Thursday, August 20, 2026

BDA Apartments

Home Front Page 15 ಸಾವಿರ ಶಿಕ್ಷಕರ ನೇಮಕಾತಿ: ಅಭ್ಯರ್ಥಿಗಳ ಗೊಂದಲ ನಿವಾರಣೆಗೆ FAQ ಪ್ರಕಟ

15 ಸಾವಿರ ಶಿಕ್ಷಕರ ನೇಮಕಾತಿ: ಅಭ್ಯರ್ಥಿಗಳ ಗೊಂದಲ ನಿವಾರಣೆಗೆ FAQ ಪ್ರಕಟ

ಬೆಂಗಳೂರು, ಆಗಸ್ಟ್,20,2026 (www.justkannada.in): ರಾಜ್ಯದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 15 ಸಾವಿರ ಶಿಕ್ಷಕರ ನೇಮಕಾತಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿದ್ದು, ಅಭ್ಯರ್ಥಿಗಳಿಗೆ ನೇಮಕಾತಿ ಪ್ರಕ್ರಿಯೆ ಕುರಿತು ಉಂಟಾಗಿರುವ ಗೊಂದಲಗಳನ್ನು ನಿವಾರಿಸಲು FAQ (ಪದೇ ಪದೇ ಕೇಳಲಾಗುವ ಪ್ರಶ್ನೆಗಳಿಗೆ ಉತ್ತರಗಳು) ಪ್ರಕಟಿಸಲಾಗಿದೆ ಎಂದು ಮಾನ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವ ಮಧು ಬಂಗಾರಪ್ಪ ಅವರು ತಿಳಿಸಿದ್ದಾರೆ.

ಜಿಲ್ಲಾವಾರು ಪ್ರತ್ಯೇಕ ಅಧಿಸೂಚನೆ ಪ್ರಕಟಿಸಲಾಗಿದ್ದು, ನೇಮಕಾತಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ಅಧಿಸೂಚನೆಯಲ್ಲಿ ಒದಗಿಸಲಾಗಿದೆ. ಆದರೂ ಮೀಸಲಾತಿ, ವಿದ್ಯಾರ್ಹತೆ, ವಯೋಮಿತಿ ಸೇರಿದಂತೆ ವಿವಿಧ ವಿಷಯಗಳ ಕುರಿತು ಅನೇಕ ಅಭ್ಯರ್ಥಿಗಳಿಗೆ ಗೊಂದಲ ಇರುವುದನ್ನು ಗಮನಿಸಿ, ಅವರ ಅನುಕೂಲಕ್ಕಾಗಿ FAQ ಪ್ರಕಟಿಸಲಾಗಿದೆ. ಇದರಿಂದ ಬಹುತೇಕ ಅಭ್ಯರ್ಥಿಗಳ ಗೊಂದಲ ನಿವಾರಣೆಯಾಗಲಿದೆ ಎಂಬ ವಿಶ್ವಾಸವಿದೆ ಎಂದು ಸಚಿವರು ಹೇಳಿದ್ದಾರೆ.

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೊದಲು ಸಂಬಂಧಪಟ್ಟ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಂಡು, ತಮ್ಮ ಅರ್ಹತೆಯನ್ನು ಖಚಿತಪಡಿಸಿಕೊಂಡ ನಂತರ ಅರ್ಜಿ ಸಲ್ಲಿಸಬೇಕು. ಅರ್ಜಿಯೊಂದಿಗೆ ಅಗತ್ಯವಿರುವ ಸರಿಯಾದ ದಾಖಲೆಗಳನ್ನು ಮಾತ್ರ ಒದಗಿಸುವಂತೆ ಸಚಿವರು ಮನವಿ ಮಾಡಿದ್ದಾರೆ.

ಅಧಿಸೂಚನೆ ಹಾಗೂ FAQ ಓದಿದ ನಂತರವೂ ಯಾವುದೇ ಗೊಂದಲ ಅಥವಾ ಅನುಮಾನ ಬಗೆಹರಿಯದಿದ್ದಲ್ಲಿ ಅಭ್ಯರ್ಥಿಗಳು ಸಹಾಯವಾಣಿ ಸಂಖ್ಯೆ 080-22483145, 080-22483140 ಅಥವಾ ಮೊಬೈಲ್ ನಂಬರ್ 9449588020 ಗೆ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

ಪಾರದರ್ಶಕ ನೇಮಕಾತಿಗೆ ಕ್ರಮ

ಶಿಕ್ಷಕರ ನೇಮಕಾತಿ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಪಾರದರ್ಶಕವಾಗಿ ನಡೆಸಲು ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಉದ್ಯೋಗ ಕೊಡಿಸುವುದಾಗಿ ಆಮಿಷವೊಡ್ಡುವುದು, ಪರೀಕ್ಷೆಯಲ್ಲಿ ಅಕ್ರಮ ನಡೆಸಲು ಅವಕಾಶ ಕಲ್ಪಿಸುವುದಾಗಿ ಹೇಳಿ ಹಣಕ್ಕೆ ಬೇಡಿಕೆ ಇಡುವುದು ಸೇರಿದಂತೆ ಯಾವುದೇ ಅಕ್ರಮ ಚಟುವಟಿಕೆಗಳಿಗೆ ಅವಕಾಶ ನೀಡುವುದಿಲ್ಲ ಎಂದು ಸಚಿವ ಮಧು ಬಂಗಾರಪ್ಪ ಸ್ಪಷ್ಟಪಡಿಸಿದ್ದಾರೆ.

ಯಾರಾದರೂ ಉದ್ಯೋಗ ಕೊಡಿಸುವುದಾಗಿ ಹಣ ಕೇಳಿದರೆ ಅಥವಾ ಪರೀಕ್ಷೆಯಲ್ಲಿ ಅಕ್ರಮಕ್ಕೆ ಅವಕಾಶ ನೀಡುವುದಾಗಿ ಆಮಿಷವೊಡ್ಡಿದರೆ ಅಂತಹವರ ಕುರಿತು ಕೂಡಲೇ ಇಲಾಖೆಯ ಗಮನಕ್ಕೆ ತರಬೇಕು. ನೇಮಕಾತಿ ಪ್ರಕ್ರಿಯೆಯಲ್ಲಿ ಯಾವುದೇ ರೀತಿಯ ಅಕ್ರಮಕ್ಕೆ ಅವಕಾಶ ನೀಡದೆ, ಅರ್ಹತೆ ಮತ್ತು ನಿಯಮಗಳ ಆಧಾರದ ಮೇಲೆ ಪಾರದರ್ಶಕವಾಗಿ ನೇಮಕಾತಿ ನಡೆಸಲಾಗುವುದು ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

Key words: Recruitment, 15,000 teachers, FAQ, published, Minister, Madhu Bangarappa