Monday, August 31, 2026

BDA Apartments

Home Front Page ಖಾಲಿ ಇರುವ 61,000 ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡದಿದ್ರೆ ರಾಜ್ಯಾದ್ಯಂತ ಬೃಹತ್ ಹೋರಾಟ-ಆರ್.ಅಶೋಕ್

ಖಾಲಿ ಇರುವ 61,000 ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡದಿದ್ರೆ ರಾಜ್ಯಾದ್ಯಂತ ಬೃಹತ್ ಹೋರಾಟ-ಆರ್.ಅಶೋಕ್

ಬೆಂಗಳೂರು,ಆಗಸ್ಟ್,31,2026 (www.justkannada.in):  ರಾಜ್ಯದಲ್ಲಿ ಸಾವಿರಾರು ಸರ್ಕಾರಿ ಶಾಲಾ ಶಿಕ್ಷಕರ ಹುದ್ದೆಗಳು ಖಾಲಿ ಇದ್ದರೂ ಕೇವಲ 15 ಸಾವಿರ ಶಿಕ್ಷಕರ ನೇಮಕಾತಿಗೆ ಮುಂದಾಗಿರುವ ಅದರಲ್ಲೂ ಕಿರಿಯ ಪ್ರಾಥಮಿಕ ಶಾಲೆಗಳಲ್ಲಿ ಹೆಚ್ಚು ಶಿಕ್ಷಕರ ಕೊರತೆ ಇದ್ದರೂ ಹೆಚ್ಚಿನ ಸಂಖ್ಯೆಯಲ್ಲಿ ಇವುಗಳನ್ನು ಭರ್ತಿ ಮಾಡಲು  ರಾಜ್ಯ ಸರ್ಕಾರದ ಮುಂದಾಗಿಲ್ಲ. ಈ ಹಿನ್ನೆಲೆಯಲ್ಲಿ  ಖಾಲಿ ಇರುವ 60 ಸಾವಿರ ಶಿಕ್ಷಕರ ನೇಮಕಾತಿಗೆ ವಿಪಕ್ಷ ನಾಯಕ ಆರ್.ಅಶೋಕ್  ಆಗ್ರಹಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಆರ್.ಅಶೋಕ್, ಅಶೋಕ್ I am an educationist by choice ಎಂದು ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುವ ಮುಖ್ಯಮಂತ್ರಿ ಡಿಕೆ ಶಿವಕುಮಾರ್  ಅವರೇ, ನಿಮ್ಮ ಕಾಂಗ್ರೆಸ್ ಸರ್ಕಾರಕ್ಕೆ ನಾಚಿಕೆಗೇಡಿನ ವಿಷಯವಲ್ಲವೇ?

ನೀವು ಆಡಳಿತದಲ್ಲಿ ರಾಜ್ಯದ ಬಡ ಮಕ್ಕಳು ಕಲಿಯುವ ಸರ್ಕಾರಿ ಶಾಲೆಗಳ ಸ್ಥಿತಿ ಏನಾಗಿದೆ ಎಂದು ಒಮ್ಮೆಯಾದರೂ ತಿರುಗಿ ನೋಡಿದ್ದೀರಾ? ಎಂದು ಕಿಡಿಕಾರಿದ್ದಾರೆ.

61,000 ಶಿಕ್ಷಕರ ಅಭಾವ: ರಾಜ್ಯದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 61,000 ಶಿಕ್ಷಕರ ಹುದ್ದೆಗಳು ಖಾಲಿ ಬಿದ್ದಿವೆ. ನೀವು ಭರ್ತಿ ಮಾಡುತ್ತಿರುವುದು ಕೇವಲ 15,000 ಹುದ್ದೆಗಳನ್ನು ಮಾತ್ರ. ಇನ್ನುಳಿದ 46,000 ಹುದ್ದೆಗಳನ್ನು ಖಾಲಿ ಬಿಟ್ಟು, ಲಕ್ಷಾಂತರ ಬಡ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯವನ್ನು ಕತ್ತಲೆಗೆ ತಳ್ಳುವುದು ನಿಮ್ಮ “ಶಿಕ್ಷಣ ಪ್ರೇಮವೇ”? ಸರ್ಕಾರಕ್ಕೆ ಆರ್.ಅಶೋಕ್ ಕುಟುಕಿದ್ದಾರೆ.

ಖಾಸಗಿ ಮಾಫಿಯಾಗೆ ಸಾಥ್: ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರೇ ಇಲ್ಲದಂತೆ ಮಾಡಿ, ಬಡ ಮತ್ತು ಮಧ್ಯಮ ವರ್ಗದ ಪೋಷಕರು ಅನಿವಾರ್ಯವಾಗಿ ಲಕ್ಷಾಂತರ ರೂಪಾಯಿ ಡೊನೇಷನ್ ನೀಡಿ ಖಾಸಗಿ ಶಾಲೆಗಳಿಗೆ ಸೇರುವಂತೆ ಮಾಡುವುದು ನಿಮ್ಮ ಸರ್ಕಾರದ ಅಸಲಿ ಸಂಚೇ? ಎಂದು ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.

ಹಾಗೆಯೇ ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ಕಲ್ಲು ಹಾಕುತ್ತಿರುವ ಈ ಕಾಂಗ್ರೆಸ್ ಸರ್ಕಾರಕ್ಕೆ ಜನರೇ ತಕ್ಕ ಪಾಠ ಕಲಿಸಲಿದ್ದಾರೆ! ತಕ್ಷಣವೇ ಖಾಲಿ ಇರುವ ಎಲ್ಲಾ 61,000 ಹುದ್ದೆಗಳನ್ನು ಭರ್ತಿ ಮಾಡದಿದ್ದರೆ, ಬಿಜಿಪಿ ರಾಜ್ಯಾದ್ಯಂತ ಬೃಹತ್ ಹೋರಾಟ ಕೈಗೆತ್ತಿಕೊಳ್ಳಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

Key words: protest, 61,000 vacant teacher, posts, not filled, R. Ashok