ಮುಡುಕುತೊರೆ ಸರ್ವಾಂಗೀಣ ಅಭಿವೃದ್ಧಿಗೆ ಬದ್ಧ: ಸಚಿವ ಡಾ.ಹೆಚ್.ಸಿ.ಮಹದೇವಪ್ಪ

ಮೈಸೂರು,ಡಿಸೆಂಬರ್,29,2025 (www.justkannada.in): ಮುಡುಕುತೊರೆಯು ಪ್ರಸಿದ್ಧ ಧಾರ್ಮಿಕ ಸ್ಥಳವಾಗಿದ್ದು, ಪ್ರವಾಸೋದ್ಯಮ ಕೇಂದ್ರವೂ ಆಗಿದೆ. ಈ ಹಿನ್ನೆಲೆಯಲ್ಲಿ ಈ ಭಾಗವನ್ನು ಮತ್ತಷ್ಟು ಅಭಿವೃದ್ಧಿಪಡಿಸಲಾಗುವುದು ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಅವರು ತಿಳಿಸಿದರು.

ತಾಲ್ಲೂಕಿನ ಮುಡುಕುತೊರೆಯ ಜೆ.ಎಸ್.ಎಸ್ ಕಲ್ಯಾಣ ಮಂಟಪದಲ್ಲಿ ಮುಡುಕುತೊರೆ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಚಿವ ಹೆಚ್.ಸಿ ಮಹದೇವಪ್ಪ ಅವರು, ಈಗಾಗಲೇ ವಸತಿ ಶಾಲೆ ನಿರ್ಮಾಣ, ಏತ ನೀರಾವರಿ ಯೋಜನೆ, ರಸ್ತೆಗಳ ನಿರ್ಮಾಣ ಸೇರಿದಂತೆ ಅನೇಕ ಅಭಿವೃದ್ಧಿ ಕಾರ್ಯಗಳು ಮಾಡಲಾಗಿದೆ ಎಂದರು.

ನನ್ನ ಮತಕ್ಷೇತ್ರದ ಪ್ರತಿಯೊಂದು ಗ್ರಾಮವೂ ಸಂಪೂರ್ಣವಾಗಿ ಅಭಿವೃದ್ಧಿಯಾಗಬೇಕು. ಈ ಗ್ರಾಮಕ್ಕೆ ಡಿಪ್ಲೋಮಾ ಕಾಲೇಜು, ಬಸ್ ನಿಲ್ದಾಣ, ಆಸ್ಪತ್ರೆ, ನೀರಾವರಿ ಯೋಜನೆ ಕಾಮಗಾರಿ ಸೇರಿದಂತೆ ಹಲವಾರು ಅಭಿವೃದ್ಧಿ ಕೆಲಸಕ್ಕೆ ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದರು.

ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ ಎಂದು ಗ್ರಾಮಸ್ಥರು ಸಚಿವರ ಗಮನಕ್ಕೆ ತಂದರು. ಈ ಕುರಿತು ಸಚಿವ ಹೆಚ್.ಸಿ ಮಹದೇವಪ್ಪ, ಜಿಲ್ಲಾ ಪಂಚಾಯತ್ ಸಿಇಒ ಅವರಿಗೆ ಸ್ಥಳದಲ್ಲೇ ಕರೆ ಮಾಡಿ, ಗ್ರಾಮಕ್ಕೆ ಖುದ್ದಾಗ ಭೇಟಿ ನೀಡಿ ಪರಿಶೀಲನೆ ನಡೆಸಿ ಸಮಸ್ಯೆಯನ್ನು ತುರ್ತಾಗಿ ಬಗೆಹರಿಸುವಂತೆ ತಿಳಿಸಿದರು.

ಇದೇ ಸಂದರ್ಭದಲ್ಲಿ ಮುಡುಕುತೊರೆ ಏತನೀರಾವರಿ ಯೋಜನೆಯ ನವೀಕರಣ ಕಾಮಗಾರಿಗೆ ಹಾಗೂ ಟಿ.ಬೆಟ್ಟಹಳ್ಳಿ ಗ್ರಾಮದ ಆಯುಷ್ಮಾನ್ ಆಸ್ಪತ್ರೆ ನಿರ್ಮಾಣಕ್ಕೆ ಗುದ್ದಲಿಪೂಜೆ ನೆರವೇರಿಸಿ, ಸರ್ಕಾರಿ ಪ್ರಾಥಮಿಕ ಶಾಲೆಗೂ ಭೇಟಿ ನೀಡಿದರು.

