Friday, August 14, 2026

BDA Apartments

Home Front Page ಯುಜಿಸಿ ಹಿಂಬಾಕಿ ಪಾವತಿ, ಪ್ರಾಂಶುಪಾಲರ ಹುದ್ದೆ ಭರ್ತಿ, ಸರಕಾರಿ ಕಾಲೇಜು ಪ್ರಾಧ್ಯಾಪಕರ ಬೇಡಿಕೆಗಳ ಈಡೇರಿಕೆ: ಡಿಸಿಎಂ...

ಯುಜಿಸಿ ಹಿಂಬಾಕಿ ಪಾವತಿ, ಪ್ರಾಂಶುಪಾಲರ ಹುದ್ದೆ ಭರ್ತಿ, ಸರಕಾರಿ ಕಾಲೇಜು ಪ್ರಾಧ್ಯಾಪಕರ ಬೇಡಿಕೆಗಳ ಈಡೇರಿಕೆ: ಡಿಸಿಎಂ ಮಾತುಕತೆ

ಬೆಂಗಳೂರು: ಯುಜಿಸಿ ವೇತನ ಹಿಂಬಾಕಿ ಪಾವತಿ, ವರ್ಗಾವಣೆ, ಪ್ರಾಂಶುಪಾಲರ ನೇಮಕ ಸೇರಿ ಸರಕಾರಿ ಕಾಲೇಜು ಪ್ರಾಧ್ಯಾಪಕರ ವಿವಿಧ ಬೇಡಿಕೆಗಳನ್ನು ಈಡೇರಿಸುವ ಬಗ್ಗೆ ಗಮನಹರಿಸಿರುವ ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ, ಎಲ್ಲ ಬೇಡಿಕೆಗಳನ್ನು ಆದಷ್ಟು ಶೀಘ್ರವೇ ಈಡೇರಿಸಲಾಗುವುದು ಎಂದು ತಿಳಿಸಿದರು.

ಬೆಂಗಳೂರಿನಲ್ಲಿ ಗುರುವಾರ ಕರ್ನಾಟಕ ಸರಕಾರಿ ಕಾಲೇಜುಗಳ ಬೋಧಕರ ಸಂಘದ ಅಧ್ಯಕ್ಷ ಡಾ.ಡಿ.ಎಂ.ಮಂಜುನಾಥ್‌ ಮತ್ತಿತರೆ ಪದಾಧಿಕಾರಿಗಳ ಜತೆ ಮಾತುಕತೆ ನಡೆಸಿದ ಅವರು, ಈ ಬಗ್ಗೆ ಕ್ರಮಗಳನ್ನು ಕ್ಷಿಪ್ರವಾಗಿ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಪ್ರಾಧ್ಯಾಪಕರ ರಾಷ್ಟ್ರೀಯ ಪಿಂಚಣಿ ಯೋಜನೆಗೆ ರಾಜ್ಯ ಸರಕಾರ ಪಾಲು ತುಂಬಲಾಗಿಲ್ಲ. ಈ ಮೊತ್ತವನ್ನು ಕೂಡಲೇ ತುಂಬುವುದು. 2006ರ ಯುಜಿಸಿ ವೇತನ ಹಿಂಬಾಕಿ ಮತ್ತು 2019ರ ಏಪ್ರಿಲ್ ತಿಂಗಳಿನಿಂದ ಪಾವತಿಯಾಗಬೇಕಿರುವ ವೇತನ ಕುರಿತು ಹಣಕಾಸು ಇಲಾಖೆಯೊಂದಿಗೆ ಚರ್ಚಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಮಾಹಿತಿ ನೀಡಿದರು.

ವರ್ಗಾವಣೆ ಪ್ರಕ್ರಿಯೆ ಶೀಘ್ರ ಆರಂಭ

2021ರ ವರ್ಗಾವಣೆ ಕಾಯ್ದೆಯ ಪ್ರಕಾರ ಈಗಾಗಲೇ ಸರಕಾರ ವರ್ಗಾವಣೆ ನೀತಿ ರೂಪಿಸಿದೆ. ಈ ವರ್ಷದ ವರ್ಗಾವಣೆ ಪ್ರಕ್ರಿಯೆಯನ್ನು ಆದಷ್ಟು ಬೇಗ ಆರಂಭಿಸಲು ಸಭೆಯಲ್ಲಿ ನಿರ್ಧರಿಸಲಾಯಿತು. ಜತೆಗೆ; ಪ್ರಾಂಶುಪಾಲರ ಹುದ್ದೆ ಭರ್ತಿಗೆ ಕೂಡಲೇ ಚಾಲನೆ ನೀಡುವುದು ಹಾಗೂ ಗರಿಷ್ಠ ವಯೋಮಿತಿಗೆ ವಿನಾಯಿತಿ ನೀಡಿ ಯುಜಿಸಿ ವೇತನ ಶ್ರೇಣಿಯಲ್ಲಿನ ಸಹ ಪ್ರಾಧ್ಯಾಪಕರ ನೇಮಕ ಮಾಡಿಕೊಳ್ಳುವುದು, ಪ್ರಾಧ್ಯಾಪಕ ಹುದ್ದೆಯ ಪದೋನ್ನತಿಗೆ ಕೂಡಲೇ ಚಾಲನೆ ನೀಡುವ ಬಗ್ಗೆಯೂ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಯಿತು ಎಂದು ಡಿಸಿಎಂ ತಿಳಿದ್ದಾರೆ.

