ಯುವಜನತೆಗಾಗಿ ಹೊಸ ಅವಕಾಶ : ಮೈ ಭಾರತ್ ಪೋರ್ಟಲ್‌ ನಲ್ಲಿ ನೋಂದಣಿ ಆರಂಭ – ADC ಆರ್. ಐಶ್ವರ್ಯ

ಮೈಸೂರು, ಜುಲೈ, 14,2026 (www.justkannada.in): ಭಾರತ ಸರ್ಕಾರದ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯವು ದೇಶದ ಯುವಜನತೆಗಾಗಿ ವಿನೂತನ ಅವಕಾಶಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಮೈ ಭಾರತ್  ಪೋರ್ಟಲ್ ಅನ್ನು ಅನಾವರಣಗೊಳಿಸಿದೆ. ಈ ಪೋರ್ಟಲ್ ಮೂಲಕ 15 ರಿಂದ 29 ವರ್ಷದೊಳಗಿನ ಯುವಕರಿಗೆ ಉದ್ಯೋಗಾವಕಾಶಗಳು, ಕೌಶಲ್ಯ ಅಭಿವೃದ್ಧಿ ಹಾಗೂ ಇಂಟರ್ನ್‌ಶಿಪ್‌ ಗಳನ್ನು ಉಚಿತವಾಗಿ ಪಡೆಯುವ ಅವಕಾಶವನ್ನು ನೀಡಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಆರ್ ಐಶ್ವರ್ಯ ಅವರು ಹೇಳಿದರು.

ಇಂದು ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆದ ಮೈ ಭಾರತ್ ತುರ್ತು ನೋಂದಣಿ ಅಭಿಯಾನದ ಅಧ್ಯಕ್ಷತೆ ವಹಿಸಿ  ಅಪರ ಜಿಲ್ಲಾಧಿಕಾರಿ ಆರ್ ಐಶ್ವರ್ಯ ಅವರು ಮಾತನಾಡಿದದರು.

ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಇಂಟರ್ನ್‌ಶಿಪ್ ಮಾಡಲು ಅವಕಾಶವಿದ್ದು, ಇದು ವಿದ್ಯಾರ್ಥಿಗಳಿಗೆ ತಮ್ಮ ಅಧ್ಯಯನ ಅವಧಿಯಲ್ಲಿಯೇ ಕೈಗಾರಿಕೆ ಅಥವಾ ಸರ್ಕಾರಿ ಕೆಲಸದ ಅನುಭವವನ್ನು ಪಡೆಯಲು ಸಹಕಾರಿಯಾಗಲಿದೆ. ವಿದ್ಯಾರ್ಥಿಗಳಿಗೆ ತರಬೇತಿ ಮತ್ತು ವೃತ್ತಿಪರ ಕೌಶಲ್ಯಗಳನ್ನು ಕಲಿಸಲು ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದು ಹೇಳಿದರು.

ದೇಶದ ಯುವಕರಿಗಾಗಿ ರಾಷ್ಟ್ರೀಯ ಮಟ್ಟದ ಶಿಬಿರಗಳನ್ನು ಉಚಿತವಾಗಿ ನಡೆಸಲಾಗುವುದು. ಸರ್ಕಾರವು ದೇಶದಾದ್ಯಂತ 5 ಕೋಟಿ ಯುವಕರನ್ನು ಈ ಪೋರ್ಟಲ್‌ ನಲ್ಲಿ ನೋಂದಾಯಿಸುವ ಗುರಿಯನ್ನು ಹೊಂದಿದೆ. ಈ ನಿಟ್ಟಿನಲ್ಲಿ ಪ್ರತಿ ಜಿಲ್ಲೆಗೆ 1 ಲಕ್ಷ ಯುವಕರ ನೋಂದಣಿಯ ಗುರಿಯನ್ನು ನಿಗದಿಪಡಿಸಲಾಗಿದೆ ಎಂದರು.

ಶಿಕ್ಷಣ ಇಲಾಖೆ, ಎನ್.ಎಸ್.ಎಸ್  ಮತ್ತು ವಿವಿಧ ಕಾಲೇಜುಗಳು ತಮ್ಮ ವಿದ್ಯಾರ್ಥಿಗಳನ್ನು ಈ ಪೋರ್ಟಲ್‌ನಲ್ಲಿ ನೋಂದಾಯಿಸಿಕೊಳ್ಳಲು ಉತ್ತೇಜಿಸಬೇಕು. ಪ್ರತಿ ಇಲಾಖೆಯು ಒಬ್ಬ ನೋಡಲ್ ಅಧಿಕಾರಿಯನ್ನು ಮತ್ತು ವಿದ್ಯಾರ್ಥಿಗಳ ಪ್ರತಿನಿಧಿಯನ್ನು ನೋಡಲ್ ಅಂಬಾಸಿಡರ್ ಆಗಿ ನೇಮಕ ಮಾಡುವ ಮೂಲಕ ಈ ನೋಂದಣಿ ಪ್ರಕ್ರಿಯೆಯನ್ನು ಯಶಸ್ವಿಗೊಳಿಸಲು ಸೂಚಿಸಲಾಗಿದೆ ಎಂದರು.