ಮುಡುಕುತೊರೆ ಜಾತ್ರೆಯನ್ನು ವಿಜೃಂಭಣೆಯಿಂದ ಆಚರಿಸಿ

ಮುಡುಕತೊರೆ ಜಾತ್ರೆಯು ಈ ಭಾಗದ ಸುತ್ತಮುತ್ತಲ ಹಳ್ಳಿಗಳ ಪ್ರಸಿದ್ಧ ಆಚರಣೆಯಾಗಿದ್ದು, ಜ.21 ರಿಂದ 28 ರವರೆಗೆ ಜಾತ್ರೆಯು ನಡೆಯಲಿದೆ. ಧಾರ್ಮಿಕ ಕಾರ್ಯಗಳ ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ಆಯೋಜಿಸುವ ಮೂಲಕ ಜಾತ್ರೆಯನ್ನು ವಿಜೃಂಭಣೆಯಿಂದ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಆಯಾ ಇಲಾಖೆಗೆ ವಹಿಸಿದ ಜವಬ್ದಾರಿಯನ್ನು ತಪ್ಪದೆ ನಿಭಾಯಿಸಿಬೇಕು. ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಹಾಗೂ ನದಿಯ ತೀರದ ಸ್ನಾನಘಟ್ಟದಲ್ಲಿ ಮುನ್ನೆಚ್ಚರಿಕೆ ಕ್ರಮ ಅನುಸರಿಸಬೇಕು. ಸ್ವಚ್ಛತೆ ಮತ್ತು ನೈರ್ಮಲ್ಯಕ್ಕೆ ಹೆಚ್ಚಿನ ಆದ್ಯತೆ ನೀಡುವ ಮುಖೇನ ಜಾತ್ರೆಗೆ ಆಗಮಿಸುವ ಭಕ್ತಾಧಿಗಳಿಗೆ ಯಾವುದೇ ತೊಂದರೆ ಉಂಟಾಗಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ರಾಸುಗಳಿಗೆ ಸಾಂಕ್ರಮಿಕ ರೋಗ ಹರಡದಂತೆ ಮುನ್ನೆಚ್ಚರಿಕೆ ವಹಿಸಿ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಅರ್ಥಪೂರ್ಣವಾಗಿ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಿ. ಕೃಷಿ, ತೋಟಗಾರಿಕೆ, ಮೀನುಗಾರಿಕೆ ಇಲಾಖೆಯಿಂದ ಜನರಿಗೆ ಜಾಗೃತಿ ಮೂಡಿಸುವಂತಹ ವಸ್ತುಪ್ರದರ್ಶನ ಆಯೋಜಿಸಿ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ತಲಕಾಡು ವೈಧ್ಯನಾಥೇಶ್ವರ ಸಮೂಹ ದೇವಾಯಲ ಸಮಿತಿ ಅಧ್ಯಕ್ಷ ನಾಗರಾಜು, ಬಿ.ಶೆಟ್ಟಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪುಟ್ಟಮ್ಮ, ಉಪಾಧ್ಯಕ್ಷ ದಕ್ಷಿಣಾಮೂರ್ತಿ, ಸಚಿವರ ವಿಶೇಷ ಕರ್ತವ್ಯಾಧಿಕಾರಿ ಗೋಪಾಲ್, ರವಿಕುಮಾರ್, ಆಪ್ತಸಹಾಯಕ ಬಸವರಾಜು, ಶ್ರೀನಿವಾಸ್, ತಹಶೀಲ್ದಾರ್ ಸುರೇಶ್ ಆಚಾರ್, ಮುಖಂಡರಾದ ಕುಕ್ಕೂರು ಗಣೇಶ್, ನರಸಿಂಹ ಮಾದನಾಯಕ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Key words: development, Mudukuthore, Minister, Dr. H.C. Mahadevappa