ಕಾವೇರಿ ವಿಚಾರದಲ್ಲಿ ಬಿಜೆಪಿ ಜೆಡಿಎಸ್ ರಾಜಕಾರಣ ಮಾಡುತ್ತಿದೆ : ಜನರ ಹಿತದೃಷ್ಟಿಯಿಂದ ಅಲ್ಲ- ಸಿಎಂ ಸಿದ್ದರಾಮಯ್ಯ.

ಮೈಸೂರು, ಸೆಪ್ಟೆಂಬರ್ , 26,2023(www.justkannada.in): ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಕಾವೇರಿ ವಿಷಯವನ್ನು ರಾಜಕೀಯ ಗೊಳಿಸುತ್ತಿರುವುದು ರಾಜಕಾರಣಕ್ಕೆ ಹೊರತು ಜನರ ಹಾಗೂ ನಾಡಿನ ಹಿತದೃಷ್ಟಿಯಿಂದ ಮಾಡುತ್ತಿಲ್ಲ ಎಂದು ಮುಖ್ಯಮಂತ್ರಿ  ಸಿದ್ದರಾಮಯ್ಯ ತಿಳಿಸಿದರು.

ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ಧರಾಮಯ್ಯ, ಬಂದ್ ಮಾಡಲು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರಿಗೂ ಅವಕಾಶವಿದೆ. ಆದರೆ ನ್ಯಾಯಾಲಯ ಯಾವುದೇ ಸಭೆ, ಮೆರವಣಿಗೆಯನ್ನು ನಡೆಸಬಾರದು, ಪ್ರತಿಭಟನೆ ಮಾಡಬಾರದು ಎಂದು ಹೇಳಿದೆ. ನಾವು ನಮ್ಮ ಮೂಲಭೂತ  ಹಕ್ಕುಗಳನ್ನು ಚಲಾಯಿಸುವಾಗ ಇತರರ ಮೂಲಭೂತ ಹಕ್ಕುಗಳನ್ನು ಕೂಡ ಗಮನದಲ್ಲಿರಿಸಿಕೊಳ್ಳಬೇಕು ಎಂದರು.

ಜನರು ಕಾನೂನನ್ನು ಕೈಗೆತ್ತಿಕೊಳ್ಳಬಾರದು ಎಂದು, ಜನರಿಗೆ ತೊಂದರೆಯಾಗಬಾರದೆಂದು 144 ಸೆಕ್ಷನ್ ಜಾರಿ ಮಾಡಲಾಗಿದೆ. ರಾಜ್ಯದ ಹಾಗೂ ಜನತೆಯ ಹಿತದೃಷ್ಟಿಯಿಂದ ಆದೇಶ ಮಾಡಲಾಗಿದೆ ಎಂದರು.

ಬಿಜೆಪಿ ವತಿಯಿಂದ ಚಡ್ಡಿ ಮೆರವಣಿಗೆ ಬಗ್ಗೆ ಸಿಎಂ ಸಿದ್ಧರಾಮಯ್ಯ ಟೀಕೆ.

ಬಿಜೆಪಿಯವರನ್ನು ಮೊದಲು ಚಡ್ಡಿಗಳು ಎಂದೇ ಕರೆಯಲಾಗುತ್ತಿತ್ತು. ಪ್ರತಿಭಟನೆಗೆ ನಮ್ಮ ತಕರಾರಿಲ್ಲ. ಆದರೆ ರಾಜಕೀಯ ಲಾಭಕ್ಕಾಗಿ ವಿಷಯವನ್ನು ರಾಜಕಾರಣ ಮಾಡಬಾರದು ಎಂದರು.

