Sunday, August 23, 2026

BDA Apartments

Home Front Page ಮಂಗಳೂರಿಗೆ ನಿಮ್ಮ ಭೇಟಿ ವಿಕಾಸ ದರ್ಶನಕ್ಕೋ, ವಿನಾಶ ದರ್ಶನಕ್ಕೋ? ಪ್ರಧಾನಿ ಮೋದಿಗೆ ಹಲವು ಪ್ರಶ್ನೆಗಳನ್ನ ಮುಂದಿಟ್ಟ...

ಮಂಗಳೂರಿಗೆ ನಿಮ್ಮ ಭೇಟಿ ವಿಕಾಸ ದರ್ಶನಕ್ಕೋ, ವಿನಾಶ ದರ್ಶನಕ್ಕೋ? ಪ್ರಧಾನಿ ಮೋದಿಗೆ ಹಲವು ಪ್ರಶ್ನೆಗಳನ್ನ ಮುಂದಿಟ್ಟ ಮಾಜಿ ಸಿಎಂ ಸಿದ್ಧರಾಮಯ್ಯ.

ಬೆಂಗಳೂರು,ಸೆಪ್ಟಂಬರ್,2,2022(www.justkannada.in): ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಇಂದು ಮಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡುತ್ತಿದ್ದು ಈ ಹಿನ್ನೆಲೆಯಲ್ಲಿ ಅವರಿಗೆ #AnswerMadiModi ಎಂಬ ಹ್ಯಾಷ್ ಟ್ಯಾಗ್ ನಡಿ  ವಿಪಕ್ಷ ನಾಯಕ ಸಿದ್ಧರಾಮಯ್ಯ ಸಾಮಾಜಿಕ ಜಾಲತಾಣದಲ್ಲಿ ಹಲವು ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ.

ಸಿದ್ದರಾಮಯ್ಯ ಅವರು ಪ್ರಧಾನಿ ಮೋದಿಗೆ ಕೇಳಿರುವ ಪ್ರಶ್ನೆಗಳು ಹೀಗಿವೆ ನೋಡಿ..

ಪ್ರಧಾನಮಂತ್ರಿ Narendra Modi  ಯವರಿಗೆ ಮಂಗಳೂರಿಗೆ ಸ್ವಾಗತ. ನಿಮ್ಮ ಭೇಟಿ ವಿಕಾಸ ದರ್ಶನಕ್ಕೋ, ವಿನಾಶ ದರ್ಶನಕ್ಕೋ?  ನಿಮ್ಮ ಇಂದಿನ ಭಾಷಣದಲ್ಲಿ ಈ ಪ್ರಶ್ನೆಗೆ ಉತ್ತರ ಕೊಡಬೇಕೆಂದು ವಿನಯಪೂರ್ವಕ ಮನವಿ ಮಾಡುತ್ತೇನೆ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಟ್ವಿಟ್ ಮಾಡಿದ್ದಾರೆ.

ದಕ್ಷಿಣ ಕನ್ನಡದ ಉದ್ಯಮ ಶೀಲ ಹಿರಿಯರು  ಸಿಂಡಿಕೇಟ್, ಕಾರ್ಪೋರೇಷನ್, ವಿಜಯಾ, ಕೆನರಾ ಮತ್ತು ಕರ್ನಾಟಕ ಹೀಗೆ ಐದು ಬ್ಯಾಂಕ್ ಗಳನ್ನು ಹುಟ್ಟುಹಾಕಿದ್ದರು. ನೀವು ಇವುಗಳಲ್ಲಿ ಮೂರು ಬ್ಯಾಂಕುಗಳ ನಾಮಾವಶೇಷ ಮಾಡಿದ್ದೀರಿ. ಇದು ವಿಕಾಸವೋ? ವಿನಾಶವೋ?former-cm-siddaramaiah-rs-100-crore-grant-congress-buy-vaccine

ಕಾರ್ಪೋರೇಷನ್ ಬ್ಯಾಂಕ್ ಸ್ಥಾಪಕರು- ಹಾಜಿ ಅಬ್ದುಲ್ಲಾ (1906), ಸಿಂಡಿಕೇಟ್ ಬ್ಯಾಂಕ್ ಸ್ಥಾಪಕರು ಟಿಎಂಎ ಪೈ, ಉಪೇಂದ್ರ ಪೈ, ವಾಮನ್ ಕುಡ್ವಾ (1925). ವಿಜಯಾ ಬ್ಯಾಂಕ್ ಸ್ಥಾಪಕರು- ಎ.ಬಿ.ಶೆಟ್ಟಿ (1931). ಪ್ರಧಾನಿಯವರೇ, ನಿಮ್ಮ ನಡೆ ಈ ಅಮರವೀರರಿಗೆ ಬಗೆದ ದ್ರೋಹವಲ್ಲವೇ? ಇದು ವಿಕಾಸವೋ? ವಿನಾಶವೋ?

