ಇಲ್ಲಿಯವರೆಗೆ 2.20 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ- ಸಿಎಂ ಸಿದ್ದರಾಮಯ್ಯ

ಹಾವೇರಿ ಫೆಬ್ರವರಿ, 14,2026 (www.justkannada.in):  ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ವಿತರಿಸಿ ದಾಖಲೆ ನಿರ್ಮಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು.

ಜಿಲ್ಲಾಡಳಿತ ಮತ್ತು ಕಂದಾಯ ಇಲಾಖೆ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಸರ್ಕಾರದ ಸಹಸ್ರ ದಿನಾಚರಣೆ ಮತ್ತು ಒಂದು ಲಕ್ಷ ಮಂದಿ ಫಲಾನುಭವಿಗಳಿಗೆ ಹಕ್ಕು ಪತ್ರ ನೀಡುವ ಕಾರ್ಯಕ್ರಮವನ್ನು ಉದ್ಘಾಟಿಸಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು.

ಕಂದಾಯ ಇಲಾಖೆಗೆ ಕೃಷ್ಣಬೈರೇಗೌಡರು ಸಚಿವರಾದ ಮೇಲೆ ಸರ್ಕಾರದಲ್ಲಿ ಕ್ರಾಂತಿಕಾರಿ ಪ್ರಗತಿ ಆಗಿದೆ ಎಂದು ಸಚಿವರ ಸಾಧನೆಗೆ ಸಿಎಂ ಸಿದ್ದರಾಮಯ್ಯ ವೇದಿಕೆಯಲ್ಲೇ ಮೆಚ್ಚುಗೆ ವ್ಯಕ್ತಪಡಿಸಿದರು.‌

ರಾಜ್ಯದ ಜಿಡಿಪಿ ದೇಶದಲ್ಲೇ ನಂಬರ್ ಒನ್ ಆಗಿಸಿದ್ದು  GST ತೆರಿಗೆ ಸಂಗ್ರಹದಲ್ಲೂ ರಾಜ್ಯ ದಾಖಲೆ ವೇಗದಲ್ಲಿ ಸಾಗುತ್ತಿದೆ. ಈ ಎಲ್ಲಾ ಸಾಧನೆ ಮತ್ತು ದಾಖಲೆಗಳನ್ನು ಕೇಂದ್ರ ಸರ್ಕಾರದ ಅನ್ಯಾಯದ ನಡುವೆಯೂ ಮಾಡಿ ತೋರಿಸಿದ್ದೇವೆ.  ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಸಂಸದ ಬಸವರಾಜ ಬೊಮ್ಮಾಯಿಯವರೂ, ಪ್ರಹ್ಲಾದ್ ಜೋಶಿ, ಜಗದೀಶ್ ಶೆಟ್ಟರ್ ಕೂಡ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ಕೇಂದ್ರದಲ್ಲಿ ಬಾಯಿ ಬಿಡುತ್ತಿಲ್ಲ‌ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.

ನಮ್ಮ ಸರ್ಕಾರ ಬಂದು 2 ವರ್ಷ 9 ತಿಂಗಳಾಯ್ತು.  ಇಲ್ಲಿಯವರೆಗೂ ಗ್ಯಾರಂಟಿಗಳ ಮೂಲಕ 118000 ಕೋಟಿ ರೂಪಾಯಿಗಳನ್ನು ನೇರವಾಗಿ ರಾಜ್ಯದ ಜನರ ಖಾತೆಗೆ ಹಾಕಿದ್ದೇವೆ. ಅಮಾರ್ತ್ಯಸೇನ್,  ಅಭಿಜಿತ್ ಬ್ಯಾನರ್ಜಿ ಮುಂತಾದ ಆರ್ಥಿಕ ತಜ್ಞರ ಜೊತೆಗೆ ದಿನ ಪತ್ರಿಕೆಗಳು ಮತ್ತು ವಿಶ್ವ ವಿದ್ಯಾಲಯಗಳ ಅಧ್ಯಯನಗಳು ವ್ಯಕ್ತಪಡಿಸಿದ್ದ ಸದಾಭಿಪ್ರಾಯಗಳನ್ನು ಸಿಎಂ ಸಿದ್ದರಾಮಯ್ಯ ಓದಿ ವಿವರಿಸಿ,  ಬಿಜೆಪಿಯವರು ಜನರನ್ನು ತಪ್ಪು ದಾರಿಗೆಳೆಯುವುದು ಖಂಡನೀಯ ಎಂದರು.

ಕೇಂದ್ರಸರ್ಕಾರ ರಾಜ್ಯಕ್ಕೆ ಅನುದಾನ ನೀಡದೇ ಅನ್ಯಾಯ ಮಾಡುತ್ತಿದೆ. ನಮ್ಮ ಸರ್ಕಾರ 1000 ದಿನಗಳನ್ನು ಯಶಸ್ವಿಯಾಗಿ ಆಡಳಿತ ನಡೆಸಿದ್ದು, ನಾವು ಎಲ್ಲ ಜಾತಿ ಧರ್ಮ ಭಾಷೆಯ ಜನರಿಗೆ ಸೇರಿದಂತಹ ಎಲ್ಲರನ್ನೊಳಗೊಂಡ ಅಭಿವೃದ್ಧಿಯಲ್ಲಿ  ನಮ್ಮ ಸರ್ಕಾರ ನಂಬಿಕೆಯಿರಿಸಿದೆ. ನಾವು ಅಸಮಾನತೆ ನೀಗಿಸುವ ಕಾಯಕದಲ್ಲಿ ತೊಡಗಿದ್ದೇವೆ. ಬಿಜೆಪಿಯವರು 4 ವರ್ಷ ಏನು ಮಾಡಿಲ್ಲ. ಅವರು ಜನರನ್ನು ತಪ್ಪು ದಾರಿಗೆಳೆಯುವುದು ಖಂಡನೀಯ.  ಬಿಜೆಪಿಯವರ ಮಾತುಗಳನ್ನು ಗಂಭೀರವಾಗಿ ತೆಗೆದುಕೊಳ್ಳುವ ಅಗತ್ಯವಿಲ್ಲ ಎಂದರು.