ವಿಕಸಿತ್ ಭಾರತ್ ಪಾದಯಾತ್ರೆ ಮೂಲಕ ಯುವಕರಲ್ಲಿ ಜಾಗೃತಿ ಮೂಡಿಸಲು ಯೋಜನೆ ರೂಪಿಸಲಾಗಿದೆ. ಸ್ವಾತಂತ್ರ್ಯ ಹೋರಾಟಗಾರರ ಜೀವನ ಮತ್ತು ವಿವಿಧ ಮಹತ್ವದ ದಿನಗಳ ಕುರಿತು ಯುವಜನರಲ್ಲಿ ಅರಿವು ಮೂಡಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ.  ಮಾದಕ ವಸ್ತುಗಳ ಸೇವನೆಯ ದುಷ್ಪರಿಣಾಮಗಳ ಕುರಿತು ಯುವಕರು, ಕಾಲೇಜು ವಿದ್ಯಾರ್ಥಿಗಳು ಹಾಗೂ ವಿವಿಧ ಯುವ ಸಂಘಟನೆಗಳ ಮೂಲಕ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲು ನಿರ್ಧರಿಸಲಾಗಿದೆ ಎಂದು ಹೇಳಿದರು.

ದೇಶದಾದ್ಯಂತ ವಿವಿಧ ರಾಜ್ಯಗಳಿಂದ ಆಯ್ಕೆಯಾದ 250 ವಿದ್ಯಾರ್ಥಿಗಳಿಗೆ ಈ ಶಿಬಿರವನ್ನು ಆಯೋಜಿಸಲಾಗುತ್ತದೆ. ಇದು ಸಾಂಸ್ಕೃತಿಕ ವಿನಿಮಯ ಮತ್ತು ರಾಷ್ಟ್ರೀಯ ಏಕೀಕರಣವನ್ನು ಉತ್ತೇಜಿಸುವ ಕಾರ್ಯಕ್ರಮವಾಗಿದೆ. ಈ ಬಾರಿ ಮೈಸೂರಿನಲ್ಲಿಯೂ ಒಂದು ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಹಾಗೂ ಗ್ರಾಮೀಣ ಭಾಗದ ಯುವಜನರಿಗೆ ಸ್ವಯಂ ಉದ್ಯೋಗವನ್ನು ಉತ್ತೇಜಿಸಲು ವಿವಿಧ ಕೌಶಲ್ಯ ತರಬೇತಿಯನ್ನು ನೀಡಲಾಗುತ್ತದೆ ಎಂದು ಹೇಳಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳು ಯುವಜನರಿಗೆ ಹೇಗೆ ಪ್ರಯೋಜನಕಾರಿಯಾಗಬಹುದು ಎಂಬ ಬಗ್ಗೆ ಅರಿವು ಮೂಡಿಸಲು, ವಿವಿಧ ಇಲಾಖೆಗಳ ಸಮನ್ವಯದೊಂದಿಗೆ ಈ ಕಾರ್ಯಕ್ರಮಗಳನ್ನು ರೂಪಿಸಲಾಗುತ್ತದೆ. ಸ್ಥಳೀಯವಾಗಿ ನೋಂದಾಯಿತ ಯುವಜನ ಕ್ಲಬ್‌ ಗಳ ಪ್ರತಿಭಾನ್ವಿತ ಕ್ರೀಡಾಪಟುಗಳಿಗಾಗಿ ಅವರ ಪ್ರತಿಭೆಯನ್ನು ಪ್ರದರ್ಶಿಸಲು ವೇದಿಕೆಯನ್ನು ಕಲ್ಪಿಸಲಾಗುತ್ತದೆ. ವಿದ್ಯಾರ್ಥಿಗಳಿಗೆ ಸರ್ಕಾರಿ ಯೋಜನೆಗಳು ಮತ್ತು ಲಭ್ಯವಿರುವ ಸೌಲಭ್ಯಗಳ ನೇರ ಪ್ರಯೋಜನ ತಲುಪಿಸುವುದು ಈ ಕಾರ್ಯಕ್ರಮದ ಮುಖ್ಯ ಗುರಿಯಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಮೈ ಭಾರತ್ ನ ಜಿಲ್ಲಾ ಯುವ ಅಧಿಕಾರಿ ಅಖಿಲ್. ಪಿ ಇನ್ಕಮ್ ಅಂಡ್ ಕಾಮರ್ಸ್ ನ ಡೆಪ್ಯೂಟಿ ಡೈರೆಕ್ಟರ್ ಆದ ಸೈಹಾದ್ ನಜೀರ್ ಅಹ್ಮದ್, ಲೀಡ್ ಬ್ಯಾಂಕ್ ನ  ಮುಖ್ಯ ವ್ಯವಸ್ಥಾಪಕ ಕೃಷ್ಣಮೂರ್ತಿ, DPEO, DDPE ಅಧಿಕಾರಿಯಾದ ಎಂ. ಎಸ್ ವಿಜಯಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

Key words: Registration, begins , My Bharat portal, Mysore, ADC, R. Aishwarya