ನನಗೊಂದು ಅವಕಾಶ ಕೊಡಿ: ಈ ಬಾರಿ ಕೈ ಹಿಡಿಯದೇ ಹೋದ್ರೆ ನಾನು ಸತ್ತ ಹಾಗೆ- ‘ಕೈ’ ಅಭ್ಯರ್ಥಿ ಎಂ.ಲಕ್ಷ್ಮಣ್ ಭಾವನಾತ್ಮಕ ಮನವಿ

ಮೈಸೂರು,ಮಾರ್ಚ್,22,2024(www.justkannada.in): ಮೈಸೂರು ಕೊಡಗು ಕ್ಷೇತ್ರದ ಜನತೆಗೆ ಕೈ ಮುಗಿದು ಕೇಳಿಕೊಳ್ಳುತ್ತೇನೆ. ನಿಮ್ಮ ಸೇವೆ ಮಾಡಲಿಕ್ಕೆ ನನಗೊಂದು ಅವಕಾಶ ಕೊಡಿ. ಈ ಬಾರಿ ಕೈ ಹಿಡಿಯದೇ ಹೋದರೆ ನಾನು ಸತ್ತ ಹಾಗೆ ಎಂದು ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಮತದಾರರಲ್ಲಿ ಭಾವನಾತ್ಮಕವಾಗಿ ಮನವಿ  ಮಾಡಿದರು.

ಮೈಸೂರು ಕೊಡಗು ಲೋಕಸಭಾ ಚುನಾವಣೆ ಅಖಾಡ ರಂಗೇರಿದ್ದು, ತಮಗೆ ಕಾಂಗ್ರೆಸ್ ಟಿಕೆಟ್ ಘೋಷಣೆ ಬಳಿಕ ಮೊದಲ ಬಾರಿಗೆ ಎಂ ಲಕ್ಷ್ಮಣ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಮೈಸೂರಿನ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ನಗರಾಧ್ಯಕ್ಷ ಮೂರ್ತಿ, ಗ್ರಾಮಾಂತರ ಜಿಲ್ಲಾಧ್ಯಕ್ಷ ಬಿ ಜೆ ವಿಜಯ್ ಕುಮಾರ್ ಸೇರಿ ಕಾಂಗ್ರೆಸ್ ಮುಖಂಡರು ಭಾಗಿಯಾಗಿದ್ದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಂ.ಲಕ್ಷ್ಮಣ್, 1977 ರ ನಂತರ ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಒಕ್ಕಲಿಗ ಸಮುದಾಯಕ್ಕೆ ಈ ಭಾರಿ ಟಿಕೆಟ್ ಸಿಕ್ಕಿದೆ. ಸಿದ್ದರಾಮಯ್ಯರನ್ನ ಒಕ್ಕಲಿಗರ ವಿರೋಧ ಎನ್ನುವರಿಗೆ ಇದು ತಕ್ಕ ಉತ್ತರ. ನನ್ನ ಮತ್ತು ವಿಜಯ್ ಕುಮಾರ್ ಹೆಸರು ಹೈಕಮಾಂಡ್ ಗೆ ತಲುಪಿತ್ತು. ಇಬ್ಬರಲ್ಲಿ ನನಗೆ ಅವಕಾಶ ಸಿಕ್ಕಿದೆ. ನಾನು ಒಬ್ಬ ಬಡ ರೈತ ಕುಟುಂಬದಿಂದ ಬಂದವನು. ನನಗೆ ಯಾವುದೇ ರಾಜಕೀಯ ಹಿನ್ನಲೆ ಇಲ್ಲ. ನಾನು ಕೆಪಿಸಿಸಿ ವಕ್ತಾರನಾಗಿ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ. ಕೊಡಗು ಜಿಲ್ಲೆಯ ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲಲು ನನ್ನದು ಅಳಿಲು ಸೇವೆಯಿದೆ. ಮೈಸೂರು ಕ್ಷೇತ್ರದ 8 ವಿಧಾನಸಭಾ ಕ್ಷೇತ್ರಗಳ ಪೈಕಿ ಒಕ್ಕಲಿಗ ಸಮುದಾಯದ ಮತ ಹೆಚ್ಚಿವೆ. ನಾನು ಯಾವತ್ತೂ ಜಾತಿ ರಾಜಕಾರಣ ಮಾಡಿಲ್ಲ. ಎಲ್ಲರನ್ನ ಒಗ್ಗೂಡಿಸಿಕೊಂಡು ಹೋರಾಟ ಮಾಡಿದ್ದೇನೆ ಎಂದರು.