ಸರ್ಕಾರ ವಿಫಲವಾಗಿದೆ ಎನ್ನುವುದು ರಾಜಕಾರಣ

ರಾಜ್ಯ ಕಾಂಗ್ರೆಸ್ ಡಿಎಂಕೆ ಬಿ ಟೀಮ್ ಎಂದು ಬಿಜೆಪಿ ಆರೋಪಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿದ್ಧರಾಮಯ್ಯ, ಡಿಎಂಕೆ ತಮಿಳುನಾಡಿನವರು. ಬಿಜೆಪಿ ಎಐಎಡಿಎಂಕೆ ಜೊತೆಗಿತ್ತು. ಅವರನ್ನು ಏನೆಂದು ಹೇಳಬೇಕು ಎಂದು ಪ್ರಶ್ನಿಸಿದರು. ರಾಜಕಾರಣಕ್ಕೆ ಏನೇನೋ ಹೇಳಬಾರದು. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಪ್ರಧಾನಿಗಳಿಗೆ ಪತ್ರ ಬರೆದಿರುವುದು ಸಂತೋಷದ  ವಿಷಯ. ಅದನ್ನು ನಾವು ಸ್ವಾಗತಿಸುತ್ತೇವೆ. ಆದರೆ ರಾಜ್ಯ ಸರ್ಕಾರ ವಿಫಲವಾಗಿದೆ ಎನ್ನುವುದು ರಾಜಕಾರಣ ಎಂದರು.

ರಾಜ್ಯದ ರೈತರ ಹಾಗೂ ರಾಜ್ಯದ ಹಿತರಕ್ಷಣೆಗೆ ಯಾವತ್ತೂ ಹಿಂದೆ ಬಿದ್ದಿಲ್ಲ

ರಾಜ್ಯ ಸರ್ಕಾರ ಈ ರಾಜ್ಯದ ರೈತರ ಹಾಗೂ ರಾಜ್ಯದ ಹಿತರಕ್ಷಣೆಗೆ ಯಾವತ್ತೂ ಹಿಂದೆ ಬಿದ್ದಿಲ್ಲ, ಬೀಳುವುದೂ ಇಲ್ಲ. ನಮಗೆ ಅಧಿಕಾರ ಮುಖ್ಯವಲ್ಲ. ರಾಜ್ಯದ ಜನರ ಹಿತ ಮುಖ್ಯ. ಇದರಲ್ಲಿ ನಾವು ಬಲವಾದ ನಂಬಿಕೆ ಇಟ್ಟುಕೊಂಡಿರುವವರು ಎಂದರು.

ದೇಶದಲ್ಲಿ ಬಿಜೆಪಿ ವಿರುದ್ಧ ವಾದ ಶಕ್ತಿಗಳು ಒಂದುಗೂಡುತ್ತಿವೆ ಎಐಎಡಿಎಂಕೆ ಹೊರಗೆ ಬರುತ್ತಿದ್ದಾರೆ, ಮತ್ತೊಂದೆಡೆ ಜಿಡಿಎಸ್ ನಿಂದ ಮುಸ್ಲಿಂರು ಹೊರಗೆ ಬರುತ್ತಿದ್ದು, ಬಿಜೆಪಿ ವಿರುದ್ಧ ಧ್ರುವೀಕರಣ ವಾಗಿಟ್ಟಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿ, ಇಡೀ ದೇಶದಲ್ಲಿ ಬಿಜೆಪಿ ವಿರುದ್ಧವಾದ ಶಕ್ತಿಗಳು ಒಂದುಗೂಡುವ ಕೆಲಸವಾಗುತ್ತಿದೆ. ಏಕೆಂದರೆ ಬಿಜೆಪಿ ಕಳೆದ 9 ವರ್ಷಗಳಲ್ಲಿ ನುಡಿದಂತೆ ನಡೆದಿಲ್ಲ. ಭಾವನಾತ್ಮಕ ವಿಷಯಾಗಳನ್ನು ಮುಂದಿಟ್ಟು ಸಮಾಜವನ್ನು ಒಡೆಯುವ ಕೆಲಸ ಮಾಡಿದ್ದಾರೆ. ಅದಕ್ಕಾಗಿ ಈ ಸತ್ಯ ಗೊತ್ತಾದ ಮೇಲೆ ಅನೇಕ ಶಕ್ತಿಗಳು ಒಂದಾಗಿ ಬಿಜೆಪಿಯೇತರ ಗುಂಪಿನಲ್ಲಿ ಗುರುತಿಸಿಕೊಂಡಿದ್ದಾರೆ ಎಂದರು.

