ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಿ-ಸಚಿವ ಡಾ.  ಯತೀಂದ್ರ ಸಿದ್ದರಾಮಯ್ಯ ಸೂಚನೆ

ಮೈಸೂರು ಜುಲೈ, 15,2026 (www.justkannada.in): ಜಿಲ್ಲೆಯಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಬೇಕು. ಕಾಮಗಾರಿಗಳಲ್ಲಿ ಗುಣಮಟ್ಟವನ್ನು ಕಾಯ್ದುಕೊಳ್ಳಬೇಕು ಎಂದು ನಗರಾಭಿವೃದ್ಧಿ ಸಚಿವಹಾಗೂ  ಮೈಸೂರು ಮತ್ತು ಚಾಮರಾಜನಗರ  ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ತಿಳಿಸಿದರು.

ಇಂದು ಜಿಲ್ಲಾ ಪಂಚಾಯತ್ ನ ಡಿ ದೇವರಾಜ ಅರಸು ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ  ಸಚಿವ ಯತೀಂದ್ರ ಸಿದ್ದರಾಮಯ್ಯಅವರು ಮಾತನಾಡಿದರು.

ಮೈಸೂರು ನಗರದಲ್ಲಿ ವೈಟ್ ಟ್ಯಾಪಿಂಗ್ ಮಾಡುತ್ತಿರುವ ಕಡೆ ಜನರಿಗೆ ಮಾಹಿತಿ ನೀಡಬೇಕು. ಇನ್ನೂ ಪ್ರಾರಂಭವಾಗದೆ ಇರುವ ವೈಟ್ ಟೈಪಿಂಗ್ ಕಾಮಗಾರಿಗಳನ್ನು ದಸರಾ ಮುಗಿದ ಮೇಲೆ ಪ್ರಾರಂಭಿಸಿ. ದಸರಾದಲ್ಲಿ ಹೆಚ್ಚಿನ ವಾಹನ ದಟ್ಟಣೆ ಉಂಟಾಗುತ್ತದೆ. ವಾಹನ ದಟ್ಟಣೆ ಆಗದಂತೆ ಹೆಚ್ಚಿನ ಕ್ರಮಗಳನ್ನು ಕೈಗೊಳ್ಳಿ ಎಂದು ಸೂಚನೆ ನೀಡಿದರು.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ಮಣಿಪಾಲ್ ಆಸ್ಪತ್ರೆ  ಸರ್ಕಲ್ ಬಳಿ ವೈಟ್ ಟ್ಯಾಪಿಂಗ್ ಕಾಮಗಾರಿ ಮಾಡುತ್ತಿದ್ದು ಇಲ್ಲಿ ಹೆಚ್ಚಿನ ವಾಹನ ದಟ್ಟಣೆ ಉಂಟಾಗುತ್ತಿದೆ. ದಸರಾ ಪ್ರಾರಂಭವಾದಾಗ ಕಾಮಗಾರಿ ನಿಲ್ಲಿಸಿ, ವಾಹನ ಸಂಚಾರಕ್ಕೆ ಸುಗಮ ವ್ಯವಸ್ಥೆ ಮಾಡಿ, ದಸರಾ ಮುಗಿದ ನಂತರ ಕಾಮಗಾರಿ ಮುಂದುವರಿಸಿ ಎಂದು ಸೂಚನೆ ನೀಡಿದರು.

ಕಾಮಗಾರಿಗಳು ನಿಗದಿತ ಅವಧಿಯಲ್ಲಿ ಪೂರ್ಣಗೊಳ್ಳಬೇಕು. ಯಾವುದೇ ಕಾರಣಕ್ಕೂ ವಿಳಂಬವಾಗಬಾರದು. ಮೈಸೂರು – ಟಿ ನರಸೀಪುರ ರಸ್ತೆ ವೈಜ್ಞಾನಿಕವಾಗಿ ಇಲ್ಲ. ಇದರಿಂದ ಅಪಘಾತಗಳು ಆಗುತ್ತಿವೆ ಈ ಬಗ್ಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು ಗಮನ ಹರಿಸಬೇಕು ಎಂದು ಸೂಚನೆ ನೀಡಿದರು.

ಮೈಸೂರು ಮಹಾನಗರ ಪಾಲಿಕೆಯ ವತಿಯಿಂದ ಮೈಸೂರು ನಗರದ ರಸ್ತೆಗಳ ನವೀಕರಣ ಕಾಮಗಾರಿಗಳನ್ನು ದಸರಾ ಪ್ರಾರಂಭವಾಗುವ ಒಂದು ವಾರದ ಮುಂಚೆಯೇ ಪೂರ್ಣಗೊಳಿಸಬೇಕು ಕಾಮಗಾರಿಗಳಲ್ಲಿ ಗುಣಮಟ್ಟವನ್ನು ಕಾಯ್ದುಕೊಳ್ಳಬೇಕು ಎಂದರು.

ರಾಜ್ಯದಲ್ಲಿ ಬರ ಪರಿಸ್ಥಿತಿ ಇದೆ. ಜಿಲ್ಲೆಯಲ್ಲಿ ಕುಡಿಯುವ ನೀರಿನ ಕೊರತೆ ಉಂಟಾಗಬಾರದು. ಕುಡಿಯುವ ನೀರಿನ ಪೂರೈಕೆಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಿ. ಯಾವುದೇ ಹಳ್ಳಿಯಲ್ಲಿಯೂ ಕುಡಿಯುವ ನೀರಿನ ತೊಂದರೆ ಉಂಟಾಗಬಾರದು. ಶುದ್ಧ ಕುಡಿಯುವ ನೀರಿನ ಪೂರೈಕೆ ಆಗಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯ ನಿರ್ವಹಿಸಬೇಕು. ಬರ ನಿರ್ವಹಣೆಯನ್ನು ಅಧಿಕಾರಿಗಳು ಸಮರ್ಥವಾಗಿ ಎದುರಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಜಿ ಲಕ್ಷ್ಮೀಕಾಂತ ರೆಡ್ಡಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್ ಯುಕೇಶ್ ಕುಮಾರ್, ಮೈಸೂರು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರು ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Key words: Complete, works, Mysore, Minister, Dr. Yathindra Siddaramaiah