Monday, September 14, 2026

BDA Apartments

ಬಳ್ಳಾರಿ ಏರ್ ಪೋರ್ಟ್ ಗೆ ಹೊಸ ತಾಣ – ಸಚಿವ ಎಂ.ಬಿ ಪಾಟೀಲ್ BDA JK_Adv BDA Adv
Home Front Page ಬಳ್ಳಾರಿ ಏರ್ ಪೋರ್ಟ್ ಗೆ ಹೊಸ ತಾಣ – ಸಚಿವ ಎಂ.ಬಿ ಪಾಟೀಲ್

ಬಳ್ಳಾರಿ ಏರ್ ಪೋರ್ಟ್ ಗೆ ಹೊಸ ತಾಣ – ಸಚಿವ ಎಂ.ಬಿ ಪಾಟೀಲ್

ಬೆಂಗಳೂರು,ಮಾರ್ಚ್,13,2026 (www.justkannada.in): ಬಳ್ಳಾರಿ, ಹೊಸಪೇಟೆ, ಹಂಪೆ, ಆನೆಗೊಂದಿ, ಸಂಡೂರು, ಕೊಪ್ಪಳ, ಕುರುಗೋಡು, ಸಿರಗುಪ್ಪ ಮುಂತಾದ ಭಾಗಗಳಿಗೆ ಅನುಕೂಲವಾಗುವಂತೆ ವಿಮಾನ ನಿಲ್ದಾಣ ಬರಬೇಕೆಂಬುದು ಸರಕಾರದ ಉದ್ದೇಶವಾಗಿದೆ. ಹೀಗಾಗಿ ಬಳ್ಳಾರಿಯಿಂದ 19 ಕಿ.ಮೀ. ದೂರದಲ್ಲಿ ಜಾಗವನ್ನು ಗುರುತಿಸಲಾಗಿದೆ. ಇದು ಕಾರ್ಯಸಾಧು ಎನಿಸಿದರೆ ಎಲ್ಲ ಜನಪ್ರತಿನಿಧಿಗಳ ಜತೆ ಚರ್ಚಿಸಿ ಮುಂದಿನ ಹೆಜ್ಜೆ ಇಡಲಾಗುವುದು ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ ಪಾಟೀಲ್ ತಿಳಿಸಿದರು.

ಗಂಗಾವತಿಯ ಬಿಜೆಪಿ ಶಾಸಕ ಜನಾರ್ದನ ರೆಡ್ಡಿ ಅವರು ವಿಧಾನಸಭೆಯಲ್ಲಿ ಶುಕ್ರವಾರ ಕೇಳಿದ ಪ್ರಶ್ನೆಗೆ ವಿವರವಾಗಿ ಉತ್ತರಿಸಿದ ಸಚಿವ ಎಂ.ಬಿ ಪಾಟೀಲ್, ಬಳ್ಳಾರಿ ವಿಮಾನ ನಿಲ್ದಾಣದಿಂದ ಆ ಜಿಲ್ಲೆಯ ಜತೆಗೆ ಕೊಪ್ಪಳ ಮತ್ತು ವಿಜಯನಗರ ಜಿಲ್ಲೆಗಳ ಜನರಿಗೂ ಪ್ರಯೋಜನ ಆಗಬೇಕು. ಬಳ್ಳಾರಿ ಏರ್ ಪೋರ್ಟ್ ನಿಂದ ನೆರೆಯ ಆಂಧ್ರಪ್ರದೇಶಕ್ಕೂ ಲಾಭವಾಗಲಿದೆ. ಈ ಯೋಜನೆಯ ಸಂಬಂಧ ಸದ್ಯದಲ್ಲೇ ಮೂರೂ ಜಿಲ್ಲೆಗಳ ಜನಪ್ರತಿನಿಧಿಗಳ ಸಭೆ ಕರೆದು, ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಸಾಧಕಬಾಧಕಗಳನ್ನು ಯೋಚಿಸಲಾಗುವುದು ಎಂದು ತಿಳಿಸಿದ್ದಾರೆ.

ಈಗ ಹೊಸದಾಗಿ ಗುರುತಿಸಿರುವ ಸ್ಥಳದಿಂದ ಹೊಸಪೇಟೆಗೆ 33 ಕಿ.ಮೀ., ಹಂಪೆಗೆ 26 ಕಿ.ಮೀ, ಸಂಡೂರಿಗೆ 33 ಕಿ.ಮೀ, ಕೊಪ್ಪಳಕ್ಕೆ 75 ಕಿ.ಮೀ, ಕುರುಗೋಡಿಗೆ 14 ಕಿ.ಮೀ, ತೋರಣಗಲ್ಲಿಗೆ 13 ಕಿ.ಮೀ ಮತ್ತು ಸಿರಗುಪ್ಪಕ್ಕೆ 43 ಕಿ.ಮೀ ಆಗಲಿದೆ. ಆದರೆ ಈಗ ಗುರುತಿಸಿರುವ ಜಾಗವು ವಿಮಾನ ನಿಲ್ದಾಣಕ್ಕೆ ಎಷ್ಟರ ಮಟ್ಟಿಗೆ ಸೂಕ್ತ ಎನ್ನುವುದನ್ನು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ತೀರ್ಮಾನಿಸಬೇಕು ಎಂದು ಸಚಿವ ಎಂ.ಬಿ ಪಾಟೀಲ್ ವಿವರಿಸಿದ್ದಾರೆ.

ವಿಮಾನ ನಿಲ್ದಾಣ ಕಟ್ಟುವಾಗಲೇ ದೂರದೃಷ್ಟಿ ಇರಬೇಕು. ಇಲ್ಲದೆ ಹೋದರೆ ಹುಬ್ಬಳ್ಳಿ, ಬೆಳಗಾವಿ, ವಿಜಯಪುರ ಇಲ್ಲೆಲ್ಲ ಆಗಿರುವ ತಪ್ಪುಗಳೇ ಮುಂದುವರಿಯುತ್ತವೆ. ಬೆಳಗಾವಿ ಮತ್ತು ಹುಬ್ಬಳ್ಳಿ ಏರ್ಪೋರ್ಟ್ ಮಧ್ಯೆ ಕೇವಲ 70 ಕಿ.ಮೀ. ಅಂತರವಿದೆ. ಇವೆರಡೂ ಜಿಲ್ಲೆಗಳಿಗೆ ಅನುಕೂಲವಾಗುವ ಹಾಗೆ ಮಧ್ಯದಲ್ಲಿ ನಿಲ್ದಾಣ ನಿರ್ಮಿಸಿದ್ದರೆ ಪ್ರಯಾಣಿಕರ ದಟ್ಟಣೆ ಪರಿಗಣಿಸಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಘೋಷಿಸುತ್ತಿದ್ದರು. ಬೆಳಗಾವಿಯಲ್ಲಿ ಭಾರತೀಯ ವಾಯುಪಡೆ ಇರುವುದು ನಮ್ಮ ಪ್ರಯೋಜನಕ್ಕೆ ಬಂದಿದೆ ಎಂದು ಸಚಿವ ಎಂ.ಬಿ ಪಾಟೀಲ್ ವಾಸ್ತವವನ್ನು ತೆರೆದಿಟ್ಟರು.

ವಿಜಯಪುರದಲ್ಲೂ ಇದೇ ತಪ್ಪಾಗಿದೆ. ಈಗ ಉದ್ಘಾಟನೆಗೆ ಸಜ್ಜಾಗಿರುವ ಏರ್ ಪೋರ್ಟ್ ಕಲಬುರಗಿ ರಸ್ತೆಯಲ್ಲಿದೆ. ಅದರ ಬದಲು ಆಲಮಟ್ಟಿ ಕಡೆಗೆ ಮಾಡಿದ್ದರೆ ಬಾದಾಮಿ, ಐಹೊಳೆ, ಪಟ್ಟದಕಲ್ಲು, ಬಾಗಲಕೋಟೆ ಮುಂತಾದ ಸ್ಥಳಗಳಿಗೆ ಪ್ರಯೋಜನ ಸಿಗುತ್ತಿತ್ತು. ಏರ್ ಪೋರ್ಟ್ ಕಟ್ಟಿದ ಮೇಲೆ ಅದು ಸ್ತಬ್ಧವಾದರೆ ಪ್ರಯೋಜನವೇನು? ಹೀಗಾಗಿ ಬಳ್ಳಾರಿ ಜಿಲ್ಲೆಯಲ್ಲಿ ಏರ್ ಪೋರ್ಟ್ ನಿರ್ಮಾಣಕ್ಕೆ ಕೆಐಎಡಿಬಿ ವತಿಯಿಂದ 800 ಮತ್ತು 1,200 ಎಕರೆ ಇರುವ ಎರಡು ಹೊಸ ತಾಣಗಳನ್ನು ನೋಡಲಾಗಿದೆ ಎಂದು ಅವರು ನುಡಿದಿದ್ದಾರೆ.