ಶುಕ್ರವಾರ ಕರ್ನಾಟಕ ಬಂದ್ ಗೆ ಕರೆ ನೀಡಿರುವ ಬಗ್ಗೆ ಮಾತನಾಡಿದ ಸಿದ್ಧರಾಮಯ್ಯ, ಯಾವ ಬಂದ್ ಬೇಕಾದರೂ ಮಾಡಲಿ ಆದರೆ ಬಂದ್, ಮೆರವಣಿಗೆ, ಪ್ರತಿಭಟನೆ ಮಾಡಬಾರದು ಎಂದು ಸರ್ವೋಚ್ಚ ನ್ಯಾಯಾಲಯ ಆದೇಶ ಮಾಡಿದೆ. ನಾವೇನು ಅಡ್ಡಿಪಡಿಸಲು ಹೋಗುವುದಿಲ್ಲ ಎಂದರು.

ಶೂನ್ಯ ಅಂಕಕ್ಕೆ ಮೆಡಿಕಲ್ ಸೀಟು  ಕ್ಯಾಪಿಟೇಶನ್ ಗೆ ಬೆಂಚ್ ಮಾರ್ಕ್

ಭಾರತೀಯ ವೈದ್ಯಕೀಯ ಮಂಡಳಿಯು ಪ್ರವೇಶ ಪರೀಕ್ಷೆಯಲ್ಲಿ ಶೂನ್ಯ ಅಂಕ ಪಡೆದರೂ ವೈದ್ಯಕೀಯ ಸೀಟು ಪಿಜಿಯಲ್ಲಿ ಪಡೆಯಬಹುದು ಎಂದು ಆದೇಶ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಇದು ಸರಿಯಲ್ಲ. ಮೆರಿಟ್ ಮೇಲೆ ಸೀಟು ಹಂಚಿಕೆ ಮಾಡಬೇಕು. ಶೂನ್ಯ ಪಡೆದರೂ ಸೀಟು ನೀಡಿದರೆ, ಕ್ಯಾಪಿಟೇಶನ್ ಗೆ ಬೆಂಚ್ ಮಾರ್ಕ್ ಸೃಷ್ಟಿಸಿದಂತಾಗುವುದು ಎಂದರು.

ಸಂಕಷ್ಟ ಪರಿಹಾರ  ಸೂತ್ರ ರೂಪಿಸಲು  ಒತ್ತಡ

ಕಾವೇರಿ ನೀರು ನಿಯಂತ್ರಣ ಮಂಡಳಿ ಹಾಗೂ ಸರ್ವೋಚ್ಚ ನ್ಯಾಯಾಲಯದ ಮುಂದೆ ಸಂಕಷ್ಟ ಸೂತ್ರ ರೂಪಿಸಲು ನಾವು ಒತ್ತಡ ಹೇರುತ್ತಿದ್ದೇವೆ. ಏಕೆಂದರೆ ಮಳೆ ಕೈಕೊಟ್ಟ ಸಂದರ್ಭದಲ್ಲಿ ಎರಡೂ ಕಡೆ ಸಂಕಷ್ಟ ಶುರುವಾಗುತ್ತದೆ. ಅಂಥ ಸಂದರ್ಭದಲ್ಲಿ ನಾವು ಸಂಕಷ್ಟ ಹಂಚಿಕೊಳ್ಳಬೇಕು ಎಂದರು.

