ಮೈಸೂರು, ಜೂನ್, 19,2026 (www.justkannada.in): ಇತ್ತೀಚೆಗೆ ದಟ್ಟಗಳ್ಳಿಯ ಬಳಿ ರೆಸ್ಟೋರೆಂಟ್ ನಲ್ಲಿ ನಡೆದ ಅಗ್ನಿ ದುರಂತವನ್ನು ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿದ್ದು, ಜಿಲ್ಲೆಯಲ್ಲಿ ಎರಡು ಅಥವಾ ಮೂರನೇ ಅಂತಸ್ತಿನಲ್ಲಿ ತಾತ್ಕಾಲಿಕವಾಗಿ ಕಟ್ಟಡವನ್ನು ನಿರ್ಮಿಸಿಕೊಂಡು ಅಗ್ನಿ ಸುರಕ್ಷತೆ ಕ್ರಮ ಕೈಗೊಳ್ಳದೇ ಬಾರ್ ಅಂಡ್ ರೆಸ್ಟೋರೆಂಟ್ ನಡೆಸುತ್ತಿರುವವರ ವಿರುದ್ಧ ಕ್ರಮ ಕೈಗೊಂಡು ಒಂದು ವಾರದೊಳಗೆ ವರದಿ ನೀಡುವಂತೆ ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ ಜಿ ಅವರು ಸೂಚಿಸಿದರು.
ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡಸಿ ಮಾತನಾಡಿದ ಡಿಸಿ ಲಕ್ಷ್ಮೀಕಾಂತರೆಡ್ಡಿ. ಅಗ್ನಿ ದುರಂತಗಳು ಹೇಳಿ ಬರುವುದಿಲ್ಲ. ರೂಫ್ ಟಾಪ್ ಪಬ್, ರೆಸ್ಟೋರೆಂಟ್ ಗಳಲ್ಲಿ ಹುಲ್ಲು, ಅಲಂಕಾರಿಕ ವಿದ್ಯುತ್ ದೀಪ ಬಳಸುವುದು ಹಾಗೂ ಯಾವುದೇ ಅಗ್ನಿ ಸುರಕ್ಷತಾ ಕ್ರಮಗಳನ್ನು ಕೈಗೊಂಡಿರುವುದಿಲ್ಲ. ಮೈಸೂರು ಮಹಾನಗರ ಪಾಲಿಕೆ ವಲಯ ಅಧಿಕಾರಿಗಳು ಹಾಗೂ ನಗರ ಸ್ಥಳೀಯ ಸಂಸ್ಥೆಯ ಒಂದು ವಾರದೊಳಗೆ ಪರಿಶೀಲನೆ ನಡೆಸಿ ಟ್ರೇಡ್ ಲೈಸೆನ್ಸ್ ರದ್ದು ಪಡಿಸಲು ಕ್ರಮ ವಹಿಸಬೇಕು ಎಂದರು.
