ಕಲ್ಬುರ್ಗಿ,ಸೆಪ್ಟಂಬರ್,17,2026 (www.justkannada.in): 371 ಜೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕೊಡುಗೆ. ಕಲ್ಯಾಣ ಕರ್ನಾಟಕದ ಇತಿಹಾಸ ಬದಲಾಯಿಸಲು ಕಾಂಗ್ರೆಸ್ ಪಕ್ಷ ರಕ್ತ, ಬೆವರು ಹರಿಸಿದೆ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನುಡಿದರು.
ಕಲ್ಬುರ್ಗಿಯ ಕಲ್ಯಾಣ ಕರ್ನಾಟಕ ವಿಮೋಚನಾ ದಿನ, ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ ಸಿಎಂ ಡಿ.ಕೆ ಶಿವಕುಮಾರ್, ಬಸವಣ್ಣನವರ ಹೋರಾಟದ ನೆಲ, ಸಮಾನತೆ, ಮಾನವೀಯತೆ, ಸಹಬಾಳ್ವೆಯ ಸಂದೇಶ ನೀಡಿದ ಪುಣ್ಯಭೂಮಿ ಈ ಕಲ್ಯಾಣ ಕರ್ನಾಟಕ. ಬಸವಣ್ಣನವರು 12 ನೇ ಶತಮಾನದಲ್ಲಿ ಸಾಮಾಜಿಕ ಕ್ರಾಂತಿ ಮಾಡಿದ ನೆಲ ಕಲ್ಯಾಣ ಕರ್ನಾಟಕ. ಸೋನಿಯಾ ಗಾಂಧಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಮಲ್ಲಿಕಾರ್ಜುನ ಖರ್ಗೆ, ಧರಂಸಿಂಗ್, ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ಮುಖಂಡರ ಶ್ರಮದಿಂದ ಕಲ್ಯಾಣ ಕರ್ನಾಟಕದ ಕಲ್ಯಾಣವಾಗುತ್ತಿದೆ ಎಂದರು.
ಸಂತ ಸೇವಾಲಾಲ್ ಹೇಳುತ್ತಾರೆ: ನೀರಿನಿಂದ ಸ್ನಾನ ಮಾಡಿದವನು ಬಟ್ಟೆ ಬದಲಿಸುತ್ತಾನೆ. ಬೆವರಿನಿಂದ ಸ್ನಾನ ಮಾಡಿದವನು ಇತಿಹಾಸ ನಿರ್ಮಿಸುತ್ತಾನೆ. ಇಡುವ ಹೆಜ್ಜೆ ಚಿಕ್ಕದಿರಬಹುದು. ಆದರೆ ಆಲೋಚನೆ ದೊಡ್ಡದಿರಬೇಕು. ಕಟ್ಟಡಗಳ ನಿರ್ಮಾಣದ ಜೊತೆಗೆ ಕಟ್ಟ ಕಡೆಯ ವ್ಯಕ್ತಿಯ ನೆಮ್ಮದಿ ಬದುಕೇ ಅಭಿವೃದ್ಧಿ. ಅತಿ ದೊಡ್ಡ ಸಂಪನ್ಮೂಲಗಳು ನಮ್ಮ ಹೃದಯದಲ್ಲೇ ಇರುತ್ತವೆ. ಅದನ್ನು ಕೊಡುವ ದೊಡ್ದ ಮನಸು ಮಾಡಬೇಕು ಅಷ್ಟೇ. ಸತ್ಯಕ್ಕೆ ಸಮನಿಲ್ಲ. ಹಸ್ತಕ್ಕಿಂತ ಅಧಿಕ ಹಿತವಿಲ್ಲ. ಈ ಹಸ್ತದಿಂದಲೇ ದೇಶದ ಅಭಿವೃದ್ಧಿಯಾಗಿದೆ. ಕರ್ನಾಟಕದ ಅಭಿವೃದ್ಧಿಯಾಗಿದೆ ಎಂದು ಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.
