ಬಿಜೆಪಿಗೆ ಗುಡ್ ಬೈ: ನಾಳೆ ರಾಜುಕಾಗೆ ಕಾಂಗ್ರೆಸ್ ಸೇರ್ಪಡೆ ಖಚಿತ….

ಬೆಂಗಳೂರು ,ನ,11,2019(www.justkannada.in):  ಕಾಗವಾಡ ಕ್ಷೇತ್ರದಿಂದ ಅನರ್ಹ ಶಾಸಕ ಶ್ರೀಮಂತ್ ಪಾಟೀಲ್ ಗೆ ಟಿಕೆಟ್ ನೀಡುವ ಸಾಧ್ಯತೆ ಹಿನ್ನೆಲೆ ಬಿಜೆಪಿಯಿಂದ ಬಂಡಾಯವೆದ್ದಿರುವ ರಾಜುಕಾಗೆ ಇದೀಗ ಕಾಂಗ್ರೆಸ್ ಸೇರ್ಪಡೆಯಾಗಲು ನಿರ್ಧರಿಸಿದ್ದಾರೆ.

ಕಾಂಗ್ರೆಸ್ ನಾಯಕರಾದ ಡಿ.ಕೆ ಶಿವಕುಮಾರ್ ಮತ್ತು ಸಿದ್ಧರಾಮಯ್ಯ ಅವರನ್ನ ಭೇಟಿಯಾಗಿದ್ದ ಬಿಜೆಪಿ ಮುಖಂಡ ರಾಜುಕಾಗೆ ಈ ಬಗ್ಗೆ ಮಾತುಕತೆ ನಡೆಸಿದ್ದು ನಾಳೆ ಬಿಜೆಪಿಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ.

ಈ ಬಗ್ಗೆ ಸ್ವತಃ ರಾಜುಕಾಗೆ ಅವರೇ ಸ್ಪಷ್ಟನೆ ನೀಡಿದ್ದಾರೆ. ನಾನು ನಾಳೆ ಬಿಜೆಪಿ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತೇನೆ. ನಾಳೆಯೇ ಬೆಂಗಳೂರಿನಲ್ಲಿ ಕಾಂಗ್ರೆಸ್ ಸೇರುತ್ತೇನೆ. ನವೆಂಬರ್ 18 ರಂದು ಕಾಗವಾಡ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ ಎಂದು ತಿಳಿಸಿದ್ದಾರೆ.

ಹುಬ್ಬಳ್ಳಿ ಸಭೆಯಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ನನಗೆ ಅವಮಾನ ಮಾಡಿದ್ದಾರೆ. ಹೀಗಾಗಿ ಬಿಜೆಪಿ ತೊರೆಯಲು ನಿರ್ಧರಿಸಿದ್ದೇನೆ ಎಂದು ರಾಜುಕಾಗೆ ತಿಳಿಸಿದ್ದಾರೆ.

Key words: BJP leader –RajuKage- tomorrow- join- Congress