Tuesday, August 4, 2026

BDA Apartments

Home Front Page ನೀಟ್ ಮರು ಪರೀಕ್ಷೆ ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಿ -ADC ಐಶ್ವರ್ಯ ಆರ್ ಸೂಚನೆ

ನೀಟ್ ಮರು ಪರೀಕ್ಷೆ ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಿ -ADC ಐಶ್ವರ್ಯ ಆರ್ ಸೂಚನೆ

ಮೈಸೂರು, ಜೂನ್,19,2026 (www.justkannada.in):  ಜಿಲ್ಲೆಯಲ್ಲಿ ನೀಟ್ ಪರೀಕ್ಷೆಯನ್ನು ಯಾವುದೇ ಲೋಪ ಉಂಟಾಗದಂತೆ ವ್ಯವಸ್ಥಿತವಾಗಿ ನಡೆಸಲು ಸಕಲ ಸಿದ್ಧತೆ  ಮಾಡಿಕೊಳ್ಳಿ ಎಂದು ಅಪರ ಜಿಲ್ಲಾಧಿಕಾರಿ ಐಶ್ವರ್ಯ ಆರ್  ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನೀಟ್  ಪರೀಕ್ಷೆ ಕುರಿತು ಪೂರ್ವಭಾವಿ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅಪರ ಜಿಲ್ಲಾಧಿಕಾರಿ ಐಶ್ವರ್ಯ ಆರ್,  ನೀಟ್ ಪರೀಕ್ಷೆಯು ಜೂನ್ 21 ರಂದು ಮೈಸೂರು ನಗರದಲ್ಲಿ  ಒಟ್ಟು 21 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. 7886 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದರು.

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ, ಎಂ.ಜಿ.ಕೊಪ್ಪಲು ಸರ್ಕಾರಿ ಪದವಿ ಪೂರ್ವ ಕಾಲೇಜು, ಮೈಸೂರು ವಿಶ್ವವಿದ್ಯಾಲಯದ ಸ್ಕೂಲ್ ಆಫ್ ಇಂಜಿನಿಯರಿಂಗ್, ಮಹಾರಾಣಿ ಮಹಿಳಾ ವಾಣಿಜ್ಯ ಕಾಲೇಜು, ರೀಜನಲ್ ಇನ್ಸ್ಟಿಟ್ಯೂಟ್ ಆಫ್ ಎಜುಕೇಶನ್, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು,‌ ಮಹಾರಾಣಿ ಮಹಿಳಾ ಕಲಾ ಕಾಲೇಜು, ವಿಜಯನಗರ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು, ಒಂಟಿಕೊಪ್ಪಲು ಸರ್ಕಾರಿ ಪದವಿ ಪೂರ್ವ ಕಾಲೇಜು, ಮಹಾರಾಣಿ ಸರ್ಕಾರಿ ಪದವಿ ಪೂರ್ವ ಕಾಲೇಜು, ಸರ್ಕಾರಿ ಸಿಪಿಸಿ ಪಾಲಿಟೆಕ್ನಿಕ್ ಕಾಲೇಜು, ಮಹಾರಾಜ ಸರ್ಕಾರಿ ಪದವಿ ಪೂರ್ವ ಕಾಲೇಜು, ಕುವೆಂಪು ನಗರ ಸರ್ಕಾರಿ ಪದವಿಪೂರ್ವ ಕಾಲೇಜು, ಜಾಕಿ ಕ್ವಾಟ್ರಸ್ ಬಳಿ ಇರುವ ಸರ್ಕಾರಿ ಆದರ್ಶ ವಿದ್ಯಾಲಯ,  ನಜರ್ಬಾದ್ ಹತ್ತಿರ ಇರುವ ಬೈಫರ್ಕೆಟೆಡ್ ಮಹಾರಾಜ ಸರ್ಕಾರಿ ಪದವಿ ಪೂರ್ವ ಕಾಲೇಜು, ಪಿಎಂ ಶ್ರೀ ಕೇಂದ್ರೀಯ ವಿದ್ಯಾಲಯ ಹಾಗೂ ಮಹಾರಾಜ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದಲ್ಲಿ ಪರೀಕ್ಷೆ ನಡೆಯಲಿದೆ, ಸರ್ಕಾರಿ ಪದವಿಪೂರ್ವ ಕಾಲೇಜು ಅನಿಕೇತನ ರಸ್ತೆ ಕುವೆಂಪು ನಗರ ಮೈಸೂರು, ದೇವರಾಜ ಮಹಿಳಾ ಸರ್ಕಾರಿ ಪದವಿಪೂರ್ವ ಕಾಲೇಜು ದೇವರಾಜ ಮೊಹಲ್ಲಾ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಿದ್ದಾರ್ಥ ಲೇಔಟ್ ಮೈಸೂರ್, ಡೆಮೋಸ್ಟ್ರೇಷನ್ ಸ್ಕೂಲ್ ಮೈಸೂರು ಇಲ್ಲಿ ಪರೀಕ್ಷೆ ನಡೆಯಲಿದೆ ಎಂದರು.

