ಪ್ರೈಡ್ ಸಂಸ್ಥೆಯಿಂದ ಕನ್ನಡ ಕಡೆಗಣನೆ: ಬಿಜೆಪಿಯು ಮೂಲಭೂತವಾಗಿ ಕನ್ನಡ ವಿರೋಧಿ- ಹೆಚ್.ಡಿ ಕುಮಾರಸ್ವಾಮಿ ಆಕ್ರೋಶ.

ಬೆಂಗಳೂರು,ಜೂನ್,20, 2021(www.justkannada.in): ಭಾಷೆಗಳ ಕಲಿಕಾ ತರಬೇತಿಯಲ್ಲಿ ಲೋಕಸಭಾ ಸಚಿವಾಲಯದ ‘ಪಾರ್ಲಿಮೆಂಟರಿ ರಿಸರ್ಚ್ ಆ್ಯಂಡ್ ಟ್ರೈನಿಂಗ್ ಇನ್ಸ್‌ಟಿಟ್ಯೂಟ್ ಫಾರ್ ಡೆಮಾಕ್ರಸಿ’ ಕನ್ನಡವನ್ನು ಕಡೆಗಣಿಸಿದೆ. ಬಿಜೆಪಿಯು ಮೂಲಭೂತವಾಗಿ ಕನ್ನಡ ವಿರೋಧಿಯಾಗಿದೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಆಕ್ರೋಶ ಹೊರ ಹಾಕಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಭಾಷೆಗಳ ಕಲಿಕಾ ತರಬೇತಿಯಲ್ಲಿ ಕನ್ನಡವನ್ನು ಕಡೆಗಣಿಸಿರುವ ಲೋಕಸಭಾ ಸಚಿವಾಲಯದ ‘ಪಾರ್ಲಿಮೆಂಟರಿ ರಿಸರ್ಚ್ ಆ್ಯಂಡ್ ಟ್ರೈನಿಂಗ್ ಇನ್ಸ್‌ ಟಿಟ್ಯೂಟ್ ಫಾರ್ ಡೆಮಾಕ್ರಸಿ’ (ಪ್ರೈಡ್) ಸಂಸ್ಥೆ ಗುಜರಾತಿ, ಬಂಗಾಳಿ, ಮರಾಠಿ, ಒಡಿಯಾ, ತಮಿಳು, ತೆಲುಗಿಗೆ ಆದ್ಯತೆ ನೀಡಿದೆ. ಕನ್ನಡಭಿಮಾನವಿಲ್ಲದ 25 ಮಂದಿಯನ್ನು ಲೋಕಸಭೆಗೆ ಆರಿಸಿ ಕಳಿಸಿದ್ದರ ಫಲವಿದು.

ಇದೇ 22ರಿಂದ ಭಾಷೆಗಳ ಕಲಿಕಾ ತರಬೇತಿ ಆನ್‌ಲೈನಲ್ಲಿ ಆರಂಭವಾಗುತ್ತಿದೆ. ಇದರಲ್ಲಿ ವಿವಿಧ ರಾಜ್ಯಗಳ ಸಂಸದರು, ಶಾಸಕರು, ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ. ಫ್ರೆಂಚ್, ಜರ್ಮನ್, ಜಪಾನೀಸ್, ಪೊರ್ಚುಗೀಸ್, ರಷ್ಯನ್‌, ಸ್ಪ್ಯಾನಿಷ್ಅನ್ನು ಕಲಿಸಲಾಗುತ್ತಿದೆ. ಇದರಲ್ಲಿ ಕನ್ನಡವನ್ನು ಸೇರಿಸಬೇಕು. ಇಲ್ಲವೇ ನಾವೆಲ್ಲರೂ ಇದನ್ನು ಧಿಕ್ಕರಿಸಬೇಕು ಎಂದು ಹೆಚ್.ಡಿಕೆ ಸಲಹೆ ನೀಡಿದ್ದಾರೆ.

ಕೇಂದ್ರ ಪ್ರತಿ ಬಾರಿ ಕನ್ನಡ ನಿರ್ಲಕ್ಷಿಸುತ್ತಿದೆ. ಇದರ ವಿರುದ್ಧ ನಾವೇ ಕೆಲವರು ಮಾತನಾಡುವಂತಾಗಿದೆ. ಕನ್ನಡ ಭಾಷೆ ವಿಚಾರದಲ್ಲಿನ ಕೇಂದ್ರದ ಇಂಥ ನಡವಳಿಕೆಗಳ ವಿರುದ್ಧ ಎಲ್ಲರೂ ಹೋರಾಡಬೇಕು. ಅವರು ನಿರ್ಲಕ್ಷಿಸುವುದು ನಾವು ಎಚ್ಚರಿಸುವುದು, ಅತ್ತು ಕರೆದು ಔತಣ ಪಡೆಯುವುದು ನಿಲ್ಲಬೇಕು. ‘ಕನ್ನಡ ಮರೆತರೆ ಕಷ್ಟ‘ ಎಂಬ ಸಂದೇಶ ರವಾನಿಸಬೇಕು ಎಂದು ಟ್ವಿಟ್ಟರ್ ನಲ್ಲಿ ತಿಳಿಸಿದ್ದಾರೆ.

ಕೇಂದ್ರ ಸರ್ಕಾರ ಕನ್ನಡದ ವಿಚಾರದಲ್ಲಿ ನಿರ್ಲಕ್ಷ್ಯ ಭಾವ ತಳೆದಿದ್ದರೂ ಬಿಜೆಪಿಯ ಯಾವೊಬ್ಬ ಸಂಸದರೂ ಇದರ ಬಗ್ಗೆ ಮಾತನಾಡಿರುವುದನ್ನು ನಾನಂತೂ ನೋಡಿಲ್ಲ. ಇಷ್ಟರಲ್ಲೇ ಜನರಿಗೆ ಅರ್ಥವಾಗಬೇಕು “ಬಿಜೆಪಿಯು ಮೂಲಭೂತವಾಗಿ ಕನ್ನಡ ವಿರೋಧಿ” ಎಂದು. ತಾವು ಕನ್ನಡ ವಿರೋಧಿಗಳಲ್ಲ ಎಂದಾದರೆ ಈಗ ಆಗಿರುವ ಪ್ರಮಾದವನ್ನು ತಾಕತ್ತಿದ್ದರೆ ಬಿಜೆಪಿ ಸರಿಪಡಿಸಲಿ.

Key words: BJP -essentially -anti-Kannada-former CM-HD Kumaraswamy -Outrage.