ಮೈಸೂರಿನಲ್ಲಿ ಘರ್ಜಿಸಿದ ಜೆಸಿಬಿ: ಫುಟ್‌ ಪಾತ್ ವ್ಯಾಪಾರಿಗಳಿಗೆ ಶಾಕ್, 30ಕ್ಕೂ ಹೆಚ್ಚು ಪೆಟ್ಟಿಗೆ ಅಂಗಡಿಗಳು ನೆಲಸಮ

ಮೈಸೂರು,ಜುಲೈ,10,2026 (www.justkannada.in): ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಫುಟ್‌ ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಭರ್ಜರಿಯಾಗಿ ನಡೆಯುತ್ತಿದ್ದು, ಮೈಸೂರು ಮಹಾನಗರ ಪಾಲಿಕೆಯ ಜೆಸಿಬಿ ಘರ್ಜನೆಗೆ ಅನಧಿಕೃತ ಕಟ್ಟಡಗಳು ನೆಲಸಮವಾಗಿವೆ.

ಮೈಸೂರು ಮಹಾನಗರ ಪಾಲಿಕೆಯ ವಲಯ ಕಚೇರಿ-5ರ ವ್ಯಾಪ್ತಿಯ ಮೇಟಗಳ್ಳಿ ಪ್ರದೇಶದಲ್ಲಿ ಶುಕ್ರವಾರ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲಾಯಿತು. ಕೆ.ಆರ್.ಎಸ್. ಮುಖ್ಯ ರಸ್ತೆಯ ಫುಟ್‌ಪಾತ್ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಅನಧಿಕೃತವಾಗಿ ನಿರ್ಮಿಸಲಾಗಿದ್ದ ಪೆಟ್ಟಿಗೆ ಅಂಗಡಿಗಳು, ಶೆಡ್‌ ಗಳು, ತಳ್ಳುವ ಗಾಡಿಗಳು ಹಾಗೂ ಜಾಹೀರಾತು ಫಲಕಗಳನ್ನು ತೆರವುಗೊಳಿಸಲಾಯಿತು.

ಜೆಸಿಬಿ ಯಂತ್ರದ ಸಹಾಯದಿಂದ ನಡೆದ ಕಾರ್ಯಾಚರಣೆಯಲ್ಲಿ 30ಕ್ಕೂ ಹೆಚ್ಚು ಪೆಟ್ಟಿಗೆ ಅಂಗಡಿಗಳು ಮತ್ತು ಇತರೆ ಅನಧಿಕೃತ ನಿರ್ಮಾಣಗಳನ್ನು ತೆರವುಗೊಳಿಸಲಾಗಿದೆ. ಇದರಿಂದ ಹಲವು ವರ್ಷಗಳಿಂದ ಫುಟ್‌ ಪಾತ್ ಒತ್ತುವರಿ ಮಾಡಿಕೊಂಡಿದ್ದ ವ್ಯಾಪಾರಿಗಳಿಗೆ ಅಚ್ಚರಿ ಹಾಗೂ ಆತಂಕ ಎದುರಾಯಿತು.

ಮೈಸೂರು ಮಹಾನಗರ ಪಾಲಿಕೆಯ ನೂತನ ಆಯುಕ್ತೆ ಎಂ.ಕೆ. ಸವಿತಾ ಅವರ ಮಾರ್ಗದರ್ಶನದಲ್ಲಿ ವಲಯ ಕಚೇರಿ-5ರ ಸಹಾಯಕ ಕಾರ್ಯಪಾಲಕ ಎಂಜಿನಿಯರ್ (ಎಇಇ) ಯತೀಂದ್ರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಿತು.

ಕಾರ್ಯಾಚರಣೆಯಲ್ಲಿ ವರ್ಕ್ ಇನ್ಸ್‌ ಪೆಕ್ಟರ್ ನಾಗರಾಜು, ಹೆಲ್ತ್ ಇನ್ಸ್‌ ಪೆಕ್ಟರ್ ಗೀತಾ, ಮೇಟಗಳ್ಳಿ ಪೊಲೀಸ್ ಠಾಣೆಯ ಇನ್ಸ್‌ ಪೆಕ್ಟರ್ ಅರುಣ್ ಸೇರಿದಂತೆ ಪಾಲಿಕೆ ಹಾಗೂ ಪೊಲೀಸ್ ಇಲಾಖೆಯ ಸಿಬ್ಬಂದಿ ಭಾಗವಹಿಸಿದ್ದರು.

ನಗರದ ವಿವಿಧ ಭಾಗಗಳಲ್ಲಿ ಫುಟ್‌ ಪಾತ್‌ ಗಳನ್ನು ಸಾರ್ವಜನಿಕರ ಸಂಚಾರಕ್ಕೆ ಮುಕ್ತಗೊಳಿಸುವ ಉದ್ದೇಶದಿಂದ ಮುಂದಿನ ದಿನಗಳಲ್ಲಿಯೂ ಒತ್ತುವರಿ ತೆರವು ಕಾರ್ಯಾಚರಣೆ ಮುಂದುವರಿಯಲಿದೆ ಎಂದು ಪಾಲಿಕೆ ಅಧಿಕಾರಿಗಳು ತಿಳಿಸಿದ್ದಾರೆ.

Key words: JCB, Mysore, footpath traders, shops, Encroachment clearance