ಸರ್ಕಾರ ನಿನ್ನೆಗೆ ಒಂದು ಸಾವಿರ ದಿನ ಪೂರೈಸಿದ್ದು, ಈ ಸಾವಿರ ದಿನಗಳಲ್ಲಿ ನಮ್ಮ ಸಾಧನಾ ಸಮಾವೇಶ  ನಮ್ಮ ಬದ್ಧತೆಯಾಗಿದೆ. ಬಡವರು, ದಲಿತರು, ಹಿಂದುಳಿದ ವರ್ಗದವರು,ಅಲ್ಪಸಂಖ್ಯಾತರು, ಮಹಿಳೆಯರು, ಕಾರ್ಮಿಕರ ಪರವಾಗಿ ನಾವು ನಿಲ್ಲುತ್ತೇವೆ ಎಂದು ಮತ್ತೊಮ್ಮೆ ತಿಳಿಸುತ್ತೇನೆ ಎಂದು ಪುನರುಚ್ಚರಿಸಿದರು.

ಕೇಂದ್ರ ಸರ್ಕಾರ, ರಾಜ್ಯಕ್ಕೆ ಅನ್ಯಾಯ ಮಾಡಿದೆ. ಜಿಎಸ್ ಟಿ ಸಂಗ್ರಹಣೆಯಲ್ಲಿ ಕೊರತೆಯಾಗಿದ್ದು, ರಾಜ್ಯಕ್ಕೆ 12 – 15 ಸಾವಿರ ಕೋಟಿ ನಷ್ಟವಾಗಿದೆ. ನಮಗೆ ಬರುವ ನ್ಯಾಯಯುತ ಪಾಲು ಸಿಗುತ್ತಿಲ್ಲ. ಜೆಜೆಎಂ ನಲ್ಲಿ 15 ಸಾವಿರ ಕೋಟಿ ಇನ್ನೂ ಕೊಟ್ಟಿಲ್ಲ. ಈ ಅನುದಾನ ನೀಡಿದರೆ, ರಾಜ್ಯದ ಬಹಳಷ್ಟು ರಾಜ್ಯದಲ್ಲಿ ಬಹಳಷ್ಟು ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತವೆ ಎಂದರು.

ರಾಜ್ಯದ ಹಣಕಾಸಿನ ಪರಿಸ್ಥಿತಿಯನ್ನು ಪರಿಶೀಲಿಸಿ, ಜಿಲ್ಲೆಯ ಬೇಡಿಕೆಗಳನ್ನು ಈಡೇರಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು.

ಜನಸೇವೆಯಲ್ಲಿ ಸಾರ್ಥಕ ಸಾವಿರ ದಿನ, ಭೂ ಗ್ಯಾರಂಟಿ ಸಮರ್ಪಣಾ ಸಮಾವೇಶ” ಕಾರ್ಯಕ್ರಮದಲ್ಲಿ ಉತ್ತಮ ಕಾರ್ಯಕ್ಷಮತೆ  ತೋರಿದ ಅಧಿಕಾರಿಗಳನ್ನೂ ಗುರುತಿಸಿ ಸನ್ಮಾನಿಸಲಾಯಿತು.

ಡಿಸಿಎಂ ಡಿ.ಕೆ. ಶಿವಕುಮಾರ್,  ಸಚಿವರಾದ ಕೃಷ್ಣ ಭೈರೇಗೌಡ, ಶಿವಾನಂದ ಪಾಟೀಲ್, ಹೆಚ್.ಕೆ. ಪಾಟೀಲ್, ಸತೀಶ್ ಜಾರಕಿಹೊಳಿ, ಪರಮೇಶ್ವರ್, ಕೆ.ಹೆಚ್. ಮುನಿಯಪ್ಪ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಹೆಚ್.ಎಂ ರೇವಣ್ಣ, ವಿಧಾನ ಪರಿಷತ್ತಿನಲ್ಲಿ ಆಡಳಿತ ಪಕ್ಷದ ಮುಖ್ಯ ಸಚೇತಕರಾದ ಸಲೀಂ ಅಹ್ಮದ್ ಹಾಗೂ 20 ಕ್ಕೂ ಹೆಚ್ಚು ಮಂದಿ ಶಾಸಕರುಗಳು ಮತ್ತು ಮುಖಂಡರುಗಳು, ನಾಯಕರು ಉಪಸ್ಥಿತರಿದ್ದರು.

Key words: Till now, 2.20 lakh, families, issued, title deeds, CM Siddaramaiah