ನೀಟ್ ಪರೀಕ್ಷೆಯ ಕೋಆರ್ಡಿನೇಟರ್ ಮಿಥಿಲೇಶ್ ಕುಮಾರ್ ಅವರು ಮಾತನಾಡಿ, ಪರೀಕ್ಷೆಯು ಜೂನ್ 21.ರಂದು ಮಧ್ಯಾಹ್ನ 2 ರಿಂದ 5 ಗಂಟೆಯವರೆಗೆ ನಡೆಯಲಿದೆ. ಪರೀಕ್ಷಾ ಕೇಂದ್ರದಲ್ಲಿ  ಬೆಳಿಗ್ಗೆ 11 ಗಂಟೆಯಿಂದ ಪರೀಕ್ಷಾರ್ಥಿಗಳ ಫ್ರಿಸ್ಕಿಂಗ್ ಹಾಗೂ ಬಯೋಮೆಟ್ರಿಕ್ ಪರಿಶೀಲನೆ ಪ್ರಕ್ರಿಯೆ ಪ್ರಾರಂಭವಾಗಲಿದೆ.  ಮಧ್ಯಾಹ್ನ 1.30 ರೊಳಗೆ ಮಾತ್ರ ಪರೀಕ್ಷಾರ್ಥಿಗಳಿಗೆ ಪರೀಕ್ಷಾ ಕೇಂದ್ರಕ್ಕೆ ಪ್ರವೇಶವಿರುತ್ತದೆ‌, ನಂತರ ಪ್ರವೇಶವಿರುವುದಿಲ್ಲ. ಪರೀಕ್ಷಾರ್ಥಿಗಳು  ಪ್ರವೇಶ ಪತ್ರದಲ್ಲಿ ನೀಡಿರುವ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದರು.

ಪ್ರತಿ ಪರೀಕ್ಷಾ ಕೇಂದ್ರಗಳಿಗೆ 1 ಪೊಲೀಸ್ ವೃತ್ತ ನಿರೀಕ್ಷಕರು, 3 ಪುರುಷ & 2 ಮಹಿಳಾ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆಯನ್ನು ಒದಗಿಸಲಾಗುವುದು ಎಂದರು.

ಪರೀಕ್ಷೆ ನಡೆಯುವ ದಿನಗಳಂದು ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಶುಚಿತ್ವ ಕಾಪಾಡುವ ಸಂಬಂಧ ಅಗತ್ಯ  ಕ್ರಮವಹಿಸುವಂತೆ ಮೈಸೂರು ಮಹಾನಗರಪಾಲಿಕೆ ಅಧಿಕಾರಿಗಳಿಗೆ,  ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಠಿಯಿಂದ ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆಯುವಾಗ ಆರೋಗ್ಯದ ಸಮಸ್ಯೆ ಉಂಟಾದಲ್ಲಿ ಅಭ್ಯರ್ಥಿಗಳಿಗೆ ಚಿಕಿತ್ಸೆಯನ್ನು ನೀಡಲು ಅಗತ್ಯ ಸಿಬ್ಬಂದಿಗಳನ್ನು ನಿಯೋಜಿಸುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಕೆ.ಎಸ್.ಆರ್.ಟಿಸಿ ವತಿಯಿಂದ ಪರೀಕ್ಷಾ ದಿನದಂದು ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆಯಲು ಪರೀಕ್ಷಾ ಕೇಂದ್ರದ ಮಾರ್ಗದಲ್ಲಿ ನಿಗಧಿತ ಸಮಯಕ್ಕೆ ತಲುಪುವಂತೆ ಹೆಚ್ಚಿನ ಬಸ್  ವ್ಯವಸ್ಥೆ ಮಾಡುವಂತೆ ತಿಳಿಸಿದರು.

ಪರೀಕ್ಷಾ ಕೇಂದ್ರಗಳಿಗೆ ಪರೀಕ್ಷೆ ನಡೆಯುವ ದಿನಗಳಂದು ನಿರಂತರ ವಿದ್ಯುತ್ ವ್ಯವಸ್ಥೆಯನ್ನು ಕಲ್ಪಿಸಲು  ಚೆಸ್ಕಾಂಗೆ ಅಗತ್ಯ ಕ್ರಮವಹಿಸುವುದು. ಪರೀಕ್ಷಾ ದಿನಗಳಂದು ವಿಕಲಚೇತನ ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆಯಲು ಪರೀಕ್ಷಾ ಕೇಂದ್ರಗಳಿಗೆ ವೀಲ್ ಚೇರ್ ಮತ್ತು ಮೂಲಭೂತ ಅಗತ್ಯ ಕ್ರಮಗಳನ್ನು ಒದಗಿಸುವಂತೆ ತಿಳಿಸಿದರು.

ಸಭೆಯಲ್ಲಿ ನೀಟ್ ಪರೀಕ್ಷೆಯ ಕೋ ಆರ್ಡಿನೇಟರ್  ಡಾ. ಎನ್.ಆರ್ ಶ್ರೀನಾಥ್,  ಜಿಲ್ಲಾಧಿಕಾರಿಗಳ ಕಚೇರಿಯ ಶಿಷ್ಟಾಚಾರ ತಹಶೀಲ್ದಾರ್ ಶಿವಪ್ರಸಾದ್, ಅಗ್ನಿಶಾಮಕ ಅಧಿಕಾರಿ ಗುರುರಾಜ್  ಸೇರಿದಂತೆ ಇನ್ಬಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Key words: preparations, NEET, re-examination, Mysore, ADC, Aishwarya R