ನಾವು ಮತಕ್ಕಾಗಿ, ಅಲ್ಲ ರಾಜ್ಯದ ಹಿತಕ್ಕಾಗಿ ಕೆಲಸ ಮಾಡುತ್ತೇವೆ. ಪ್ರಜಾಸೇವೆಯೇ ದೇವರ ಸೇವೆ. ಅದಕ್ಕಾಗಿ ಪ್ರಜಾ ಸೇವೆ ಇಲಾಖೆಯನ್ನೇ ಸ್ಥಾಪಿಸಿದ್ದೇವೆ. ಸರಕಾರವನ್ನೇ ನಿಮ್ಮ ಮನೆಬಾಗಿಲಿಗೆ ತಂದು ನಿಮ್ಮ ಸಮಸ್ಯೆ ಪರಿಹರಿಸುತ್ತಿದ್ದೇವೆ. ಪ್ರತಿ 2 ನೇ ಹಾಗೂ 4 ನೇ ಶನಿವಾರ ನಾನೂ ಸೇರಿದಂತೆ ನಮ್ಮ ಮಂತ್ರಿಗಳು, ಶಾಸಕರು ಜಿಲ್ಲೆ, ತಾಲೂಕು, ಹೋಬಳಿ ಮಟ್ಟದಲ್ಲಿ ಪ್ರಜಾಸೇವೆ ಅಭಿಯಾನ ಮಾಡುತ್ತಿದ್ದೇವೆ. ಯುವಕರಲ್ಲಿ ನಾಯಕತ್ವ ಗುಣಗಳನ್ನು ರೂಪಿಸಲು, ಅವರನ್ನು ಸನ್ಮಾರ್ಗದಲ್ಲಿ ಕೊಂಡೊಯ್ಯಲು 10 ಸಾವಿರ ಭಾರತ್ ಜೋಡೋ ಯುವ ಸಂಘಗಳನ್ನು ಸ್ಥಾಪಿಸಲಾಗುತ್ತಿದೆ. ಕ್ರೀಡೆ, ಕಲೆ, ಸಂಗೀತ ಕ್ಷೇತ್ರದಲ್ಲಿ ಅವರ ಪ್ರತಿಭೆ ಅರಳಲು ಅವಕಾಶ ಮಾಡಿಕೊಡಲಾಗುತ್ತಿದೆ ಎಂದು ತಮ್ಮ ಯೋಜನೆ ಬಗ್ಗೆ ಸಿಎಂ ಡಿಕೆಶಿ ವಿವರಿಸಿದರು.
ಕಲ್ಯಾಣ ಕರ್ನಾಟಕಕ್ಕೆ ವಿಮೋಚನೆ ದೊರೆತಿದ್ದು ನಮ್ಮ ಕಾಂಗ್ರೆಸ್ ನಿಂದ.
ಕಲ್ಯಾಣ ಕರ್ನಾಟಕದ ಕಲ್ಯಾಣ ನಮ್ಮ ಆದ್ಯತೆ. ಬೆಂಗಳೂರು ಕರ್ನಾಟಕದ ಕಿರೀಟ. ಕಲ್ಯಾಣ ಕರ್ನಾಟಕ ರಾಜ್ಯದ ಶಕ್ತಿಪೀಠ. ಕಲ್ಯಾಣ ಕರ್ನಾಟಕದಲ್ಲಿ ತುಂಗಭದ್ರಾ, ಕೃಷ್ಣೆಯಂತೆ ಅಭಿವೃದ್ದಿ ಕೂಡ ತುಂಬಿ ಹರಿಯುತ್ತಿದೆ. ಕೊಪ್ಪಳದ ನವಲಿಯಲ್ಲಿ ತುಂಗಭದ್ರಾ ಆಣೆಕಟ್ಟೆಗೆ ಸಮತೋಲನ ಜಲಾಶಯ ನಿರ್ಮಿಸಲು ನಿರ್ಧರಿಸಲಾಗಿದೆ. ಇದಕ್ಕಾಗಿ ಕೇಂದ್ರ ಜಲಶಕ್ತಿ ಸಚಿವ ಸಿ ಆರ್ ಪಾಟೀಲ್ ನೇತೃತ್ವದಲ್ಲಿ ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ ರಾಜ್ಯದ ಮುಖ್ಯಮಂತ್ರಿಗಳನ್ನು ಒಂದೇ ವೇದಿಕೆಯಲ್ಲಿ ಸೇರಿಸಿ ಈ ಐತಿಹಾಸಿಕ ನಿರ್ಣಯ ಕೈಗೊಳ್ಳಲಾಗಿದೆ. ಕಳೆದ 12 ವರ್ಷದಲ್ಲಿ ಕಲ್ಯಾಣ ಕರ್ನಾಟಕಕ್ಕೆ ಸುಮಾರು 25 ಸಾವಿರ ಕೋಟಿ ರೂ.ಗಳ ವಿಶೇಷ ಅನುದಾನ ನೀಡಲಾಗಿದೆ. ಕಲ್ಯಾಣ ಕರ್ನಾಟಕದ ಇತಿಹಾಸ ಬದಲಾಯಿಸಲು ಕಾಂಗ್ರೆಸ್ ಪಕ್ಷ ರಕ್ತ, ಬೆವರು ಹರಿಸಿದೆ.
