ಬಜೆಟ್ ಅಧಿವೇಶನ: ನಾಳೆಯಿಂದ ವಿಧಾನಸೌಧ ಸುತ್ತಮುತ್ತ ನಿಷೇಧಾಜ್ಞೆ ಜಾರಿ

ಬೆಂಗಳೂರು, ಜುಲೈ 02, 2023 (www.justkannada.in): ವಿಧಾನಸೌಧ ಸುತ್ತಮುತ್ತಲೂ ಜುಲೈ 3ರಿಂದ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಕರ್ನಾಟಕದ ಆಡಳಿತದ ಶಕ್ತಿ ಕೇಂದ್ರ ವಿಧಾನಸೌಧ ಸುತ್ತಮುತ್ತ ಈ ಸಂದರ್ಭದಲ್ಲಿ ಯಾವುದೇ ರೀತಿಯ ಪ್ರತಿಭಟನೆಯನ್ನು ಸಹ ನಡೆಸುವಂತಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಜುಲೈ 3 ರಿಂದ 14ರ ತನಕ ಪ್ರತಿದಿನ ಬೆಳಗ್ಗೆ 6 ರಿಂದ ರಾತ್ರಿ 12 ಗಂಟೆಯ ತನಕ ವಿಧಾನಸೌಧ ಸುತ್ತಮುತ್ತಲಿನ 2 ಕಿ. ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ತಿಳಿಸಿದ್ದಾರೆ.

ಜುಲೈ 3ರ ಸೋಮವಾರ ಕರ್ನಾಟಕ ವಿಧಾನಸಭೆ ಬಜೆಟ್ ಅಧಿವೇಶನ ಆರಂಭವಾಗುತ್ತಿದೆ. ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಜುಲೈ 7ರಂದು ಮುಖ್ಯಮಂತ್ರಿ, ಹಣಕಾಸು ಸಚಿವರು ಆಗಿರುವ ಸಿದ್ದರಾಮಯ್ಯ 2023-24ನೇ ಸಾಲಿನ ಬಜೆಟ್ ಮಂಡನೆ ಮಾಡಲಿದ್ದಾರೆ.