ಅಬಕಾರಿ ಇಲಾಖೆಯಿಂದ ಸಿ.ಎಲ್-7, ಸಿ.ಎಲ್-2, ಸಿ.ಎಲ್-5 ಯಾವುದೇ ಪರವಾನಗಿ ಪಡೆಯದೇ ಮದ್ಯ ಮಾರಾಟ ಮಾಡುವುದು ಪರವಾನಗಿ ಪಡೆದ ರೀತಿ ಕಾರ್ಯ ನಿರ್ವಹಿಸದೇ ಇರುವ ಬಾರ್, ಪಬ್ ಗಳು ಮೈಸೂರು ನಗರ ಹಾಗೂ ನಗರದ ಹೊರವಲಯಗಳಲ್ಲಿವೆ, ಅಬಕಾರಿ ಇಲಾಖೆ ಅವರು ನಿರಂತರವಾಗಿ ತಪಾಸಣೆ ನಡೆಸಿ ನಿಯಮಾನುಸಾರ ಕ್ರಮ ಕೈಗೊಳ್ಳಬೇಕು. ಲೋಪ ಕಂಡುಬಂದಲ್ಲಿ ಅಂತಹ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಅಬಕಾರಿ ಇಲಾಖೆಯ ನಿಯಮದ ಪ್ರಕಾರ ಪರವಾನಗಿ ಪಡೆಯದೇ ಬಾರ್ ಅಂಡ್ ರೆಸ್ಟೋರೆಂಟ್ ಗಳು ಆನ್ ಲೈನ್ ನಲ್ಲೇ ಮದ್ಯ ಮಾರಾಟ ಕುರಿತು ಜಾಹೀರಾತು ನೀಡುವುದು ಹಾಗೂ ಜಾಹೀರಾತು ಪಲಕಗಳಲ್ಲಿ ಪ್ರಚಾರ ನೀಡುತ್ತಿರುವುದು ಕಂಡುಬಂದಿದ್ದು, ಅಧಿಕಾರಿಗಳು ಕೂಡಲೇ ನಿಯಮಾನುಸಾರ ಕ್ರಮ ಕೈಗೊಳ್ಳಬೇಕು ಎಂದರು.
ಮೈಸೂರು ಮಹಾನಗರ ಪಾಲಿಕೆ ಅಧಿಕಾರಿಗಳು, ಅಬಕಾರಿ ಅಧಿಕಾರಿಗಳಿಗೆ ಪರವಾನಗಿ ನೀಡುವ ಸಂದರ್ಭದಲ್ಲಿ ಅಗ್ನಿ ಸುರಕ್ಷತೆ ಕುರಿತು ವಹಿಸಬೇಕಾದ ಕ್ರಮಗಳ ಬಗ್ಗೆ ಅಗ್ನಿಶಾಮಕ ಇಲಾಖೆ ಅಧಿಕಾರಿಗಳು ಒಂದು ದಿನದ ತರಬೇತಿ ನೀಡಲಿದ್ದಾರೆ. ಅಗ್ನಿ ಸುರಕ್ಷತಾ ಕ್ರಮಗಳು ಇಲ್ಲದಿದ್ದಲ್ಲಿ ಪರವಾನಗಿಗಾಗಿ ಅರ್ಜಿ ಬಂದ ಸಂದರ್ಭದಲ್ಲೇ ರದ್ದು ಮಾಡಿ ಎಂದರು.
ಮೈಸೂರು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಅವರು ಮಾತನಾಡಿ, ಅಬಕಾರಿ ಹಾಗೂ ಮಹಾನಗರ ಪಾಲಿಕೆ ಅಧಿಕಾರಿಗಳು ರೇಡ್ ಮಾಡುವ ಸಂದರ್ಭದಲ್ಲಿ ಪೊಲೀಸ್ ಇಲಾಖೆಯಿಂದ ಅಗತ್ಯ ಸಹಕಾರ ನೀಡಲಾಗುವುದು ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರು ಮಾತನಾಡಿ, ಹೋಂ ಸ್ಟೇ , ರಿಂಗ್ ರಸ್ತೆಗಳಲ್ಲಿರುವ ರೆಸ್ಟೋರೆಂಟ್ ಗಳಲ್ಲಿ ಅನಧಿಕೃತವಾಗಿ ಮದ್ಯ ಮಾರಾಟದ ಸಾಧ್ಯತೆ ಇರುತ್ತದೆ. ಅಬಕಾರಿ ಇಲಾಖೆ ಅವರು ಪರಿಶೀಲನೆ ನಡೆಸಿ ಎಂದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಯುಕೇಶ್ ಕುಮಾರ್, ಅಗ್ನಿಶಾಮಕ ಅಧಿಕಾರಿ ಗುರುರಾಜ್ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.
Key words: restaurant, temporary building, without, fire safety, Mysore DC, Laxmikant Reddy






