ಮೈಸೂರು,ಸೆಪ್ಟಂಬರ್,1,2026 (www.justkannada.in): ರಾಜ್ಯದಲ್ಲಿ ಮಳೆ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿ ಹಾಗೂ ಬೆಳೆ ಹಾನಿಯನ್ನು ಪರಿಶೀಲಿಸುವ ಹಿನ್ನೆಲೆಯಲ್ಲಿ ಮಾನ್ಯ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ಮೈಸೂರು ಜಿಲ್ಲೆಯ ವಿವಿಧ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ರೈತರ ಸಮಸ್ಯೆಗಳನ್ನು ಆಲಿಸಿದರು.
ಇಂದು ಕೆ.ಆರ್.ನಗರ ತಾಲ್ಲೂಕಿನ ಕಂಚುಗಾರ ಕೊಪ್ಪಲು ಗ್ರಾಮದಲ್ಲಿ ಮಳೆ ಕೊರತೆಯಿಂದ ಹಾನಿಗೊಳಗಾದ ರೈತರ ಜಮೀನಿಗೆ ತೆರಳಿ ಡಿಸಿಎಂ ಡಾ.ಜಿ.ಪರಮೇಶ್ವರ್ ಬರ ವೀಕ್ಷಣೆ ಮಾಡಿದರು. ಬರವೀಕ್ಷಣೆಯ ಸಂದರ್ಭದಲ್ಲಿ ರೈತರೊಂದಿಗೆ ನೇರವಾಗಿ ಮಾತುಕತೆ ನಡೆಸಿದ ಅವರು, ಮಳೆ ಅಭಾವದಿಂದ ಉಂಟಾಗಿರುವ ಬೆಳೆ ನಷ್ಟ, ಕೃಷಿ ಚಟುವಟಿಕೆಗಳ ಮೇಲಿನ ಪರಿಣಾಮ ಹಾಗೂ ರೈತರು ಎದುರಿಸುತ್ತಿರುವ ಸಂಕಷ್ಟಗಳ ಕುರಿತು ಮಾಹಿತಿ ಪಡೆದರು.
ಮಳೆ ಬಾರದ ಕಾರಣ ರಾಗಿ, ಜೋಳ, ಹೊಗೆಸೊಪ್ಪು ಸೇರಿದಂತೆ ವಿವಿಧ ಬೆಳೆಗಳು ಮೊಳಕೆ ಹಂತದಲ್ಲೇ ಒಣಗಿ ನಾಶವಾಗಿರುವುದು ಬರದ ತೀವ್ರತೆಯನ್ನು ತೋರಿಸುತ್ತಿದೆ. ಜಿಲ್ಲೆಯಲ್ಲಿ ಬಿತ್ತನೆಯಾಗಿದ್ದ ಬೆಳೆಗಳು ಮಳೆ ಕೊರತೆಯಿಂದ ಹಾನಿಗೊಳಗಾಗಿವೆ ಎಂದು ಅಧಿಕಾರಿಗಳು ಉಪಮುಖ್ಯಮಂತ್ರಿಗಳ ಗಮನಕ್ಕೆ ತಂದರು.
ಹುಣಸೂರಿನಲ್ಲಿ ಬರಪರಿಶೀಲನೆ
ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ ಡಾ. ಜಿ. ಪರಮೇಶ್ವರ ಅವರು ಇಂದು ಹುಣಸೂರು ತಾಲೂಕಿನ ಬರಪೀಡಿತ ಪ್ರದೇಶವಾದ ಕಟ್ಟೆಮಳಲವಾಡಿ ಗ್ರಾಮದಲ್ಲಿ ಜಮೀನುಗಳಿಗೆ ಭೇಟಿ ನೀಡಿ, ಬರದಿಂದ ಹಾನಿಗೊಳಗಾದ ಮೆಕ್ಕೆಜೋಳ, ಹೊಗೆಸೊಪ್ಪು, ರಾಗಿ ಬೆಳೆಗಳನ್ನು ಪರಿಶೀಲಿಸಿದರು.
ಈ ಸಂದರ್ಭದಲ್ಲಿ ರೈತರ ಸಮಸ್ಯೆಗಳನ್ನು ಆಲಿಸಿದ ಡಿಸಿಎಂ ಅವರು, ಬರ ಪರಿಸ್ಥಿತಿ ಹಾಗೂ ಬೆಳೆ ನಷ್ಟದ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
ಬಿಳಿಸುರಳಿ ರೋಗದಿಂದ ಮೆಕ್ಕೆಜೋಳ ಬೆಳೆ ನಾಶವಾಗುತ್ತಿದ್ದು, ಬೆಳೆ ವಿಮೆ (ಇನ್ಶೂರೆನ್ಸ್) ಮೂಲಕ ಪರಿಹಾರ ದೊರೆಯುತ್ತಿಲ್ಲ ಎಂದು ರೈತರು ತಮ್ಮ ಸಮಸ್ಯೆಯನ್ನು ಡಿಸಿಎಂ ಅವರ ಗಮನಕ್ಕೆ ತಂದರು.
ಈ ವೇಳೆ ಹುಣಸೂರು ಶಾಸಕ ಹರೀಶ್ಗೌಡ, ಕೆ.ಆರ್.ನಗರ ಶಾಸಕ ರವಿಶಂಕರ್, ಮಾಜಿ ಶಾಸಕ ಹೆಚ್.ಪಿ.ಮಂಜುನಾಥ್, ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್ ರೆಡ್ಡಿ ಹಾಗೂ ತಹಶೀಲ್ದಾರ್ ಮತ್ತು ಕೃಷಿ ಅಧಿಕಾರಿಗಳು ಇದ್ದರು.
Key words: DCM, Parameshwara, visits, Mysore, district, inspects, drought







