Tuesday, September 1, 2026

BDA Apartments

Home Front Page ಮಾಡಿದ ಪಾಪ ತೊಳೆದುಕೊಳ್ಳಲು ಬಿಜೆಪಿಯವರ ಪಾದಯಾತ್ರೆ-ಸಚಿವ ಮಧು ಬಂಗಾರಪ್ಪ

ಮಾಡಿದ ಪಾಪ ತೊಳೆದುಕೊಳ್ಳಲು ಬಿಜೆಪಿಯವರ ಪಾದಯಾತ್ರೆ-ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ,ಸೆ.1,2026 (www.justkannada.in):  ಜನಪರ ಆಡಳಿತ ನೀಡುತ್ತಿರುವ ನಮ್ಮ ಸರ್ಕಾರದ ಬಗ್ಗೆ ಪ್ರಶ್ನಿಸಲು ಸೂಕ್ತ ವಿಷಯಗಳೇ ಇಲ್ಲದ ಕಾರಣ ಬಿಜೆಪಿಯವರು ಮಾಡಿದ ಪಾಪ ತೊಳೆದುಕೊಳ್ಳಲು ಪಾದಯಾತ್ರೆ ನಡೆಸುತ್ತಿದ್ದಾರೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ವ್ಯಂಗ್ಯವಾಡಿದರು.

ಸೊರಬದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಆರೋಪ ಮಾಡಿದರೆಂಬ ಕಾರಣಕ್ಕೆ ಬಿ. ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ಈಗಾಗಲೇ ರಾಜೀನಾಮೆ ನೀಡಿಯಾಗಿದೆ. ಆದರೂ ಬಿಜೆಪಿಯವರು ಈ ವಿಚಾರದಲ್ಲಿ ಇನ್ನೂ ಬಾಯಿ ಬಡಿದುಕೊಳ್ಳುವುದನ್ನು ಬಿಟ್ಟಿಲ್ಲ ಎಂದು ಕುಟುಕಿದರು.

ರಾಜ್ಯದ ಹಿತಾಸಕ್ತಿ ಬಗ್ಗೆ ಬಿಜೆಪಿಗೆ ಕಾಳಜಿ ಇಲ್ಲ

ಇದೇ ವಿಷಯವನ್ನು ಮುಂದಿಟ್ಟುಕೊಂಡು ವಿಧಾನಸಭೆಯ ಮುಂಗಾರು ಅಧಿವೇಶನವನ್ನು ಬಿಜೆಪಿಯವರು ಹಾಳು ಮಾಡಿದರು. ರಾಜ್ಯದಲ್ಲಿನ ಬರಗಾಲ ಪರಿಸ್ಥಿತಿಯ ಬಗ್ಗೆ ಚರ್ಚಿಸಲು ಅವರಿಗೆ ಇಷ್ಟವಿಲ್ಲ. ಕಸ್ತೂರಿ ರಂಗನ್ ವರದಿ ಬಗ್ಗೆಯೂ ಮಾತನಾಡುವುದಿಲ್ಲ. ಒಟ್ಟಾರೆ ರಾಜ್ಯದ ಹಿತಾಸಕ್ತಿ ಬಗ್ಗೆ ಬಿಜೆಪಿಗೆ ಎಳ್ಳಷ್ಟೂ ಕಾಳಜಿ ಇಲ್ಲ,” ಎಂದು ಆರೋಪಿಸಿದರು.

ಪಶ್ಚಿಮ ಬಂಗಾಳ, ಮಹಾರಾಷ್ಟ್ರ, ಬಿಹಾರ, ಅಸ್ಸಾಂ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ‘ವಾಷಿಂಗ್ ಮೆಷಿನ್’ ಮೂಲಕ ಎಷ್ಟು ಮಂದಿ ಸ್ವಚ್ಛರಾಗಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಿದೆ. ಹೆದರಿಸುವುದೇ ಬಿಜೆಪಿಯವರ ಗುಣ ಮತ್ತು ರಾಜಕೀಯ ಬಂಡವಾಳವಾಗಿದೆ ಎಂದು ಮಧು ಬಂಗಾರಪ್ಪ ಟೀಕಿಸಿದರು.

ಶೀಘ್ರ ತಾಲೂಕು, ಜಿಲ್ಲಾ ಪಂಚಾಯಿತಿ ಚುನಾವಣೆ

ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಕುರಿತು ಪ್ರತಿಕ್ರಿಯಿಸಿದ ಸಚಿವರು, ಈ ಬಗ್ಗೆ ಮುಖ್ಯಮಂತ್ರಿ ಅವರೊಂದಿಗೆ ಈಗಾಗಲೇ ಚರ್ಚಿಸಲಾಗಿದೆ. ಸಾಧ್ಯವಾದಷ್ಟು ಬೇಗ ಚುನಾವಣೆ ನಡೆಸಬೇಕು ಎಂಬುದು ನಮ್ಮ ಆಶಯವಾಗಿದೆ ಎಂದರು.