ಮೇಕೆದಾಟು ಜಲಾಶಯದಿಂದ ಪರಿಹಾರ :

ಇಂತಹ ಸನ್ನಿವೇಶದಲ್ಲಿ ನೀರು ಹಂಚಿಕೆಯ ವಿಚಾರದಲ್ಲಿ ಸಂಕಷ್ಟ ಸೂತ್ರವಿರಬೇಕು. ಮತ್ತೊಂದು ಪರಿಹಾರವೆಂದರೆ, ಮೇಕೆದಾಟು ಜಲಾಶಯವಿದ್ದಿದ್ದರೆ  67 ಟಿಎಂಸಿ ನೀರು ಇರುತ್ತಿದ್ದು, ಅಲ್ಲಿ ನೀರಿದ್ದರೆ ತಮಿಳುನಾಡಿಗೆ ನೀರು ಬಿಡಲು ಅನುಕೂಲವಾಗುತ್ತಿತ್ತು. ಈ ಜಲಾಶಯದಿಂದ ಕರ್ನಾಟಕ ಹಾಗೂ ತಮಿಳುನಾಡು ಎರಡೂ ರಾಜ್ಯಗಳಿಗೆ ಅನುಕೂಲವಾಗುತ್ತಿತ್ತು ಎಂದು ಅಭಿಪ್ರಾಯಪಟ್ಟರು.

ಬರಪರಿಹಾರಕ್ಕಾಗಿ ಕೇಂದ್ರಕ್ಕೆ ಮನವಿ .

ಕೇಂದ್ರದಿಂದ ಬರಪರಿಹಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿದ್ಧರಾಮಯ್ಯ, ಬರಪರಿಹಾರಕ್ಕಾಗಿ ಕೇಂದ್ರ ಸರ್ಕಾರದ ಸಚಿವರುಗಳನ್ನು ರಾಜ್ಯದ ಸಚಿವರು ಭೇಟಿಯಾಗುತ್ತಲಿದ್ದು, ಇದರ ಬಗ್ಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ರಾಜ್ಯದ ಸಂಸದರು ಕಾವೇರಿ ವಿವಾದ ಪರಿಹಾರಕ್ಕೆ ಪ್ರಯತ್ನಿಸಬೇಕು :

ಕೇಂದ್ರದ ತಜ್ಞರು ರಾಜ್ಯದಲ್ಲಿ ಕಾವೇರಿ ನೀರಿನ ಲಭ್ಯತೆ ಬಗ್ಗೆ ವಾಸ್ತವವಾಗಿ ಪರಿಶೀಲಿಸುವ ಬಗ್ಗೆ ಸಕಾರಾತ್ಮಕ ಸೂಚನೆ ಬಂದಿದೆಯೇ ಎಂಬುದಕ್ಕೆ ಪ್ರತಿಕ್ರಿಯೆ ನೀಡಿ, ನಾನು ಈ ಬಗ್ಗೆ ಕೇಂದ್ರಕ್ಕೆ ಬರೆಯಲಾಗಿದೆ. ಜನತಾದಳದ ವರಿಷ್ಠರಾದ ದೇವೇಗೌಡರು, ಈ ಬಗ್ಗೆ ಭೇಟಿಯಾಗಿದ್ದು, ಕೇಂದ್ರದೊಂದಿಗೆ ಅವರ ಈ ಹೊಸ ಸ್ನೇಹದಿಂದ ಪರಿಹಾರ ದೊರೆಯಬಹುದೇ ನೋಡೋಣ. ರಾಜ್ಯಸರ್ಕಾರ ಪರಿಹಾರ ಸೂತ್ರ ಕೋರಿ ಬರೆದಿರುವ ಪತ್ರಕ್ಕೆ ಕೇಂದ್ರದಿಂದ ಯಾವುದೇ ಪ್ರತಿಕ್ರಿಯೆ ದೊರೆತಿಲ್ಲ. ಬಿಜೆಪಿಯವರ 25 ಸಂಸದರು ಪ್ರಧಾನಿಯವರ ಮೇಲೆ ಒತ್ತಡ ಹೇರಿ, ಕಾವೇರಿ ಸಮಸ್ಯೆಗೆ ಪರಿಹಾರ ದೊರಕಿಸಬೇಕು ಎಂದರು.

