Tuesday, August 4, 2026

BDA Apartments

Home Front Page ಕುರ್ಚಿ ಉಳಿಸಿಕೊಳ್ಳಲು ಶಾಸಕರಿಗೆ ವಿದೇಶಿ ಪ್ರವಾಸ ಭಾಗ್ಯ- ಬಿವೈ ವಿಜಯೇಂದ್ರ ಟೀಕೆ

ಕುರ್ಚಿ ಉಳಿಸಿಕೊಳ್ಳಲು ಶಾಸಕರಿಗೆ ವಿದೇಶಿ ಪ್ರವಾಸ ಭಾಗ್ಯ- ಬಿವೈ ವಿಜಯೇಂದ್ರ ಟೀಕೆ

ಬೆಳಗಾವಿ,ಫೆಬ್ರವರಿ,12,2026 (www.justkannada.in): ಕುರ್ಚಿ ಉಳಿಸಿಕೊಳ್ಳಲು ಸಿಎಂ ಸಿದ್ದರಾಮಯ್ಯ ಶಾಸಕರಿಗೆ ವಿದೇಶ ಪ್ರವಾಸ ಭಾಗ್ಯ ಕಲ್ಪಿಸಲು ಹೊರಟಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವ್ಯಂಗ್ಯವಾಡಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಿವೈ ವಿಜಯೇಂದ್ರ, ತಮ್ಮ ವಿಧಾನಸಭೆ ಕ್ಷೇತ್ರಗಳ ಅಭಿವೃದ್ಧಿಗೆ ಕಾಂಗ್ರೆಸ್‌ ಶಾಸಕರಿಗೆ ಸಹ ಅನುದಾನ ಸಿಗುತ್ತಿಲ್ಲ. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸ್ಥಾನ ಉಳಿಸಿಕೊಳ್ಳಲು ಶಾಸಕರನ್ನು ವಿದೇಶ ಪ್ರವಾಸಕ್ಕೆ ಕಳುಹಿಸುತ್ತಿದ್ದಾರೆ. ಕುರ್ಚಿ ಉಳಿಸಿಕೊಳ್ಳುವ ಭರಾಟೆಯಲ್ಲಿ ಸಿ.ಎಂ ಅವರಿಗೆ ಯಾರೂ ಕಾಣುತ್ತಿಲ್ಲ. ಇಂಥ ಕೆಟ್ಟ ಸರ್ಕಾರವನ್ನು ರಾಜ್ಯದ ಇತಿಹಾಸದಲ್ಲೇ ನೋಡಿಲ್ಲ ಎಂದು ಜನ ಮಾತನಾಡಿಕೊಳ್ಳುತ್ತಿದ್ದಾರೆ ಎಂದು ಟೀಕಿಸಿದರು.

ರಾಜ್ಯದಲ್ಲಿ ಸುಮಾರು 2.85 ಲಕ್ಷ ಹುದ್ದೆಗಳು ಖಾಲಿ, ಭರ್ತಿ ಇಲ್ಲ

ಹಾಗೆಯೇ ರಾಜ್ಯದಲ್ಲಿ ಸರ್ಕಾರಿ ಹುದ್ದೆಗಳ ಭರ್ತಿಗೆ ಮುಂದಾಗದ ಸರ್ಕಾರಕ್ಕೆ ಚಾಟಿ ಬೀಸಿದ ಬಿವೈ ವಿಜಯೇಂದ್ರ, ‘ವಿವಿಧ ಸರ್ಕಾರಿ ಇಲಾಖೆಗಳು ಮತ್ತು ಸರ್ಕಾರದ ಮಟ್ಟದಲ್ಲಿ ಸುಮಾರು 2.85 ಲಕ್ಷ ಹುದ್ದೆಗಳು ಖಾಲಿ ಇವೆ. ಅವುಗಳನ್ನು ಭರ್ತಿ ಮಾಡಲು ನಿರ್ಧರಿಸಿದ್ದರೆ, ಹಿಂದುಳಿದ ಮತ್ತು ಪರಿಶಿಷ್ಟ ವರ್ಗಗಳ ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗ ಸಿಗುತ್ತಿತ್ತು ಎಂದರು.

‘ತಮ್ಮ ಕ್ಷೇತ್ರದ ಅಭಿವೃದ್ಧಿಗೆ ಹಣ ಕೊಡುವಂತೆ ಕಾಂಗ್ರೆಸ್‌ ನ ಶಾಸಕರು ಗೋಗರೆಯುತ್ತಿದ್ದಾರೆ. ಬಡವರಿಗೆ ಮನೆ ಕಟ್ಟಿಕೊಡಲು ಮತ್ತು ಗಂಗಾ ಕಲ್ಯಾಣ ಯೋಜನೆಗೆ ಅನುದಾನವಿಲ್ಲ. ಮೃತ ಕುರಿ, ಮೇಕೆಗಳಿಗೆ ಅನುಗ್ರಹ ಯೋಜನೆಯಡಿ ಹಣ ಕೊಟ್ಟಿಲ್ಲ. ಒಟ್ಟಾರೆ ಕಾಂಗ್ರೆಸ್ ಸರ್ಕಾರದಲ್ಲಿ ರಾಜ್ಯವು ಅಭಿವೃದ್ಧಿ ಕಂಡಿಲ್ಲ ಎಂದು ಬಿವೈ ವಿಜಯೇಂದ್ರ ವಾಗ್ದಾಳಿ ನಡೆಸಿದರು.

Key words: BY Vijayendra,  MLAs, Foreign trip