರೋಪಕರಣಗಳನ್ನು ಮೇಳದಲ್ಲಿ ಇರಿಸಲಾಗಿದೆ ಎಂದು ಹೇಳಿದರು.
ಬೆಂಗಳೂರು ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ಆಯೋಜಿಸಲಾಗಿದ್ದ ಕೃಷಿ ಮೇಳದಲ್ಲಿ ಸುಮಾರು 50 ಲಕ್ಷಕ್ಕೂ ಹೆಚ್ಚು ಜನ ಭಾಗಿಯಾಗಿ ಯಶಸ್ವಿಗೊಳಿಸಿದರು. ಮುಂದಿನ ದಿನಗಳಲ್ಲಿ ಮಂಡ್ಯ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯ ಕೃಷಿ ಮೇಳದಲ್ಲಿ ದೊಡ್ಡ ಮಟ್ಟದಲ್ಲಿ ಜನರು ಭಾಗಿಯಾಗುತ್ತಾರೆ ಎಂದು ಹೇಳಿದರು.
1939 ರಲ್ಲಿ ಮೊದಲು ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು 630 ಎಕರೆ ಜಾಗದಲ್ಲಿ ಮಂಡ್ಯದಲ್ಲಿ ಕೃಷಿ ವಿಜ್ಞಾನಿಗಳ ಸಂಶೋಧನಾ ಕೇಂದ್ರವನ್ನು ತೆರೆದರು. ನಂತರ ರಾಜ್ಯದ 4 ಭಾಗದಲ್ಲಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯವನ್ನು ಸ್ಥಾಪಿಸಲಾಯಿತು. ರಾಜ್ಯದ ಎಲ್ಲಾ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ಉತ್ತಮ ಕೊಡುಗೆ ಹಾಗೂ ಕಾರ್ಯ ಮಾಡುತ್ತ ಮುಂದೆ ಸಾಗುತ್ತಿವೆ ಎಂದು ಅಭಿಪ್ರಾಯಪಟ್ಟರು.
ಮಂಡ್ಯ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ರಾಜ್ಯದ 5ನೇ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯವಾಗಿ ಹೊರಹೊಮ್ಮಿದೆ. ಮಂಡ್ಯ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ಸ್ಥಾಪನೆಯಾದ ಮೊದಲ ವರ್ಷದಲ್ಲೇ ಯು.ಜಿ.ಸಿ ಮಾನ್ಯತೆ ಪಡೆದಿದೆ. ಶಿವಮೊಗ್ಗ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯಕ್ಕೆ 2008 ರಲ್ಲಿ ಅನುಮತಿ ದೊರೆತಿತ್ತು ಆದರೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾದ 2013 ರ ಅವಧಿಯಲ್ಲಿ ಶಿವಮೊಗ್ಗ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯವನ್ನು ಸ್ಥಾಪಿಸಲಾಯಿತು ಎಂದು ಹೇಳಿದರು.
ಬೆಳಗಾವಿಯಲ್ಲಿ ಆದ ಬೆಳೆ ನಾಶಕ್ಕೆ ಎನ್ ಡಿ ಆರ್ ಎಫ್ ಪರಿಹಾರದ ಮೊತ್ತದ ಜೊತೆಗೆ ರಾಜ್ಯ ಸರ್ಕಾರ ಪರಿಹಾರವನ್ನು ನೀಡಿತು. ರಾಜ್ಯ ಕಬ್ಬು ಬೆಳೆಗಾರರ ಆರ್ಥಿಕ ಅಭಿವೃದ್ಧಿಗಾಗಿ ಟನ್ ಕಬ್ಬಿಗೆ ರೂ.50 ಅನ್ನು ಸರ್ಕಾರ ನೀಡುತ್ತಿದೆ. ರಾಜ್ಯ ಸರ್ಕಾರ ಬಡವರು, ರೈತರು, ಶ್ರಮಿಕರು, ಮಹಿಳೆಯರು ಮತ್ತು ಶೋಷಿತ ಸಮುದಾಯದ ಅಭಿವೃದ್ಧಿಗಾಗಿ ಶ್ರಮಿಸುತ್ತಿದ್ದಾರೆ ಎಂದರು.
ರಾಜ್ಯ ಸರ್ಕಾರ ರಾಜ್ಯದ ಜನರನ್ನು ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಸದೃಢರನ್ನಾಗಿ ಮಾಡಲು ಅನೇಕ ಯೋಜನೆಗಳನ್ನು ನೀಡಿಕೊಂಡು ಬರುತ್ತಿದೆ. ರೈತರನ್ನು ಆರ್ಥಿಕವಾಗಿ ಸಫಲರನ್ನಾಗಿಸಲು ಕೃಷಿ ಮೇಳವನ್ನು ಆಯೋಜಿಸಲಾಗಿದೆ. ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯದ ಮಹತ್ವ ಎಲ್ಲರಿಗೂ ಮುಂದಿನ ದಿನಗಳಲ್ಲಿ ತಿಳಿಯುತ್ತದೆ ಎಂದು ತಿಳಿಸಿದರು.