ಕಾವೇರಿ ವಿವಾದದ ಇತ್ಯರ್ಥಕ್ಕೆ ಪ್ರಧಾನಮಂತ್ರಿಗಳ ಮಧ್ಯಸ್ಥಿಕೆ ಅಗತ್ಯ :

ಕಾವೇರಿ ವಿವಾದದ ವಿಷಯವಾಗಿ ನ್ಯಾಯಾಲಯದ ಹೊರಗೆ ಇತ್ಯರ್ಥಗೊಳಿಸಿಕೊಳ್ಳಲು ಸಿದ್ಧವಿದೆಯೆ ಎಂಬುದಕ್ಕೆ ಉತ್ತರಿಸಿ, ಸಾಮಾನ್ಯ ವರ್ಷಗಳಲ್ಲಿ ತಮಿಳುನಾಡಿಗೆ ನೀರು ಬಿಡಬೇಕಾದ ಪ್ರಮಾಣದ ಬಗ್ಗೆ ಸುಪ್ರೀಂ ಕೋರ್ಟ್ ಈಗಾಗಲೇ ಆದೇಶ ನೀಡಿದೆ. ಆದರೆ ಸಂಕಷ್ಟದ ಸಮಯದಲ್ಲಿ ಆ ರಾಜ್ಯಕ್ಕೆ ನೀರು ಬಿಡುವ ಪ್ರಮಾಣ ತಿಳಿಸುವ ಸಂಕಷ್ಟ ಸೂತ್ರ ಇನ್ನೂ ನಿರ್ಧಾರವಾಗಿಲ್ಲ. ಇಂತಹ ಸಂದರ್ಭದಲ್ಲಿ ಒಂದು ಸೌಹಾರ್ಧ ಇತ್ಯರ್ಥಕ್ಕೆ ಬರುವುದೇ ಉತ್ತಮ. ಆದ್ದರಿಂದ ಕಾವೇರಿ ವಿವಾದಕ್ಕೆ ಇತ್ಯರ್ಥಕ್ಕೆ ಪ್ರಧಾನಮಂತ್ರಿಗಳು ಮಧ್ಯಸ್ಥಿಕೆ ವಹಿಸಬೇಕು ಎಂದರು.

ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರ :

ಮಹದೇಶ್ವರ ಬೆಟ್ಟದ ಪ್ರದೇಶದಲ್ಲಿ 150 ಅಂಗಡಿಗಳಿದ್ದು, ಅವುಗಳಲ್ಲಿ ಒಂದು ಅಂಗಡಿಯೂ ಎಸ್ ಸಿ ಎಸ್ ಟಿ ಅಥವಾ ಓಬಿಸಿ ಸೇರಿಲ್ಲದ ಬಗ್ಗೆ ಪ್ರಶ್ನಿಸಿದಾಗ, ಮಲೆಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿದ್ದು, ನಾಳೆ ಸಭೆ ನಡೆಸುತ್ತಿದ್ದು, ಈ ಬಗ್ಗೆ ವಿಚಾರಿಸುವುದಾಗಿ  ಸಿಎಂ ಸಿದ್ಧರಾಮಯ್ಯ ತಿಳಿಸಿದರು. ಚಾಮರಾಜನಗರ ಜಿಲ್ಲೆಯ ಭೇಟಿಗೆ ನಾನು ಸದಾ ಸಿದ್ಧನಿರುತ್ತೇನೆ ಎಂದರು.