ಗ್ಯಾರಂಟಿ ಯೋಜನೆಗಳು ಕರ್ನಾಟಕದಲ್ಲಿ ಯಶಸ್ವಿ’

ನಾವು ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೇವೆ. ಇಡೀ ದೇಶದಲ್ಲಿಯೇ ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿ ಅನುಷ್ಠಾನಗೊಂಡಿರುವುದು ಕರ್ನಾಟಕದಲ್ಲಿ ಮಾತ್ರ. ಇದೀಗ ಕ್ಷೇತ್ರದ ಅಭಿವೃದ್ಧಿಗೂ ಸರಣಿ ಸಭೆಗಳನ್ನು ನಡೆಸುತ್ತಿದ್ದೇನೆ,” ಎಂದು ಹೇಳಿದರು.

ಮೊದಲ ಹಂತದಲ್ಲಿ 13 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ ಹಳ್ಳಿಗಳ ಸಮಸ್ಯೆಗಳನ್ನು ಆಲಿಸಲಾಗಿದ್ದು, ಎರಡನೇ ಹಂತದಲ್ಲಿ ಇಂದು 11 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ ಜನರ ಸಮಸ್ಯೆಗಳಿಗೆ ಕಿವಿಯಾಗಿದ್ದೇನೆ. ಕೆಲವು ಸಮಸ್ಯೆಗಳನ್ನು ಸ್ಥಳದಲ್ಲಿಯೇ ಪರಿಹರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಡಿಸೆಂಬರ್ ಒಳಗೆ ಪ್ರತಿ ಹಳ್ಳಿಗೂ ಭೇಟಿ

ಡಿಸೆಂಬರ್ ಒಳಗೆ ಸೊರಬ ವಿಧಾನಸಭಾ ಕ್ಷೇತ್ರದ ಪ್ರತಿಯೊಂದು ಹಳ್ಳಿಗೂ ಖುದ್ದಾಗಿ ಭೇಟಿ ನೀಡುವುದಾಗಿ ಮಧು ಬಂಗಾರಪ್ಪ ಹೇಳಿದರು.

ಎರಡನೇ ಬಾರಿಗೂ ನಮ್ಮ ಪಕ್ಷ ನನ್ನ ಮೇಲೆ ವಿಶ್ವಾಸವಿಟ್ಟು ಸಚಿವ ಸ್ಥಾನ ನೀಡಿದೆ. ಶಿಕ್ಷಣ ಇಲಾಖೆಯಲ್ಲಿ ಬದಲಾವಣೆ ತರುವುದರ ಜೊತೆಗೆ ನನ್ನ ಕ್ಷೇತ್ರದ ಅಭಿವೃದ್ಧಿಗೂ ಆದ್ಯತೆ ನೀಡುತ್ತೇನೆ, ಎಂದು ಭರವಸೆ ನೀಡಿದರು.

ಮುಂದಿನ ಒಂದು ವರ್ಷದಲ್ಲಿ ‘ಕೆಪಿಎಸ್ ಕ್ರಾಂತಿ

ಎಡಿಬಿ ಬ್ಯಾಂಕ್ ರಾಜ್ಯದ ಕರ್ನಾಟಕ ಪಬ್ಲಿಕ್‌ ಶಾಲೆಗಳ ಅಭಿವೃದ್ಧಿಗೆ ಸಾಲ ನೀಡಲು ಮುಂದೆ ಬಂದಿದೆ. ಎಜಾಕ್ ಸಂಸ್ಥೆಯಂತಹ ಅನೇಕ ಕಂಪನಿಗಳು, ಸಂಸ್ಥೆಗಳು “ಸಮುದಾಯ ಮತ್ತು ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ” (CCSR) ಅಡಿಯಲ್ಲಿ  ಕರ್ನಾಟಕ ಪಬ್ಲಿಕ್ ಶಾಲೆಗಳ ನಿರ್ಮಾಣಕ್ಕೆ ಕೈಜೋಡಿಸಿವೆ. ಈ ಹಿನ್ನೆಲೆಯಲ್ಲಿ ಮುಂದಿನ ಒಂದು ವರ್ಷದಲ್ಲಿ ರಾಜ್ಯದಲ್ಲಿ ಕೆಪಿಎಸ್ ಕ್ರಾಂತಿ ನಡೆಯಲಿದೆ ಎಂದು ಸಚಿವ ಮಧು ಬಂಗಾರಪ್ಪ ಹೆಮ್ಮೆಯಿಂದ ಹೇಳಿದರು.

Key words: BJP,  padayatra, Minister, Madhu Bangarappa