Tuesday, September 8, 2026

BDA Apartments

Home Front Page TOD ನೀತಿ ಅನುಷ್ಠಾನ: ಅಧಿಕಾರಿಗಳ ಜೊತೆ ಸಭೆ ನಡೆಸಿ ಚರ್ಚಿಸಿದ ಸಚಿವ ಯತೀಂದ್ರ ಸಿದ್ದರಾಮಯ್ಯ

TOD ನೀತಿ ಅನುಷ್ಠಾನ: ಅಧಿಕಾರಿಗಳ ಜೊತೆ ಸಭೆ ನಡೆಸಿ ಚರ್ಚಿಸಿದ ಸಚಿವ ಯತೀಂದ್ರ ಸಿದ್ದರಾಮಯ್ಯ

ಬೆಂಗಳೂರು, ಸೆಪ್ಟೆಂಬರ್ 8,2026 (www.justkannada.in):  ಕರ್ನಾಟಕದ ನಗರಗಳಲ್ಲಿ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಹಾಗೂ ಭವಿಷ್ಯದ ನಗರೀಕರಣಕ್ಕೆ ತಕ್ಕಂತೆ ಸಮಗ್ರ ಸಾರಿಗೆ ವ್ಯವಸ್ಥೆಯನ್ನು ರೂಪಿಸುವ ನಿಟ್ಟಿನಲ್ಲಿ Transit Oriented Development (TOD) Policy – ಸಾರ್ವಜನಿಕ ಸಾರಿಗೆ ಆಧಾರಿತ ಸಮಗ್ರ ಅಭಿವೃದ್ಧಿ ನೀತಿಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಕುರಿತು ಇಂದು ವಿಧಾನಸೌಧದ ಕಚೇರಿಯಲ್ಲಿ ನಗರ ಭೂ ಸಾರಿಗೆ ನಿರ್ದೇಶನಾಲಯದ (DULT) ಅಧಿಕಾರಿಗಳೊಂದಿಗೆ ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಅವರು ಸಭೆ ನಡೆಸಿದರು.

ಕರ್ನಾಟಕದ ನಗರಗಳು ವೇಗವಾಗಿ ವಿಸ್ತರಿಸುತ್ತಿರುವ ಹಿನ್ನೆಲೆಯಲ್ಲಿ, ಮುಂದಿನ ದಿನಗಳಲ್ಲಿ ಜನಸಂಖ್ಯೆ, ನಗರೀಕರಣ ಹಾಗೂ ಸಂಚಾರದ ಪ್ರಮಾಣದಲ್ಲಿ ಉಂಟಾಗುವ ಹೆಚ್ಚಳವನ್ನು ಗಮನದಲ್ಲಿಟ್ಟುಕೊಂಡು ಸಾರಿಗೆ ಮೂಲಸೌಕರ್ಯವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸುವ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಜನರ ಸಂಚಾರವನ್ನು ಸುಗಮ, ವೇಗದ, ಸುರಕ್ಷಿತ, ಕೈಗೆಟುಕುವ ಹಾಗೂ ಪರಿಸರ ಸ್ನೇಹಿಯಾಗಿಸುವ ನವೀನ ಸಾರಿಗೆ ವ್ಯವಸ್ಥೆಗಳನ್ನು ಅಳವಡಿಸಿಕೊಳ್ಳುವ ಕುರಿತು ಸಭೆಯಲ್ಲಿ ವಿಸ್ತೃತವಾಗಿ ಚರ್ಚಿಸಲಾಯಿತು.

ಮೆಟ್ರೋ, ಬಸ್, ರೈಲು ಸೇರಿದಂತೆ ವಿವಿಧ ಸಾರ್ವಜನಿಕ ಸಾರಿಗೆ ವ್ಯವಸ್ಥೆಗಳ ನಡುವೆ ಉತ್ತಮ ಸಮನ್ವಯ ಮತ್ತು ಸಂಪರ್ಕ ಕಲ್ಪಿಸುವುದು, ಸಾರ್ವಜನಿಕ ಸಾರಿಗೆಗೆ ಸುಲಭ ಪ್ರವೇಶ ಕಲ್ಪಿಸುವುದು ಹಾಗೂ ಸಾರಿಗೆ ಕೇಂದ್ರಿತವಾಗಿ ನಗರಗಳ ಅಭಿವೃದ್ಧಿಯನ್ನು ಯೋಜಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.

ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಕೇವಲ ಜನರ ಸಂಚಾರದ ಸಾಧನವಾಗಿ ಪರಿಗಣಿಸದೆ, ಸುಸ್ಥಿರ ಹಾಗೂ ಜನಕೇಂದ್ರಿತ ನಗರಾಭಿವೃದ್ಧಿಯ ಪ್ರಮುಖ ಆಧಾರಸ್ತಂಭವನ್ನಾಗಿ ರೂಪಿಸುವುದು TOD ನೀತಿಯ ಪ್ರಮುಖ ಉದ್ದೇಶವಾಗಿದೆ. ಸಾರಿಗೆ ವ್ಯವಸ್ಥೆ, ವಸತಿ, ಉದ್ಯೋಗ, ವಾಣಿಜ್ಯ ಹಾಗೂ ಸಾರ್ವಜನಿಕ ಸೌಲಭ್ಯಗಳನ್ನು ಪರಸ್ಪರ ಸಮನ್ವಯಗೊಳಿಸುವ ಮೂಲಕ ಜನರ ದೈನಂದಿನ ಸಂಚಾರವನ್ನು ಮತ್ತಷ್ಟು ಸರಳಗೊಳಿಸುವ ಹಾಗೂ ಖಾಸಗಿ ವಾಹನಗಳ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವ ಕುರಿತು ಸಭೆಯಲ್ಲಿ ಸಮಾಲೋಚನೆ ನಡೆಸಲಾಯಿತು.

ಭವಿಷ್ಯದ ನಗರಗಳ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಆಧುನಿಕ ತಂತ್ರಜ್ಞಾನ ಆಧಾರಿತ ಹಾಗೂ ಪರಿಸರ ಸ್ನೇಹಿ ಸಾರಿಗೆ ವ್ಯವಸ್ಥೆಗಳನ್ನು ಅಳವಡಿಸಿಕೊಳ್ಳುವ ಮೂಲಕ ಕರ್ನಾಟಕದ ನಗರಗಳನ್ನು ಮತ್ತಷ್ಟು ಸುಸ್ಥಿರ, ಚಲನಶೀಲ ಮತ್ತು ಜನಸ್ನೇಹಿಯಾಗಿಸುವ ನಿಟ್ಟಿನಲ್ಲಿ TOD ನೀತಿಯ ಪರಿಣಾಮಕಾರಿ ಅನುಷ್ಠಾನಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು.

ಸಭೆಯಲ್ಲಿ ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಾದ ತುಷಾರ್ ಗಿರಿನಾಥ್, ಕಾರ್ಯದರ್ಶಿಗಳಾದ ಬಿ.ಬಿ. ಕಾವೇರಿ, ನಗರ ಭೂ ಸಾರಿಗೆ ನಿರ್ದೇಶನಾಲಯದ ವಿಶೇಷಾಧಿಕಾರಿಯಾದ ಡಾ. ಮೋನಿಕಾ ಕಷ್ಕರಿ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Key words: TOD policy, implementation, Minister, Yathindra Siddaramaiah, meeting