ಬಜ್ಪೆ ವಿಮಾನ ನಿಲ್ದಾಣ ಪ್ರಥಮ ಪ್ರಧಾನಿ ಜವಾಹರಲಾಲ್ ನೆಹರೂ ಕೊಡುಗೆ.(25-12-1971) ಇದು ಸಂಸದ ಯು.ಶ್ರೀನಿವಾಸ ಮಲ್ಯ ಪ್ರಯತ್ನದ ಫಲ.  ಈ ವಿಮಾನ ನಿಲ್ದಾಣವನ್ನು ಉದ್ಯಮಿ ಮಿತ್ರ ಅದಾನಿಯವರಿಗೆ ಅರ್ಪಿಸಿದ್ದು (20-10-2020) ಪ್ರಧಾನಿ ನರೇಂದ್ರ ಮೋದಿ. ಇದು ವಿಕಾಸವೋ? ವಿನಾಶವೋ?

ನವಮಂಗಳೂರು ಬಂದರು ಮಾಜಿ ಪ್ರಧಾನಿ ಇಂದಿರಾಗಾಂಧಿ ಕೊಡುಗೆ (1975). ಇದು ಸಂಸದ ಯು.ಶ್ರೀನಿವಾಸ ಮಲ್ಯ ಪ್ರಯತ್ನದ ಫಲ. ನವಮಂಗಳೂರು ಬಂದರನ್ನು ಉದ್ಯಮಿ ಮಿತ್ರ ಅದಾನಿಯವರಿಗೆ ಹಂತಹಂತವಾಗಿ ಮಾರುತ್ತಿರುವುದು ಪ್ರಧಾನಿ ನರೇಂದ್ರ ಮೋದಿ. ಇದು ವಿಕಾಸನೋ? ವಿನಾಶನೋ?

ಬಜ್ಪೆ ವಿಮಾನ ನಿಲ್ದಾಣ, ಎನ್ ಎಂಪಿಟಿ, ಎನ್ ಎಚ್-66, ರೀಜನಲ್ ಎಂಜನಿಯರಿಂಗ್ ಕಾಲೇಜ್, ಎಂಸಿಎಫ್-ಇವೆಲ್ಲ ಕಾಂಗ್ರೆಸ್ ಸಂಸದರ ಕೊಡುಗೆ. ಬಿಜೆಪಿ ಸಂಸದ ನಳಿನ್ ಕುಮಾರ ಕೊಡುಗೆ ಏನು? ಮಳೆಯಲ್ಲಿ ಮುಳುಗುವ ಮಂಗಳೂರು? ಕೋಮುದ್ವೇಷದ ಬೆಂಕಿಯಲ್ಲಿ ಬೇಯುತ್ತಿರುವ ಮಂಗಳೂರು? ಇದು ವಿಕಾಸವೋ? ವಿನಾಶನೋ?

ದಕ್ಷಿಣ ಕನ್ನಡದ ವಿಕಾಸ ಪುರುಷರು ಕಾಂಗ್ರೆಸ್ ಸಂಸದರಾಗಿದ್ದ ಉಳ್ಳಾಲ ಶ್ರೀನಿವಾಸ ಮಲ್ಯ, ಕೆಮ್ತೂರು ಕಾಂತಪ್ಪ ಶೆಟ್ಟಿ ಮತ್ತು ಬೋಳಾರ ಜನಾರ್ಧನ ಪೂಜಾರಿ. ದಕ್ಷಿಣ ಕನ್ನಡದ ವಿನಾಶ ಪುರುಷ- ಬಿಜೆಪಿ ಸಂಸದ ನಳಿನ್ ಕುಮಾರ ಕಟೀಲ್. ಇದು ವಿಕಾಸವೋ? ವಿನಾಶವೋ?

