Tuesday, September 1, 2026

BDA Apartments

Home Front Page ಹರ್ಷ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಿಜೆಪಿ ನಾಯಕರು.  

ಹರ್ಷ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಿಜೆಪಿ ನಾಯಕರು.  

ಶಿವಮೊಗ್ಗ,ಫೆಬ್ರವರಿ,23,2022(www.justkannada.in):  ಹರ್ಷ ಹತ್ಯೆ ಹಿಂದೆ ಕಾಣದ ಕೈಗಳ ಕೈವಾಡವಿದ್ದು, ಸೂಕ್ತ ತನಿಖೆ ನಡೆಸುವ ಮೂಲಕ ನಮ್ಮ ಸರ್ಕಾರ ಬಹಿರಂಗ ಪಡಿಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್
ಕಟೀಲ್ ತಿಳಿಸಿದರು.

ಶಿವಮೊಗ್ಗದಲ್ಲಿ ಹತ್ಯೆಗೀಡಾದ ಭಜರಂಗದಳದ ಕಾರ್ಯಕರ್ತ ಹರ್ಷ ನಿವಾಸಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಸಚಿವ ಕೆ,ಎಸ್ ಈಶ್ವರಪ್ಪ, ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿವೈ ವಿಜಯೇಂದ್ರ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಬಳಿಕ ಮಾತನಾಡಿದ ನಳೀನ್ ಕುಮಾರ್ ಕಟೀಲ್, ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 8 ಜನರನ್ನು ಬಂಧಿಸಲಾಗಿದೆ. ಘಟನೆ ನಡೆದ ನಂತರ ಆರೋಪಿಗಳನ್ನು ಶೀಘ್ರವಾಗಿ ಬಂಧಿಸುವಲ್ಲಿ ಶಿವಮೊಗ್ಗದ ಪೊಲೀಸರು ಯಶಸ್ವಿಯಾಗಿದ್ದಾರೆ. ಅವರಿಗೆ ಅಭಿನಂದನೆಗಳು. ಪರಿಸ್ಥಿತಿ ಈಗ ಹತೋಟಿಯಲ್ಲಿದ್ದು, ಶಾಂತಿ ಸುವ್ಯವಸ್ಥೆ ಕಾಪಾಡಲು ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗಿದೆ ಎಂದರು.

ಹಂತಕರು ಯಾವುದೇ ರೀತಿಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಈಗಾಗಲೇ ತನಿಖೆ ನಡೆಯುತ್ತಿದೆ. ಬಂಧಿತರ ವಿಚಾರಣೆಯೂ ಆಗುತ್ತಿದೆ. ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ನಮ್ಮ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ. ಸರ್ಕಾರ ಇದಕ್ಕಾಗಿ ಈಗಾಗಲೇ ಎಲ್ಲ ರೀತಿಯ ಕ್ರಮಗಳನ್ನು ಅನುಸರಿಸುತ್ತಿದೆ ಎಂದರು.

ಕುಟುಂಬಕ್ಕೆ ಧೈರ್ಯ ತಂದುಕೊಳ್ಳಿ. ನಿಮ್ಮ ಜೊತೆ ನಾವಿದ್ದೇವೆ. ಸರ್ಕಾರದಿಂದ ನೆರವು ಕೊಡಲು ಪ್ರಯತ್ನಿಸುತ್ತೇವೆ. ಆರೋಗ್ಯವನ್ನ ಕಾಪಾಡಿಕೊಳ್ಳಿ ಎಂದು ಹರ್ಷ ತಾಯಿಗೆ ಹೇಳಿದರು.

ಇದೇ ವೇಳೆ ಸಚಿವ. ಕೆ.ಎಸ್. ಈಶ್ವರಪ್ಪ ಮಾತನಾಡಿ, ಹರ್ಷ ನ ಕಗ್ಗೊಲೆಯಾಗುತ್ತೆ ಎಂಬ ಕಲ್ಪನೆ ನಮಗ್ಯಾರಿಗೂ ಇರಲಿಲ್ಲ. ರಾಜ್ಯ ಸರ್ಕಾರ ಈಗಾಗಲೇ ಕೊಲೆ ಮಾಡಿದ ಗೂಂಡಾಗಳನ್ನು ಬಂಧಿಸಿದ್ದಾರೆ. ಮೃತನ ಕುಟುಂಬಕ್ಕೆ ಸರ್ಕಾರದಿಂದ ಏನು ಸಹಕಾರಬೇಕೋ ಅದನ್ನು ನೀಡುತ್ತೇವೆ. ರಾಜ್ಯಾಧ್ಯಕ್ಷರು ಕೂಡ ಈ ಬಗ್ಗೆ ಭರವಸೆ ನೀಡಿದ್ದಾರೆ ಎಂದರು.

key words: Shimoga-Harsha-bjp-leaders