ಬೆಂಗಳೂರು,ಸೆಪ್ಟಂಬರ್,3,2026 (www.justkannada.in): ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರನ್ನು ಪ್ರಶ್ನಿಸಲು ಯತ್ನಿಸಿದ ವೇಳೆ 4PM ಸುದ್ದಿ ವಾಹಿನಿಯ ಪತ್ರಕರ್ತೆ ಶಾಹಿನ್ ಅವರನ್ನು ಪೊಲೀಸರು ವಶಕ್ಕೆ ಪಡೆದು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಅತ್ಯಂತ ಗಂಭೀರ ಹಾಗೂ ಖಂಡನೀಯವಾಗಿದೆ ಎಂದು ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ ತಿಳಿಸಿದೆ.
ಈ ಕುರಿತು ಎಕ್ಸ್ ನಲ್ಲಿ ಪ್ರತಿಕ್ರಿಯಿಸಿರುವ ಕೆಯುಡಬ್ಲಯುಜೆ, ಈ ಪ್ರಕರಣದ ಕುರಿತು ನ್ಯಾಯಸಮ್ಮತ ಮತ್ತು ಪಾರದರ್ಶಕ ತನಿಖೆ ನಡೆಸಬೇಕು. ಘಟನೆ ನಡೆದ ಸ್ಥಳ ಹಾಗೂ ಪೊಲೀಸ್ ಠಾಣೆಯ ಸಿಸಿಟಿವಿ ದೃಶ್ಯಾವಳಿಗಳನ್ನು ಕೂಡಲೇ ಸಂರಕ್ಷಿಸಿ, ಸತ್ಯಾಂಶವನ್ನು ಬಹಿರಂಗಪಡಿಸಬೇಕು. ತಪ್ಪಿತಸ್ಥ ಪೊಲೀಸ್ ಸಿಬ್ಬಂದಿ ವಿರುದ್ಧ ನಿರ್ದಾಕ್ಷಿಣ್ಯ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದೆ.
ಪತ್ರಕರ್ತರ ಧ್ವನಿಯನ್ನು ಬಲಪ್ರಯೋಗದಿಂದ ಹತ್ತಿಕ್ಕಲು ಸಾಧ್ಯವಿಲ್ಲ. ಪತ್ರಿಕಾ ಸ್ವಾತಂತ್ರ್ಯ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ರಕ್ಷಿಸುವುದು ಪ್ರಜಾಪ್ರಭುತ್ವದ ಮೂಲ ಜವಾಬ್ದಾರಿಯಾಗಿದೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಪತ್ರಕರ್ತೆ ಶಾಹಿನ್ ಅವರೊಂದಿಗೆ ನಿಲ್ಲುತ್ತದೆ ಎಂದು ತಿಳಿಸಿದೆ.
Key words: Journalist, assault, KUWJ condemns, Delhi Police, action






