ಡಿಕೆಶಿ ವಿರುದ್ಧದ ಸಿಬಿಐ ತನಿಖೆ ಹಿಂತೆಗೆತ ಪ್ರಕರಣ ವಿಧಾನಸಭೆಯಲ್ಲಿ ಪ್ರತಿಧ್ವನಿ : ಸರ್ಕಾರಕ್ಕೆ ವಿಪಕ್ಷ ನಾಯಕ ಆರ್.ಅಶೋಕ್ ತರಾಟೆ.

ಬೆಳಗಾವಿ,ಡಿಸೆಂಬರ್,15,2023(www.justkannada.in):  ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆ ಹಿಂಪಡೆದ  ಪ್ರಕರಣ ಇಂದು ವಿಧಾನಸಭೆಯಲ್ಲಿ ಪ್ರತಿಧ್ವನಿಸಿತು. ಸರಕಾರದ ಕ್ರಮವನ್ನು ಖಂಡಿಸಿ ಪ್ರತಿಪಕ್ಷದ ನಾಯಕ ಆರ್. ಅಶೋಕ್ ವಿಧಾನಸಭೆಯಲ್ಲಿ ಶುಕ್ರವಾರ ತರಾಟೆಗೆ ತೆಗೆದುಕೊಂಡರು.

ಸರಕಾರದ ಕ್ರಮವನ್ನು ವಿರೋಧಿಸಿ ನಿಲುವಳಿ ಸೂಚನೆ ಮಂಡನೆಗೆ ಆರ್.ಅಶೋಕ್ ಪ್ರಯತ್ನಿಸಿದರು. ಪ್ರಕರಣದ ವಿಚಾರಣೆ ಕೋಟ್೯ನಲ್ಲಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸ್ಪೀಕರ್ ಅವರು ಅವಕಾಶ ನಿರಾಕರಿಸಿದರು.

ಇದಕ್ಕೂ ಮೊದಲು ವಿಷಯ ಪ್ರಸ್ತಾಪಿಸಿದ ಅಶೋಕ್ ಅವರು, ರಾಜ್ಯ ಸಚಿವ ಸಂಪುಟದಲ್ಲಿ ಕೈಗೊಂಡ ಈ ನಿರ್ಧಾರ ಸಂವಿಧಾನ ಬಾಹಿರ ಕ್ರಮವಾಗಿದೆ. ರಾಜಕೀಯ ದುರುದ್ದೇಶಗಳಿಂದ ಕೂಡಿದೆ ಎಂದು ಹರಿಹಾಯ್ದರು.

ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರವು ಡಿಕೆ ಶಿವಕುಮಾರ್ ಅವರು ಆದಾಯ ಮೀರಿದ ಆಸ್ತಿ ಗಳಿಸಿದ್ದಾರೆ ಎಂಬ ಆರೋಪಗಳ ಮೇರೆಗೆ 2019 ರ ಸೆಪ್ಟೆಂಬರ್ 25 ರಂದು ಸಿಬಿಐ ತನಿಖೆಗೆ ಒಪ್ಪಿಸಿತ್ತು. ಒಮ್ಮೆ ತನಿಖೆಗೆ ನೀಡಿದ್ದ ಪ್ರಕರಣವನ್ನು ಹಿಂದೆ ಪಡೆಯಲು ಬರುವುದಿಲ್ಲ ಎಂದು ಪ್ರತಿಪಾದಿಸಿದರು.

ಕಾಂಗ್ರೆಸ್ ಸರಕಾರ ಇದೇ ರೀತಿ ಯಡಿಯೂರಪ್ಪ ಮತ್ತು ಜನಾರ್ದನ ರೆಡ್ಡಿ ಅವರುಗಳ ವಿರುದ್ಧದ ಪ್ರಕರಣಗಳನ್ನು ಸಿಬಿಐ ತನಿಖೆಗೆ ನೀಡಿತ್ತು. ಬಳಿಕ ನಮ್ಮ ಸರಕಾರ ಅಧಿಕಾರಕ್ಕೆ ಬಂದಾಗ ಆ ಪ್ರಕರಣಗಳನ್ನು ಹಿಂಪಡೆಯುವ ಕೆಲಸ ಮಾಡಲಿಲ್ಲ. ಈ ಸರಕಾರ ತಮಗೆ ತೋಚಿದಂತೆ ನಿರ್ಣಯನ್ನು ಕೈಗೊಳ್ಳುವ ಮೂಲಕ ನ್ಯಾಯಾಂಗದ ಕಣ್ಣಿಗೆ ಮಣ್ಣೆರುಚುವ ಕೆಲಸ ಮಾಡಿದೆ ಎಂದೂ ಆರೋಪಿಸಿದರು.

ಇದಕ್ಕೆ ಬಿಜೆಪಿಯ ಎಲ್ಲಾ ಶಾಸಕರು ದನಿಗೂಡಿಸಿ ಈ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ಆಗ್ರಹಿಸಿದರು. ಆದರೆ ಇದಕ್ಕೆ ಒಪ್ಪಂದ ಸ್ಪೀಕರ್ ಖಾದರ್ ಅವರು ಪ್ರಕರಣದ ವಿಚಾರಣೆ ನ್ಯಾಯಾಲಯದ ಮುಂದೆ ಇದೆ ಎಂದು ಅವಕಾಶ ನಿರಾಕರಿಸಿದರು.

Key words: CBI investigation -against –DK Shivakumar- Opposition leader- R. Ashok