ಮೈಸೂರು,ಮೇ,4,2026 (www.justkannnada.in): ದುರಾಡಳಿತ, ಜನಾಭಿಪ್ರಾಯಕ್ಕೆ ಮನ್ನಣೆ ನೀಡದೆ ಗಾಂಧಿ ಕುಟುಂಬಕ್ಕೆ ಒತ್ತು ನೀಡುತ್ತಿರುವ ಕಾಂಗ್ರೆಸ್ ಇದೀಗ ಪಂಚ ರಾಜ್ಯಗಳ ಚುನಾವಣೆಯಲ್ಲಿ ಸೋಲು ಕಂಡು ಅವನತಿ ಶುರುವಾಗಿದ್ದು,ಕರ್ನಾಟಕದಲ್ಲೇ ಕಾಂಗ್ರೆಸ್ ಅಂತ್ಯವಾಗಲಿದೆ ಎಂದು ಮಾಜಿ ಮೇಯರ್ ಶಿವಕುಮಾರ್ ಹೇಳಿದ್ದಾರೆ.
ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ ಕುರಿತು ಮಾತನಾಡಿದ ಮಾಜಿ ಮೇಯರ್ ಶಿವಕುಮಾರ್, ಪಶ್ಚಿಮ ಬಂಗಾಳ, ತಮಿಳುನಾಡು ,ಆಸ್ಸಾಂ ರಾಜ್ಯಗಳಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನಗಳನ್ನು ದಾಟದೆ ಇರುವುದು ಕಾಂಗ್ರೆಸ್ ಪಕ್ಷದ ಅಸ್ತಿತ್ವವನ್ನೇ ಪ್ರಶ್ನಿಸುವಂತಾಗಿದೆ. ಆಸ್ಸಾಂನಲ್ಲಿ ಕಾಂಗ್ರೆಸ್ ಗೆಲ್ಲಿಸುತ್ತೇನೆಂದು ಉಸ್ತುವಾರಿ ಹೊತ್ತಿದ್ದ ಬಿ.ಕೆ.ಹರಿಪ್ರಸಾದ್, ಡಿ.ಕೆ.ಶಿವಕುಮಾರ್ ಅವರಿಗೆ ಭಾರೀ ಮುಖಭಂಗವಾಗಿದೆ. ಮಲ್ಲೇಶ್ವರಂ ಕ್ಷೇತ್ರದ ಪಾಲಿಕೆ ಚುನಾವಣೆಯಲ್ಲೂ ಗೆಲ್ಲಲು ಶಕ್ತರಲ್ಲದ ಬಿ.ಕೆ.ಹರಿಪ್ರಸಾದ್ ಆಸ್ಸಾಂ ಚುನಾವಣೆಯಲ್ಲಿ ಗೆಲುವು ಕಂಡಿದ್ದು ಹಾಸ್ಯಾಸ್ಪದ ಎಂದು ಲೇವಡಿ ಮಾಡಿದರು.
ದಕ್ಷಿಣ ಭಾರತದ ರಾಜ್ಯಗಳಲ್ಲಿ ಬಿಜೆಪಿಗೆ ನೆಲೆಯೂರಲು ಅವಕಾಶವಿಲ್ಲವೆಂದು ಹಾಗೂ ಬಿಜೆಪಿ ವಿರುದ್ದ ಅಪಪ್ರಚಾರದಲ್ಲಿ ತೊಡಗಿದ್ದ ಎಂ.ಕೆ.ಸ್ಟಾಲಿನ್ ನೇತೃತ್ವದ ಡಿಎಂಕೆಗೆ ದೊಡ್ಡ ಪಾಠ ಕಲಿಯುವಂತಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನಾಯಕತ್ವಕ್ಕೆ ಮತದಾರರು ಮನ್ನಣೆ ನೀಡಿರುವುದು ಸಾಬೀತಾಗಿದೆ ಎಂದು ಹೇಳಿದರು.
ಕರ್ನಾಟಕದಲ್ಲಿ ಮೂರು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಎಲ್ಲಾ ರಂಗಗಳಲ್ಲೂ ವಿಫಲವಾಗಿದೆ. 2028ರ ಚುನಾವಣೆಯಲ್ಲಿ ಕಾಂಗ್ರೆಸ್ ಅವನತಿಯಾಗುವುದು ನಿಶ್ಚಿತವಾಗಿದೆ ಎಂದು ಶಿವಕುಮಾರ್ ಭವಿಷ್ಯ ನುಡಿದಿದ್ದಾರೆ.
Key words: Decline, Congress, begins, Mysore, Former mayor, Shivakumar