ರಾಜ್ಯದಿಂದ ಸಮರ್ಥ ವಾದ ಮಂಡನೆ :

ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು, ರಾಜ್ಯ ಸರ್ಕಾರ ಕಾವೇರಿ ಬಗ್ಗೆ ವಾದವನ್ನು ಸಮರ್ಥವಾಗಿ ಮಂಡಿಸಿಲ್ಲ ಎಂಬ ಟೀಕೆಗೆ ಉತ್ತರಿಸುತ್ತಾ, ಕಾವೇರಿ ವಿಷಯದ ವಾದಮಂಡನೆಗೆ ಮೊದಲಿನಿಂದಲೂ ಇರುವ ಕಾನೂನೂ ತಂಡವೇ ಈಗಲೂ ಇದ್ದು, ಎಲ್ಲ ಪಕ್ಷದ ಸರ್ಕಾರದ ಅವಧಿಯಲ್ಲಿ ಇದ್ದ ತಂಡವೇ ಆಗಿದೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಮುಂದೆ ವಾಸ್ತವ ಪರಿಸ್ಥಿತಿಯ ಬಗ್ಗೆ ಸಮರ್ಥವಾಗಿ ವಾದ ಮಂಡಿಸಿದರೂ ಕೂಡ 5000 ಕ್ಯೂಸೆಕ್ಸ್ ನೀರು ಬಿಡಲು ಸೂಚಿಸಿದ್ದಾರೆ. ಇಂದು ಪುನ: ಕಾವೇರಿ ವಿವಾದದ ವಿಚಾರಣೆ ಇದ್ದು, ರಾಜ್ಯ ಸರ್ಕಾರ ಸಮರ್ಥ ವಾದಮಂಡನೆ ಮಾಡಲಿದೆ ಎಂದರು.

ಕೇಂದ್ರದಿಂದ ಕೇವಲ ವೋಟ್ ಬ್ಯಾಂಕಿಗಾಗಿ ಮಹಿಳಾ ಮೀಸಲಾತಿ ಮಸೂದೆ ಜಾರಿ :

ಮಹಿಳಾ ಮೀಸಲಾತಿ ಮಸೂದೆ ಬಗ್ಗೆ ಪ್ರತಿಕ್ರಿಯೆ ನೀಡಿ, ಚುನಾವಣೆಯ ದೃಷ್ಟಿಯಿಂದ ಕೇಂದ್ರ ಈ ಮಸೂದೆಯನ್ನು ಜಾರಿ ಮಾಡಿದೆ. ಮಹಿಳೆಯರಿಗೆ ಮೀಸಲಾತಿ ನೀಡಬೇಕೆಂಬ ಪ್ರಾಮಾಣಿಕತೆಯಿದ್ದಿದ್ದರೆ, ಈ ಮಸೂದೆಗೆ 15 ವರ್ಷದ ಆಯಸ್ಸನ್ನು 15 ವರ್ಷಕ್ಕೆ ನಿಗದಿಪಡಿಸುತ್ತಿರಲಿಲ್ಲ. ಡಿಲಿಮಿಟೇಷನ್ ಮತ್ತು ಜಾತಿಗಣತಿ ನಂತರ ಈ ಮಸೂದೆ ಜಾರಿ ಎಂದಿದ್ದು, ಈ ಬಾರಿಯ ಹಾಗೂ ಮುಂದಿನ ಲೋಕಸಭೆ ಚುನಾವಣೆ ಅವಧಿಯಲ್ಲಿ ಸಾಧ್ಯವಿಲ್ಲ. ಈಗ ಚಾಲ್ತಿಯಲ್ಲಿರುವ ಜಾತಿಗಣತಿಯ ಆಧಾರದ ಮೇಲೆಯೇ ಮೀಸಲಾತಿಯನ್ನು ಜಾರಿಮಾಡಬಹುದಿತ್ತು. ಈ ಮಸೂದೆಯನ್ನು ಕೇಂದ್ರ ಸರ್ಕಾರ ಕೇವಲ ವೋಟ್ ಬ್ಯಾಂಕಿಗಾಗಿ ಮಾಡಿರುವುದೇ ಹೊರತು, ಮಹಿಳೆಯರ ಪರ ಯಾವುದೇ ಕಾಳಜಿಯಿಲ್ಲ ಎಂದು ತಿಳಿಸಿದರು.

Key words: BJP -JDS – politics – Cauvery issue – CM Siddaramaiah