ಕಲ್ಯಾಣ ಕರ್ನಾಟಕಕ್ಕೆ ವಿಮೋಚನೆ ದೊರೆತಿದ್ದು ನಮ್ಮ ಕಾಂಗ್ರೆಸ್ ನಿಂದ. ದೇಶಕ್ಕೆ ಸ್ವಾತಂತ್ರ್ಯ ಬಂದಿದ್ದರೂ ಕಲ್ಯಾಣ ಕರ್ನಾಟಕಕ್ಕೆ ನಿಜಾಮರು ಸ್ವಾತಂತ್ರ್ಯ ಕೊಟ್ಟಿರಲಿಲ್ಲ. ಆಗ ಕಾಂಗ್ರೆಸ್ ಹೋರಾಟದಿಂದ ಈ ಭಾಗಕ್ಕೆ ಸ್ವಾತಂತ್ರ ಬಂತು. ಸರ್ದಾರ್ ವಲ್ಲಭಾಯಿ ಪಟೇಲ್, ನೆಹರು ಅವರು ಕಲ್ಯಾಣ ಕರ್ನಾಟಕವನ್ನು ಕಾಪಾಡಿದರು ಎಂದು ಸಿಎಂ ಡಿಕೆಶಿ ತಿಳಿಸಿದರು.
ಧರಂಸಿಂಗ್ ಅವರ ವರದಿಯ ಆಧಾರದ ಮೇಲೆ 1990ರಲ್ಲಿ ಹೈದರಾಬಾದ್-ಕರ್ನಾಟಕ ಅಭಿವೃದ್ಧಿ ಮಂಡಳಿ ಸ್ಥಾಪನೆಯಾಯಿತು. 371 ಜೆ ಸೋನಿಯಾ ಗಾಂಧಿ, ಮನಮೋಹನ್ ಸಿಂಗ್ ಹಾಗೂ ಎಐಸಿಸಿ ಅಧ್ಯಕ್ಷರಾದ ಶ್ರೀ ಮಲ್ಲಿಕಾರ್ಜುನ ಖರ್ಗೆ ಅವರ ಕೊಡುಗೆ. 371 ಜೆ ಉದ್ದೇಶ ಏನಪ್ಪಾ ಅಂದ್ರೆ..? ಒಂದು ಮನೆಯಲ್ಲಿ ಒಬ್ಬರಾದರೂ ಸರ್ಕಾರಿ ನೌಕರ ಇರಬೇಕು. ಊರಿಗೆ ಒಬ್ಬರಾದರೂ ಡಾಕ್ಟರ್ ಇರಬೇಕು. ಊರಿಗೆ ಐವರಾದರೂ ಎಂಜಿನಿಯರ್ ಗಳು ಇರಬೇಕು. ಇದೇ 371ಜೆ ಸ್ಥಾನಮಾನದ ನಿಜವಾದ ಕನಸು. ಈ ಕನಸನ್ನು ನನಸು ಮಾಡಿರೋದು ಕಾಂಗ್ರೆಸ್ ಪಕ್ಷ. ಸೋನಿಯಾ ಗಾಂಧಿ ಅವರು ಈ ತಿದ್ದುಪಡಿಗೆ ಲೋಕಸಭೆಯಲ್ಲಿ 404 ಸದಸ್ಯರ ಬೆಂಬಲ ಕೊಡಿಸಿದರು. ಈ ಭಾಗದ ಜನರ ಬದುಕು ಕಟ್ಟಿದ ಮಹಾನ್ ವ್ಯಕ್ತಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ನೀವ್ಯಾರೂ ಮರೆಯಬಾರದು. ಚಿಕ್ಕವಯಸ್ಸಿನಲ್ಲೇ ಕುಟುಂಬದ ಸದಸ್ಯರನ್ನು ಕಳೆದುಕೊಂಡರೂ ಅದರಿಂದ ಅವರು ಕುಗ್ಗಲಿಲ್ಲ. ಬದಲಿಗೆ ಹೋರಾಟದ ಬದುಕು ಕಟ್ಟಿ ಈಗ ರಾಷ್ಟ್ರಮಟ್ಟದ ನಾಯಕರಾಗಿದ್ದಾರೆ ಎಂದು ಬಣ್ಣಿಸಿದರು.