ಯದುವೀರ್ ಮೇಲೆ ಒತ್ತಡ ಹಾಕಿ ಚುನಾವಣೆಗೆ ಕರೆ ತಂದಿದ್ದು ಯಾರೆಂದು ಪ್ರತಾಪ್ ಸಿಂಹ ತಿಳಿಸಲಿ.

ಕಳೆದ ಹತ್ತು ವರ್ಷದಿಂದ ಬಿಜೆಪಿಯಿಂದ ಒಕ್ಕಲಿಗ ಅಭ್ಯರ್ಥಿ ಆಯ್ಕೆಯಾಗಿದ್ದರು. ಈ ಬಾರಿ ಪ್ರತಾಪ್ ಸಿಂಹರೆ ಅಭ್ಯರ್ಥಿಯಾಗುತ್ತೀನಿ ಅನ್ನೋ ವಿಶ್ವಾಸ ಅವರಿಗೂ ಇತ್ತು. ಪ್ರತಾಪ್ ಸಿಂಹಗೆ ಯಾಕೆ ಟಿಕೆಟ್ ತಪ್ಪಿತು ಅಂತ ಅವರದರೂ ಹೇಳಬೇಕು, ಇಲ್ಲ ಪಕ್ಷ ಹೇಳಬೇಕು. ಪ್ರತಾಪ್ ಸಿಂಹ ಅಭ್ಯರ್ಥಿಯಾಗ್ತಾರೆ ಎಂದು ನಾನು ನಮ್ಮ ನಾಯಕರ ಬಳಿ ಮನವಿ ಮಾಡಿದ್ದೆ ನಾನು ಅವರ ವಿರುದ್ಧ ಸ್ಪರ್ಧೆ ಮಾಡುತ್ತೇನೆ ಎಂದು. ಈಗ ರಾಜಮನೆತನದ ಯದುವೀರ್ ಮತ್ತು ನನ್ನ ನಡುವೆ ಸ್ಪರ್ಧೆ ಏರ್ಪಟ್ಟಿದೆ. ರಾಜಮನೆತನದ ಬಗ್ಗೆ ನಮಗೆ ಅಪಾರ ಗೌರವವಿದೆ. ನಾಲ್ವಡಿ ಕೃಷ್ಣರಾಜ ಒಡೆಯರ್ ಮೀಸಲಾತಿ ಜಾರಿಗೆ ತಂದವರು. ಮೀಸಲಾತಿ ವಿರುದ್ಧವಿರುವ ಬಿಜೆಪಿ ಪಕ್ಷದಿಂದ ಯದುವೀರ್ ಅಭ್ಯರ್ಥಿಯಾಗಿದ್ದಾರೆ. ಒಂದು ವೇಳೆ ಕಾಂಗ್ರೆಸ್ ನಿಂದ ಟಿಕೆಟ್ ಕೇಳಿದ್ದರೆ ನಾವು ಟಿಕೆಟ್ ಕೊಡಿಸುತ್ತಿದ್ದೆವು. ಯದುವೀರ್ ಮೇಲೆ ಒತ್ತಡ ಹಾಕಿ ಚುನಾವಣೆಗೆ ಕರೆ ತಂದಿದ್ದು ಯಾರೆಂದು ಪ್ರತಾಪ್ ಸಿಂಹ ತಿಳಿಸಲಿ ಎಂದು ಎಂ.ಲಕ್ಷ್ಮಣ್ ಟಾಂಗ್ ಕೊಟ್ಟರು.

ಸಿದ್ದರಾಮಯ್ಯನವರಿಗೆ ಅವಮಾನ ಮಾಡಬೇಡಿ.