ಫಿಲಿಪೈನ್ಸ್ ಅಂತರಾಷ್ಟ್ರೀಯ ರೈಸ್ ರಿಸರ್ಚ್ ಸೆಂಟರ್ ನೊಂದಿಗೆ ಒಡಂಬಡಿಕೆ ಮಾಡಿಕೊಂಡು ರೋಗನಿರೋಧಕ ಭತ್ತದ ತಳಿಗಳನ್ನು ನಮ್ಮಲ್ಲಿ ಬೆಳೆಯಲಾಗುವುದು. ಮಂಡ್ಯ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯದ ಪೀಠೋಪಕರಣಗಳ ಅಭಿವೃದ್ಧಿಗಾಗಿ ರೂ 100 ಕೋಟಿಯನ್ನು ಮುಖ್ಯಮಂತ್ರಿಗಳು ಮಂಜೂರು ಮಾಡಿದ್ದಾರೆ. ಜಿಲ್ಲೆಯ ಜನತೆ ಹೇಗೆ ಕೃಷಿಯನ್ನು ಲಾಭದಾಯಕವಾಗಿ ಮಾಡಬೇಕು ಎಂಬುದರ ಕುರಿತಾಗಿ ಕೃಷಿ ಮೇಳ ಆಯೋಜಿಸಲಾಗಿದೆ. ರೈತರು ಇದರಲ್ಲಿ ಭಾಗವಹಿಸಿ ಕೃಷಿ ಮೇಳದ ಸದುಪಯೋಗವನ್ನು ಪಡೆದುಕೊಳ್ಳಬಹುದಾಗಿದೆ ಎಂದರು.
ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಈ ಭಾಗಕ್ಕೆ ವಿಶ್ವವಿದ್ಯಾಲಯ ನೀಡಿರುವುದಕ್ಕೆ ಮುಖ್ಯಮಂತ್ರಿಗಳಿಗೆ ಕೃತಜ್ಞತೆ ತಿಳಿಸಿದರು. ಮಣ್ಣಿನ ಗುಣಮಟ್ಟವನ್ನು ಕಾಪಾಡುವ ಹಾಗೂ ಕಡಿಮೆ ನೀರು ಬಳಕೆ ಮಾಡಿ ಹೆಚ್ಚು ಇಳುವರಿ ಪಡೆಯಬಹುದು. ಕೃಷಿ ಮೇಳದಲ್ಲಿ ಅನೇಕ ಹೊಸ ತಳಿಯ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತಿದೆ. ಇದನ್ನು ರೈತರು ತಮ್ಮ ಬೇಸಾಯದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.
ರೈತರ ಜೀವನವನ್ನು ಸುಧಾರಿಸುವುದು ಬಹಳ ಮುಖ್ಯ. ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಹೆಚ್ಚಿನ ಪ್ರಶಸ್ತ್ಯ ನೀಡಬೇಕು . ರೈತರು ಸಮಗ್ರ ಕೃಷಿ ಜೊತೆಗೆ ಉಪ ಉತ್ಪನ್ನ ಮಾಡುವುದು ತಾವು ಉತ್ಪಾದಿಸಿದ ಉತ್ಪನ್ನಗಳಿಗೆ ಮೌಲ್ಯವರ್ಧನೆ ಮಾಡಿ ಹೆಚ್ಚಿನ ಲಾಭ ಗಳಿಸಬೇಕು ಎಂದರು.
ಮಂಡ್ಯ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ಅಭಿವೃದ್ಧಿ ಪಡಿಸಿದ ಐದು ಕೃಷಿ ತಳಿಗಳನ್ನು ಮತ್ತು 9 ತಾಂತ್ರಿಕತೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಾರ್ಪಣೆ ಮಾಡಿದರು. ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರು ಕೃಷಿ ಕ್ಯಾಲೆಂಡರ್ ಅನ್ನು ಬಿಡುಗಡೆಗೊಳಿಸಿದರು.
ಕಾರ್ಯಕ್ರಮದಲ್ಲಿ ರಾಜ್ಯ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ, ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ ರವಿಕುಮಾರ್, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಅಧ್ಯಕ್ಷ ಹಾಗೂ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ ಎ.ಬಿ. ರಮೇಶ್ ಬಂಡಿಸಿದ್ದೇಗೌಡ, ಮೇಲುಕೋಟೆ ವಿಧಾನ ಸಭಾ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ, ವಿಧಾನ ಪರಿಷತ್ ಸದಸ್ಯ ಮಧು ಜಿ ಮಾದೇಗೌಡ, ಮೈ ಶುಗರ್ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಸಿ.ಡಿ ಗಂಗಾಧರ, ಮಂಡ್ಯ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ವಿಶೇಷಾಧಿಕಾರಿ ಡಾ.ಕೆ.ಎಂ ಹರಿಣಿ ಕುಮಾರ್, ರಾಜ್ಯ ಸಣ್ಣ ಕೈಗಾರಿಕೆಗಳ ಉಪಾಧ್ಯಕ್ಷೆ ವಿಜಯಲಕ್ಷ್ಮಿ ರಘುನಂದನ್, ಎಂ.ಡಿ.ಸಿ.ಸಿ ಬ್ಯಾಂಕ್ ಅಧ್ಯಕ್ಷ ಸಚಿನ್ ಚಲುವರಾಯಸ್ವಾಮಿ, ಜಿಲ್ಲಾಧಿಕಾರಿ ಡಾ.ಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಆರ್ ನಂದಿನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕ್ಷಕ ಮಲ್ಲಿಕಾರ್ಜುನ ಬಾಲದಂಡಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
Key words: Farmers, agriculture, Mandya, CM, Siddaramaiah