ಆರ್ಟಿಕಲ್ 371 ಜೆ ಜಾರಿಯಾಗಿ 12 ವರ್ಷಗಳಾಗಿವೆ. 25 ಸಾವಿರ ಕೋಟಿ ಅನುದಾನದಲ್ಲಿ ಈಗಾಗಲೇ 14,000 ಕೋಟಿ ರೂ. ಖರ್ಚು ಮಾಡಲಾಗಿದೆ. 41,103 ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. 32,985 ಕಾಮಗಾರಿಗಳು ಪೂರ್ಣಗೊಂಡಿವೆ. 8,118 ಕಾಮಗಾರಿಗಳು ವಿವಿಧ ಹಂತದಲ್ಲಿ ಪ್ರಗತಿಯಲ್ಲಿವೆ. ಈ ಭಾಗದ ಯುವಕರು 371ಜೆ ಯಿಂದ ಬದುಕು ಕಟ್ಟಿಕೊಳ್ಳುತ್ತಿದ್ದಾರೆ. ಇಲ್ಲಿಯವರೆಗೆ 79,383 ಸಾವಿರ ಯುವಕರಿಗೆ ಉದ್ಯೋಗ ಕಲ್ಪಿಸಲಾಗಿದೆ. ಈಗ 72 ಸಾವಿರ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಇದರಲ್ಲಿ 32 ಸಾವಿರ ಹುದ್ದೆಗಳು ಈ ಭಾಗದ ಜನರಿಗೆ ದೊರೆಯಲಿವೆ. ಈ ಭಾಗದ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಪ್ರತಿವರ್ಷ 5 ಸಾವಿರ ಕೋಟಿ ರೂ. ನೀಡಿದೆ ಎಂದು ಮಾಹಿತಿ ನೀಡಿದರು.
ಮಲ್ಲಿಕಾರ್ಜುನ ಖರ್ಗೆ ಅವರು ಅತೀ ದೊಡ್ಡ ESI ಆಸ್ಪತ್ರೆ ಕಟ್ಟಿಸಿದ್ದಾರೆ. ಕಲ್ಯಾಣ ಕರ್ನಾಟಕ ಆರೋಗ್ಯ ಹಬ್ ಆಗಿ ರೂಪುಗೊಳ್ಳುತ್ತಿದೆ. ಯಾದಗಿರಿ, ಕೊಪ್ಪಳ ಮತ್ತು ಬೀದರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಸ್ಥಾಪಿಸಲಾಗುತ್ತಿದೆ. ಇಂದಿರಾಗಾಂಧಿ ತಾಯಿ- ಮಕ್ಕಳ ಆಸ್ಪತ್ರೆ, ಕಿದ್ವಾಯಿ, ಜಯದೇವ ಆಸ್ಪತ್ರೆಗಳು ಇನ್ನಷ್ಟು ಜನರ ಸೇವೆಗೆ ಸಿದ್ದವಾಗುತ್ತಿವೆ. ಈ ಆಸ್ಪತ್ರೆಗಳಿಗೆ 423 ಕೋಟಿ ರೂ. ವೆಚ್ಚ ಮಾಡಲಾಗುತ್ತಿದೆ. ಇದರಿಂದ ಈ ಭಾಗದ ಜನರು ಬೆಂಗಳೂರು, ಹೈದರಾಬಾದ್ ಗೆ ಹೋಗುವುದು ತಪ್ಪುತ್ತಿದೆ. ಸೋನಿಯಾ ಗಾಂಧಿಯವರ ನೇತೃತ್ವದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಮಾಡಿದ ಅಭಿವೃದ್ಧಿಯ ಕ್ರಾಂತಿಯನ್ನು ಎಲ್ಲರೂ ಸ್ಮರಿಸಿಕೊಳ್ಳಬೇಕು.
ಈ ಭಾಗಕ್ಕೆ 27 ಹೊಸ ರೈಲು ಮಂಜೂರು ಮಾಡಿಸಿದ್ದಾರೆ. ಗುಲ್ಬರ್ಗ – ವಾಡಿ ಮತ್ತು ಬೀದರ್ – ಗುಲ್ಬರ್ಗ ಹೊಸ ರೈಲ್ವೆ ಮಾರ್ಗ ಮಾಡಿಸಿದವರು ಖರ್ಗೆಯವರು. ಬಂಜಾರರನ್ನು ಪರಿಶಿಷ್ಟ ಪಟ್ಟಿಗೆ ಸೇರ್ಪಡೆ ಮಾಡಿದ್ದು ಕಾಂಗ್ರೆಸ್ ಪಕ್ಷ. ಇದಾದ ನಂತರ ಬಂಜಾರರ ಬದುಕು ಗಟ್ಟಿಯಾಗುತ್ತಿದೆ. ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಕೈ ಹಿಡಿದಿದ್ದು ಕಲ್ಯಾಣ ಕರ್ನಾಟಕ. ನಮ್ಮ ಕೈಹಿಡಿದ ನಿಮ್ಮನ್ನು ಕೈಬಿಡುವ ಪ್ರಶ್ನೆಯೇ ಇಲ್ಲ. ಇಲ್ಲಿನ ರಸ್ತೆಗಳ ಸುಧಾರಣೆಗೆ ಕಲ್ಯಾಣಪಥ ಯೋಜನೆ ರೂಪಿಸಿದ್ದೇವೆ. 38 ವಿಧಾನಸಭಾ ಕ್ಷೇತ್ರಗಳಲ್ಲಿ 1,150 ಕಿ.ಮೀ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ 1 ಸಾವಿರ ಕೋಟಿ ನೀಡಲಾಗಿದೆ. ಪ್ರತಿ ಕ್ಷೇತ್ರಕ್ಕೆ 120 ಕೋಟಿ ತೆಗೆದಿರಿಸಿದ್ದೇವೆ ಎಂದು ತಿಳಿಸಿದರು.
ಕಲಬುರಗಿಯಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ₹11,770 ಕೋಟಿ ಮೊತ್ತದ ಬೃಹತ್ ಯೋಜನೆಗಳಿಗೆ ನಿರ್ಧಾರ ಮಾಡಲಾಗಿದೆ. 350 KPS ಶಾಲೆಗಳ ನಿರ್ಮಾಣದ ಗುರಿ ಹೊಂದಿದ್ದೇವೆ. 371 ಜೆ ಯಿಂದ ವೈದ್ಯಕೀಯ ಕ್ಷೇತ್ರದಲ್ಲಿ 10,000ಕ್ಕೂ ಹೆಚ್ಚು ಹಾಗೂ ಎಂಜಿನಿಯರಿಂಗ್ನಲ್ಲಿ 31,000ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪ್ರವೇಶದ ಅವಕಾಶ ಕಲ್ಪಿಸಲಾಗಿದೆ. ಆರೋಗ್ಯ ಕ್ಷೇತ್ರಕ್ಕೆ ₹1,797 ಕೋಟಿ ಒದಗಿಸಲಾಗಿದೆ. ಸಣ್ಣ ಕೈಗಾರಿಕೆಗಳಿಗೆ 200 ಕೋಟಿ ರೂ. ನೀಡಲಾಗಿದೆ. ಕಲಬುರಗಿಯಲ್ಲಿ 120ಕ್ಕೂ ಹೆಚ್ಚು ಸ್ಟಾರ್ಟ್ಅಪ್ಗಳು ಸ್ಥಾಪನೆಯಾಗಿವೆ. 2030ರ ವೇಳೆಗೆ 500ಕ್ಕೂ ಹೆಚ್ಚು ಸ್ಟಾರ್ಟ್ಅಪ್ಗಳ ಸ್ಥಾಪನೆ ಗುರಿ ಹೊಂದಿದ್ದೇವೆ. ಕಲ್ಯಾಣ ಕರ್ನಾಟಕದ ಕುಡಿಯುವ ನೀರಿನ ಯೋಜನೆಗಳಿಗೆ ₹7,200 ಕೋಟಿ ವಿನಿಯೋಗಿಸಲಾಗುತ್ತಿದೆ.
ಈ ಭಾಗದ 25.74 ಲಕ್ಷ ಕುಟುಂಬಗಳ ಯಜಮಾನಿಯರಿಗೆ ಗೃಹಲಕ್ಷ್ಮಿ ಯೋಜನೆಯ ಅಡಿ 14,9,52 ಕೋಟಿ ಹಣ ನೀಡಲಾಗಿದೆ. 23 ಲಕ್ಷ ಮನೆಯ ದೀಪವನ್ನು ಗೃಹಜ್ಯೋತಿ ಮೂಲಕ ಬೆಳಗಿದ್ದೇವೆ. ನಿರುದ್ಯೋಗಿ ಯುವಕ ಯುವತಿಯರಿಗೆ ಒಟ್ಟು 382 ಕೋಟಿ ರೂ.ಗಳನ್ನು ನೀಡಲಾಗಿದೆ. 93.06 ಕೋಟಿ ಟ್ರಿಪ್ ಗಳನ್ನು ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದಾರೆ. ಇದಕ್ಕಾಗಿ 3,452.90 ಕೋಟಿ ರೂ.ಗಳನ್ನು ವೆಚ್ಚ ಮಾಡಲಾಗಿದೆ. ಇದೇ ಕಾಂಗ್ರೆಸ್ ನ ಜನಪರ ಗ್ಯಾರಂಟಿ. ಅಭಿವೃದ್ಧಿ ಪರ ಗ್ಯಾರಂಟಿ. ನವ ಕರ್ನಾಟಕ, ಸದೃಡ ಕರ್ನಾಟಕ ನಮ್ಮ ಸಂಕಲ್ಪ. ನಿಮ್ಮ ನೆರವಿಗೆ ಬಂದ ಕಾಂಗ್ರೆಸ್ ಪಕ್ಷವನ್ನು ನೀವು ಮರೆಯಬಾರದು. 2028 ರಲ್ಲೂ ನಮ್ಮದೇ ಸರಕಾರ ತರಬೇಕು. 2029 ರಲ್ಲಿ ಕೇಂದ್ರದಲ್ಲೂ ನಮ್ಮ ಪಕ್ಷವನ್ನೇ ಗೆಲ್ಲಿಸಬೇಕು. ನಿಮಗೆ ಉಪಕಾರ ಸ್ಮರಣೆ ಇದೆ ಅನ್ನೋದು ನಮಗೆ ಗೊತ್ತು. ನಮ್ಮೊಂದಿಗೆ ನೀವು, ನಿಮ್ಮೊಂದಿಗೆ ನಾವು. ಸದೃಢ ಕರ್ನಾಟಕ ನಿರ್ಮಾಣ ನಮ್ಮ ಸಂಕಲ್ಪ ಎಂದು ನುಡಿದರು.
Key words: Contribution, Article 371(J), Congress, history, Kalyana-Karnataka region, CM DK Shivakumar






