ಶಾಸಕ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ತೀರ್ಪಿಗೆ ಸುಪ್ರೀಂ ತಡೆಯಾಜ್ಞೆ

ನವದೆಹಲಿ,ಫೆಬ್ರವರಿ,27,2026 (www.justkannada.in): ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಶಾಸಕ ಎಸ್‌.ಎನ್‌. ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಳಿಸಿ ಕರ್ನಾಟಕ ಹೈಕೋರ್ಟ್ ನೀಡಿದ್ದ ತೀರ್ಪಿಗೆ ಸುಪ್ರೀಂಕೋರ್ಟ್​​ ತಡೆಯಾಜ್ಞೆ ನೀಡಿದೆ.

ಚುನಾವಣೆಯಲ್ಲಿ ಎಸ್‌.ಎನ್‌. ಸುಬ್ಬಾರೆಡ್ಡಿ ಸಲ್ಲಿಸಿದ್ದ ನಾಮಪತ್ರ ದೋಷದಿಂದ ಕೂಡಿದೆ. ಆಸ್ತಿ ಮಾಹಿತಿ ಮುಚ್ಚಿಟ್ಟು ಅವರು ಸುಳ್ಳು ಪ್ರಮಾಣಪತ್ರ ಸಲ್ಲಿಸಿದ್ದಾರೆ. ಹೀಗಾಗಿ ಅವರ ಆಯ್ಕೆಯನ್ನು ಅಸಿಂಧುಗೊಳಿಸಬೇಕೆಂದು ಬಿಜೆಪಿ ಪರಾಜಿತ ಅಭ್ಯರ್ಥಿ ಮುನಿರಾಜು ಕೋರ್ಟ್ ಮೆಟ್ಟಿಲೇರಿದ್ದರು. ಇತ್ತೀಚೆಗೆ ಈ ಕುರಿತು ತೀರ್ಪು ಪ್ರಕಟಿಸಿದ್ದ ಹೈಕೋರ್ಟ್ ಶಾಸಕ ಎಸ್‌.ಎನ್‌. ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಳಿಸಿ ತೀರ್ಪು ಪ್ರಕಟಿಸಿತ್ತು.

ಈ ತೀರ್ಪು ಪ್ರಶ್ನಿಸಿ ಸುಬ್ಬಾರೆಡ್ಡಿ  ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಹೈಕೋರ್ಟ್ ತೀರ್ಪಿಗೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದೆ. ಆದಾಯ ಬಹಿರಂಗಪಡಿಸಿದರೆ ಸಾಕೇ, ವ್ಯವಹಾರವನ್ನೂ ಬಹಿರಂಗಪಡಿಸಬೇಕೇ ಎಂಬ ಬಗ್ಗೆ ವಿಚಾರಣೆ ಅಗತ್ಯವೆಂದು ಕೋರ್ಟ್ ಅಭಿಪ್ರಾಯ ವ್ಯಕ್ತಪಡಿಸಿದ್ದು, 6 ವಾರದಲ್ಲಿ ಆಕ್ಷೇಪಣೆ ಸಲ್ಲಿಸುವಂತೆ ಎದುರಾಳಿ ಅಭ್ಯರ್ಥಿಯಾಗಿದ್ದ  ಸಿ.ಮುನಿರಾಜುಗೆ ಸೂಚನೆ ನೀಡಿದೆ. ಸೆಪ್ಟೆಂಬರ್ ತಿಂಗಳಿಗೆ ನ್ಯಾಯಾಲಯ ವಿಚಾರಣೆ ಮುಂದೂಡಿದ್ದು, ಈ ಮೂಲಕ ಎಸ್.ಎನ್. ಸುಬ್ಬಾರೆಡ್ಡಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.

Key words: Supreme Court,  stays, verdict MLA Subbareddy, High court