ಪಿಹೆಚ್ʼಡಿ ವೇತನ ಬಡ್ತಿ ತಾರತಮ್ಯ ಬಗೆಹರಿಸುವ ಸಲುವಾಗಿ ಆಯುಕ್ತರೊಂದಿಗೆ ಪ್ರತ್ಯೇಕ ಸಭೆ ನಡೆಸುವಂತೆ ಸೂಚಿಸಿದ ಉಪ ಮುಖ್ಯಮಂತ್ರಿಗಳು; ಪಿಎಚ್‌ ಡಿ ಮಾಡಲು ಪ್ರಾಧ್ಯಾಪಕರು ಅರ್ಜಿ ಸಲ್ಲಿಸುವ ವೇಳೆ ನಿರಪೇಕ್ಷಣಾ ಪತ್ರ ಕೇಳಬಾರದು. ಬದಲಿಗೆ ಪ್ರವೇಶ ಪಡೆದ ಮೇಲೆ ಈ ಪತ್ರವನ್ನು ಸಲ್ಲಿಸಿದರೆ ಸಾಕು. ಈ ಬಗ್ಗೆ ಎಲ್ಲ ವಿವಿಗಳಿಗೆ ಮಾಹಿತಿ ನೀಡಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಬೋಧಕ ಸಿಬ್ಬಂದಿ ಪದನಾಮ

ಕಾಲೇಜುಗಳಲ್ಲಿ ಈವರೆಗೂ ಬೋಧಕೇತರ ಸಿಬ್ಬಂದಿಯಾಗಿದ್ದ ಗ್ರಂಥಪಾಲಕರು ಹಾಗೂ ದೈಹಿಕ ಶಿಕ್ಷಣ ಸಿಬ್ಬಂದಿಗೆ ಪ್ರಾಧ್ಯಾಪಕರ ಸ್ಥಾನಮಾನ ನೀಡುವುದು, ಸರಕಾರಿ ಸ್ವಾಮ್ಯದಲ್ಲಿರುವ 108 ಸರಕಾರಿ ಕಾಲೇಜುಗಳಲ್ಲಿ ಕೆಲಸ ಮಾಡುತ್ತಿರುವ ಅರ್ಹ ಪ್ರಾಧ್ಯಾಪಕರಿಗೆ ಪಿಎಚ್‌ ಡಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶಕರಾಗಲು ಅವಕಾಶ ಕೊಡುವ ಬಗ್ಗೆ ಪರಿಶೀಲಿಸಲು ನಿರ್ಧಾರ ಕೈಗೊಳ್ಳಲಾಯಿತು ಎಂದು ಡಾ.ಅಶ್ವತ್ಥನಾರಾಯಣ ತಿಳಿಸಿದರು.

2003ರಲ್ಲಿ ನೇಮಕಗೊಂಡ ಅರೆಕಾಲಿಕ ಉಪನ್ಯಾಸಕರಿಗೆ ಮಾನವೀಯತೆಯ ಆಧಾರದ ಮೇಲೆ ಸ್ತಾನೀಕರಣ ನೀಡಲು ಸಕಾರಾತ್ಮಕವಾಗಿ ಪರಿಶೀಲಿಸಲು ಒಪ್ಪಿಗೆ ಹಾಗೂ ಬಾಕಿ ಇರುವ ಸ್ತಾನೀಕರಣ ಪ್ರಸ್ತಾವನೆಗಳನ್ನು ಕೆಲವೇ ದಿನಗಳಲ್ಲಿ ಮಂಜೂರು ಮಾಡಲಾಗುವುದು. ಜತೆಗೆ; 310 ಪ್ರಾಂಶುಪಾಲರನ್ನು ಆದಷ್ಟು ಬೇಗ ನೇಮಕ ಮಾಡಲಾಗುವುದು ಎಂದು ಡಿಸಿಎಂ ವಿವರ ನೀಡಿದರು.

ಯುಜಿಸಿ ವೇತನ ಪಡೆಯುವ ಪ್ರಾಧ್ಯಾಪಕರಿಗೆ ವಾಹನ, ಮನೆ ಮತ್ತಿತರೆ ವಸ್ತುಗಳ ಖರೀದ ಮೇಲೆ ಇರುವ ಷರತ್ತುಗಳನ್ನು ಸರಳಗೊಳಿಸಲು ಬಗ್ಗೆಯೂ ಚರ್ಚಿಸಲಾಯಿತು ಎಂದು ಡಿಸಿಎಂ ಹೇಳಿದರು.

ಸಭೆಯಲ್ಲಿ ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಪ್ರದೀಪ್‌, ಮುಖ್ಯ ಆಡಳಿತಾಧಿಕಾರಿ ಬಾಲಚಂದ್ರ ಮತ್ತಿತರೆ ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದರು.