ಸಿಪಿಐ ಕಚೇರಿ ಆವರಣದಲ್ಲಿ ನಿಲ್ಲಿಸಿದ್ದ 6 ಬೈಕ್ ಗಳಿಗೆ ಬೆಂಕಿ…

ಬೆಂಗಳೂರು,ಡಿ,25,2019(www.justkannada.in):   ಕಮ್ಯುನಿಷ್ಟ್ ಪಕ್ಷದ ಕಚೇರಿ ಆವರಣದಲ್ಲಿ ನಿಲ್ಲಿಸಲಾಗಿದ್ದ ಆರು ಬೈಕ್ ಗಳಿಗೆ ರಾತ್ರಿ ದುಷ್ಕರ್ಮಿಗಳು ಬೆಂಕಿ ಹಚ್ಚಿ ಪರಾರಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ವೈಯಾಲಿಕಾವಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಇಲ್ಲಿನ ಸಿಪಿಐ ಕಚೇರಿ ಎದುರು ನಿಲ್ಲಿಸಲಾಗಿದ್ದ ಆರು ದ್ವಿಚಕ್ರ ವಾಹನಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ. ತಡರಾತ್ರಿ  1 ಗಂಟೆ ವೇಳೆಯಲ್ಲಿ ದುಷ್ಕರ್ಮಿಗಳು ಕಛೇರಿ ಆವರಣಕ್ಕೆ ನುಗ್ಗಿದ್ದು, ಬೈಕ್ ಗಳಿಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ ಎನ್ನಲಾಗಿದೆ.

ಸ್ಥಳಕ್ಕೆ ವೈಯಾಲಿಕಾವಲ್ ಠಾಣೆ ಪೊಲೀಸರು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಿನ್ನೆ ಮಂಗಳೂರು ಗೋಲಿಬಾರ್ ಖಂಡಿಸಿ ಕೇರಳಾದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ  ಕಾರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗಿತ್ತು. ಈ ಹಿನ್ನೆಲೆಯಲ್ಲಿ ಸಿಪಿಐ ಕಚೇರಿ ಎದುರು ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ.

Key words: Six bikes – fire – CPI office- premises -Bangalore