ಮೈಸೂರು,ಜೂನ್,17,2026 (www.justkannada.in): ಮೈಸೂರು ಜಯದೇವ ಆಸ್ಪತ್ರೆಯಲ್ಲಿ 11 ಮಂದಿ ರೋಗಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್ ಮೂಲಕ ಕಿಡಿ ಕಾರಿದ್ದು ರಾಜ್ಯ ಸರ್ಕಾರ, ಸಚಿವರನ್ನ ತರಾಟೆಗೆ ತೆಗೆದುಕೊಂಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಕೇಂದ್ರ ಸಚಿವ ಹೆಚ್ ಡಿಕೆ, ರೋಗಿಗಳ ಪಾಲಿಗೆ ಮರಣ ಶಾಸನ ಬರೆಯುತ್ತಿರುವ ಕಾಂಗ್ರೆಸ್ ಸರ್ಕಾರ ! ಮೈಸೂರಿನ ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11ಸಾವು. ಇದು ಕಾಂಗ್ರೆಸ್ ಸರ್ಕಾರದ ಸಂಪೂರ್ಣ ಆಡಳಿತ ವೈಫಲ್ಯವಾಗಿದೆ. ಆರೋಗ್ಯ ಇಲಾಖೆಯ ನಿರ್ಲಕ್ಷ್ಯಕ್ಕೆ ಹಿಡಿದ ಕೈಗನ್ನಡಿ ಎಂದು ಹರಿಹಾಯ್ದಿದ್ದಾರೆ.
ಆಸ್ಪತ್ರೆಯಲ್ಲಿ ಡಾಕ್ಟರ್ ಗಳಿಲ್ಲ, ಎಮರ್ಜೆನ್ಸಿಯಲ್ಲಿ ಕರ್ತವ್ಯ ನಿರ್ವಹಿಸುವವರಿಲ್ಲ. ನರ್ಸ್ ಗಳ ಭರವಸೆಯ ಮೇಲೆ ರೋಗಿಗಳ ಜೀವದ ಜೊತೆ ಚೆಲ್ಲಾಟವಾಡಲಾಗುತ್ತಿದೆ. 21 ವರ್ಷದ ಯುವಕನೂ ಸೇರಿ ಹಲವರ ಸಾವು, ಅನೇಕ ರೋಗಿಗಳು ಸೂಕ್ತ ಚಿಕಿತ್ಸೆ ಸಿಗದೆ ನರಳಾಟ. ಮೈಸೂರಿನ ಜಯದೇವ ಆಸ್ಪತ್ರೆ ಶವಗಾರವಾಗಿ ಬದಲಾಗಿದೆ. ಮೃತದೇಹಗಳನ್ನು ನೀಡಲೂ ಸತಾಯಿಸುತ್ತಿದ್ದಾರೆ. ಈ ಸರ್ಕಾರದ ಅಮಾನವೀಯತೆಯ ಪರಮಾವಧಿ ಎಂದು ವಾಗ್ದಾಳಿ ನಡೆಸಿದ್ದಾರೆ.
ಕೇವಲ ಗ್ಯಾರಂಟಿಗಳ ಬೆನ್ನು ಬಿದ್ದಿರುವ ಕಾಂಗ್ರೆಸ್ ಸರ್ಕಾರ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ಬರುವ ರೋಗಿಗಳ ಜೀವಕ್ಕೆ ಗ್ಯಾರಂಟಿ ಕೊಡುತ್ತಿಲ್ಲ. ಗರ್ಭಿಣಿಯರು, ಬಾಣಂತಿಯರು ಮತ್ತು ನವಜಾತ ಶಿಶುಗಳನ್ನು ಬಲಿ ಪಡೆದಿದ್ದನ್ನು ನಾಡಿನ ಜನತೆ ಇನ್ನೂ ಮರೆತಿಲ್ಲ.
ಆರೋಗ್ಯ ಸಚಿವ ಯುಟಿ ಖಾದರ್ ಅವರೇ ಅಮಾಯಕ ಜನರ ಜೀವಕ್ಕೆ ಬೆಲೆ ಇಲ್ಲವೇ ? ಈ ಕೂಡಲೇ ಘಟನೆಯ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಿ, ಕರ್ತವ್ಯ ಲೋಪ ಎಸಗಿರುವವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಆಗ್ರಹಿಸುತ್ತೇವೆ ಎಂದು ಕೇಂದ್ರ ಸಚಿವ ಹೆಚ್ ಡಿಕೆ ಆಗ್ರಹಿಸಿದ್ದಾರೆ.
Key words: 11 patients, die , Jayadeva Hospital, Union Minister, HDK, government