ಕಳೆದ ವಿಧಾನಸಭಾ ಚುನಾವಣೆ ಫಲಿತಾಂಶ ನೋಡಿದರೆ ನಮ್ಮ ಗೆಲುವಿಗೆ ಪೂರಕವಾದ ವಾತಾವರಣವಿದೆ. ಪ್ರತಾಪ್ ಸಿಂಹ ವಿರುದ್ಧ ವೈಯಕ್ತಿಕ ದ್ವೇಷವಿಲ್ಲ. ಮೈಸೂರು ನಗರಕ್ಕೆ ಸಿದ್ದರಾಮಯ್ಯ ಕೊಟ್ಟ ಕೊಡುಗೆಗಳು ನಮ್ಮ ಕಣ್ಣ ಮುಂದಿವೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ 8 ತಿಂಗಳಾಗಿದೆ 1500 ಕೋಟಿ ಅನುದಾನ ಕೊಟ್ಟಿದ್ದಾರೆ. ಮೈಸೂರು ಕೊಡಗು ಕ್ಷೇತ್ರದ ಜನತೆಗೆ ಕೈ ಮುಗಿದು ಕೇಳಿಕೊಳ್ಳುತ್ತೇನೆ. ಸಿದ್ದರಾಮಯ್ಯನವರಿಗೆ ಅವಮಾನ ಮಾಡಬೇಡಿ. ಇಷ್ಟೆಲ್ಲಾ ಅಭಿವೃದ್ಧಿ ಮಾಡಿದ್ದರೂ ಭಾವನಾತ್ಮಕ ವಿಚಾರದಿಂದ ನಮಗೆ ಸೋಲಾಗುತ್ತಿದೆ ಎಂದಿದ್ದಾರೆ. ಏರ್ ಪೋರ್ಟ್ ವಿಸ್ತರಣೆ ಬಗ್ಗೆ ಸುಮ್ಮನೆ ಹೇಳ್ತಾನೆ ಇದ್ದಾರೆ. ಎಷ್ಟು ವಿಮಾನಗಳು ಓಡಾಟ ಮಾಡುತ್ತಿವೆ ಎಂದು ನೀವೇ ನೋಡಿ. ನಿಮ್ಮ ಸೇವೆ ಮಾಡಲಿಕ್ಕೆ ನನಗೊಂದು ಅವಕಾಶ ಕೊಡಿ. ಈ ಭಾರಿ ಮತದಾರರು ನನ್ನನ್ನ ಕೈ ಹಿಡಿಯದೆ ಹೋದರೆ ನಾನು ಸತ್ತಂಗೆ ಎಂದರು.

ನಾನೊಬ್ಬ ಸಾಮಾನ್ಯ ಕಾರ್ಯಕರ್ತ. ನನ್ನ ಹೆಸರಿನ ಮುಂದೆ ರಾಜ ಒಡೆಯರ್ ಏನು ಇಲ್ಲಾ. ನಾನೊಬ್ಬ ಒಕ್ಕಲಿಗ ಸಮುದಾಯಕ್ಕೆ ಸೇರಿದವನು. ಕೆಲವರು ಲಕ್ಷ್ಮಣ್ ಗೌಡ ಎಂದು ಬದಲಾವಣೆ ಮಾಡಿಕೋ ಎಂದರು. ಚುನಾವಣೆಗೋಸ್ಕರ ಹೆಸರು ಬದಲಾವಣೆ ಮಾಡೋದು ಸರಿಯಲ್ಲ. ನಮ್ಮ ತಂದೆ ತಾಯಿ ಇಟ್ಟಿರುವ ಹೆಸರು ಎಂ ಲಕ್ಷ್ಮಣ್. ನಾನು ದಿನದ 24 ಗಂಟೆ ಕೆಲಸ ಮಾಡುತ್ತೇನೆ. ಮೈಸೂರು ಕೊಡಗು ಕ್ಷೇತ್ರ ಸೇರಿದಂತೆ 22 ಕ್ಷೇತ್ರಗಳಲ್ಲಿ ನಾವು ಗೆಲ್ಲುತ್ತೇವೆ ಎಂದು ಕಾಂಗ್ರೆಸ್ ಅಭ್ಯರ್ಥಿ ಎಂ ಲಕ್ಷ್ಮಣ್ ವಿಶ್ವಾಸ ವ್ಯಕ್ತಪಡಿಸಿದರು.

Key words: chance-voter-mysore-kodagu-congress candidate-M. Laxman – emotionally.