ಬೆಂಗಳೂರು-ಮೈಸೂರು ಎಕ್ಸ್ ‍ಪ್ರೆಸ್ ಹೈವೆಯಲ್ಲಿ ಅಪಘಾತ: ಒಂದೇ ಕುಟುಂಬದ ಮೂವರು ಸಾವು.

ರಾಮನಗರ,ಏಪ್ರಿಲ್,22,2023(www.justkannada.in): ಎರಡು ಕಾರುಗಳ ನಡುವೆ ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ಬೆಂಗಳೂರು-ಮೈಸೂರು ಎಕ್ಸ್ ‍ಪ್ರೆಸ್ ಹೈವೆಯಲ್ಲಿ ನಡೆದಿದೆ.

ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲ್ಲೂಕಿನ ಲಂಬಾಣಿ ತಾಂಡ್ಯ ಬಳಿ  ಈ ಘಟನೆ ನಡೆದಿದೆ. ಘಟನೆಯಲ್ಲಿ ತಂದೆ ಮತ್ತು ಇಬ್ಬರು ಮಕ್ಕಳು ಮೃತಪಟ್ಟಿದ್ದು ಮತ್ತಿಬ್ಬರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೈಸೂರಿನಿಂದ ಬೆಂಗಳೂರಿಗೆ ಹೋಗುತ್ತಿದ್ದ ಆಲ್ಟೋ ಕಾರಿಗೆ ಬೆಂಗಳೂರಿನಿಂದ ಬರುತ್ತಿದ್ದ ಇನ್ನೋವಾ ಕಾರು ಡಿಕ್ಕಿಯಾಗಿ ಈ ಘಟನೆ ಸಂಭವಿಸಿದೆ. ಇನ್ನೋವಾ ಕಾರು ಹೈವೆಯ ಡಿವೈಡರ್  ಹಾರಿ ಎದುರಿಗೆ ಬರುತ್ತಿದ್ದ ಆಲ್ಟೋ ಕಾರಿಗೆ ಡಿಕ್ಕಿಯಾಗಿದೆ.  ಇನೋವಾ ಕಾರು ಡಿಕ್ಕಿಯಾದ ರಭಸಕ್ಕೆ ಆಲ್ಟೋ ಕಾರಿನಲ್ಲಿದ್ದ ತಂದೆ ಮತ್ತು ಮಕ್ಕಳಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಕುರಿತು ಚನ್ನಪಟ್ಟಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: Accident -Bangalore-Mysore -Express Highway-Three deaths