ಜಿಲ್ಲಾ ಮತ್ತು ವಿಭಾಗೀಯ ಮಟ್ಟದ ಕೇಂದ್ರಗಳಲ್ಲಿ ಇರುವ ವಿಮಾನ ನಿಲ್ದಾಣಗಳು ಇಡೀ ದೇಶದಲ್ಲಿ ತೊಂದರೆ ಎದುರಿಸುತ್ತಿವೆ. ಬೀದರ್, ಕಲಬುರಗಿ ವಿಮಾನ‌ ನಿಲ್ದಾಣಗಳು ಇಂಥ ದುರಾವಸ್ಥೆ ಎದುರಿಸುತ್ತಿವೆ. ಬೀದರ್ ವಿಮಾನ ನಿಲ್ದಾಣ ಸದ್ಯಕ್ಕೆ ಕೆಕೆ ಆರ್ ಡಿಬಿ ನೆರವಿನಿಂದ ನಡೆಯುವಂತಾಗಿದೆ. ಅದೇ ರೀತಿ ಕಲ್ಬುರ್ಗಿ ವಿಮಾನ ನಿಲ್ದಾಣ ಕೂಡ ಕಾರ್ಯಾಚರಣೆ ಮಾಡಬೇಕೆನ್ನುವ ಬೇಡಿಕೆ ಬಂದಿದ್ದು, ಅದನ್ನು ಮಾಡುತ್ತೇವೆ. ಹೀಗಾಗಿ ಉಡಾನ್ ಯೋಜನೆಯನ್ನು 3ರಿಂದ 5 ವರ್ಷಗಳಿಗೆ ವಿಸ್ತರಿಸಬೇಕೆಂದು ಮತ್ತು ನಂತರದ ಐದು ವರ್ಷಗಳ ಕಾಲ ಕೇಂದ್ರ ಮತ್ತು ರಾಜ್ಯ ಸರಕಾರಗಳು 50:50 ಅನುಪಾತದಲ್ಲಿ ನಿರ್ವಹಿಸಬೇಕು ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವರ ಬಳಿ ನಾನು ಪ್ರಸ್ತಾಪ ಇಟ್ಟಿದ್ದೇನೆ ಎಂದು ಸಚಿವ ಎಂ.ಬಿ ಪಾಟೀಲ್ ಉತ್ತರಿಸಿದ್ದಾರೆ.

ಹಿಂದೆ ಗುರುತಿಸಿದ್ದ ತಾಣದಲ್ಲಿ ವಿಮಾನ ನಿಲ್ದಾಣ ಮಾಡಿದರೆ 8 ಪಥಗಳ ಗ್ರೀನ್-ಫೀಲ್ಡ್ ಹೆದ್ದಾರಿ ನಿರ್ಮಾಣ ಇತ್ಯಾದಿ ಪ್ರಶ್ನೆ ಬರುತ್ತದೆ. ಅದಕ್ಕೆ ಭೂಸ್ವಾಧೀನ, ಪರಿಹಾರ ಎಲ್ಲ ಸೇರಿ ವಿಮಾನ ನಿಲ್ದಾಣಕ್ಕೆ ಹಾಕಿದಷ್ಟು ಹಣವನ್ನೇ ಸುರಿಯಬೇಕಾಗುತ್ತದೆ. ಆದ್ದರಿಂದ ಅದು ಪ್ರಾಯೋಗಿಕವಾಗಿ ಸಾಧ್ಯವಿಲ್ಲ. ಒಟ್ಟಿನಲ್ಲಿ ಮುಖ್ಯಮಂತ್ರಿ ಅಧ್ಯಕ್ಷತೆಯ ಸಭೆಯಲ್ಲಿ ಅಂತಿಮಗೊಳಿಸಲಾಗುವುದು ಎಂದು ಸಚಿವ ಎಂ.ಬಿ ಪಾಟೀಲ್ ಪ್ರತಿಪಾದಿಸಿದ್ದಾರೆ.

Key words: New location, Bellary Airport, Minister, M.B. Patil