ಜೂನ್ ತಿಂಗಳೊಂದರಲ್ಲಿಯೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದುವರೆ ಕೋಟಿ ಬೆಲೆಯ ಮಾದಕದ್ರವ್ಯಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮಾದಕದ್ರವ್ಯ ಸೇವನೆಯಲ್ಲಿ ದೇಶದಲ್ಲಿಯೇ ದಕ್ಷಿಣ ಕನ್ನಡ ಎರಡನೇ ಸ್ಥಾನದಲ್ಲಿದೆ. ಇದು ವಿಕಾಸನೋ? ವಿನಾಶನೋ?

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಾಖಲೆಯ ಮಳೆಯಾಗಿದೆ. ಹೆಜ್ಜೆಹೆಜ್ಜೆಗೂ ಗುಂಡಿಬಿದ್ದ ರಸ್ತೆಗಳು, ಕುಸಿದು ಬಿದ್ದಿರುವ ಮನೆಗಳು, ನೆರೆಯಲ್ಲಿ ಕೊಚ್ಚಿಹೋದ ರೈತರ ಬೆಳೆಗಳು. ಪ್ರಧಾನಿ ಭೇಟಿಗಾಗಿ ಮಳೆ ಹುಳುಕನ್ನು ಮುಚ್ಚಿಟ್ಟು ರಸ್ತೆಗಳಿಗೆ ತೇಪೆ ಹಾಕಲಾಗಿದೆ. ಇದು ವಿಕಾಸನೋ? ವಿನಾಶನೋ?

ಕಳೆದ ಮೂರು ವರ್ಷಗಳಲ್ಲಿ ಕಡಲ್ಕೊರೆತ ತಡೆಗೆ ರಾಜ್ಯ ಸರ್ಕಾರ ಖರ್ಚು ಮಾಡಿರುವ ಹಣ ಅಂದಾಜು ರೂ.250 ಕೋಟಿ. ಇದರಲ್ಲಿ 40% ಜನಪ್ರತಿನಿಧಿಗಳ ಜೇಬಿಗೆ, 60% ಕಡಲ ನೀರಿಗೆ. ಕಡಲ್ಕೊರೆತ ಮುಂದುವರಿದಿದೆ. ಇದು ವಿಕಾಸವೋ? ವಿನಾಶನೋ?

ಕರಾವಳಿ ಮೀನುಗಾರರ ಮೇಲೆ ಸಿಆರ್ ಜೆಡ್, ಸಿಎಂ ಜೆಡ್ ನಿಯಮಾವಳಿಗಳ ಹೇರಿಕೆ ಪ್ರವಾಸೋದ್ಯಮದ ಹೆಸರಲ್ಲಿ ರೆಸಾರ್ಟ್, ಥೀಮ್ ಪಾರ್ಕ್ ಗಳಿಗೆ ಮುಕ್ತ ಪರವಾನಿಗೆ ಇದು ವಿಕಾಸನೋ? ವಿನಾಶನೋ?

48 ಕಿ.ಮೀ. ಅಂತರದಲ್ಲಿ ಬ್ರಹ್ಮರಕೂಟ್ಲು, ಸುರತ್ಕಲ್, ತಲಪಾಡಿ ಮತ್ತು ಹೆಜಮಾಡಿಗಳಲ್ಲಿ 4 ನಿಯಮಬಾಹಿರ ಟೋಲ್ ಗೇಟ್ ಗಳು. ವಾಹನ ಸಂಚಾರಿಗಳ ಜೇಬು ಖಾಲಿ, ಅಕ್ರಮದ ರೂವಾರಿಗಳಾದ ಬಿಜೆಪಿ ಸಂಸದರು ಮತ್ತು ಶಾಸಕರ ಜೇಬು ಭರ್ತಿ. ಇದು ವಿಕಾಸನೋ? ವಿನಾಶನೋ?

ಹೀಗೆ ಪ್ರಧಾನಿ ಮೋದಿ ಅವರಿಗೆ ಹತ್ತು ಹಲವು ಪ್ರಶ್ನೆಗಳನ್ನಾಕಿರುವ ಮಾಜಿ ಸಿಎಂ ಸಿದ್ಧರಾಮಯ್ಯ ಇದಕ್ಕೆ ಉತ್ತರಿಸುವಂತೆ ಆಗ್ರಹಿಸಿದ್ದಾರೆ.

Key words: visit -Mangalore –PM- Modi- Former CM -Siddaramaiah – questions