ಮೈಸೂರು,ಜುಲೈ,8,2025 (www.justkannada.in): ವಿವಿಧ ಬೇಡಿಕೆಗಳ ಆಗ್ರಹಿಸಿ ಇಂದು ರಾಜ್ಯಾದ್ಯಂತ 10 ಮಹಾನಗರ ಪಾಲಿಕೆ ಖಾಯಂ ಪೌರ ಕಾರ್ಮಿಕರು ಮತ್ತು ಪಾಲಿಕೆ ಸಿಬ್ಬಂದಿಗಳು ಪ್ರತಿಭಟನಾ ಧರಣಿ ನಡೆಸುತ್ತಿದ್ದಾರೆ.
ಮೈಸೂರು, ಬೆಂಗಳೂರು, ಹುಬ್ಬಳ್ಳಿ ಧಾರವಾಡ, ಬೆಳಗಾವಿ ಸೇರಿದಂತೆ ರಾಜ್ಯದ 10 ಮಹಾನಗರ ಪಾಲಿಕೆ ಸಿಬ್ಬಂದಿಗಳು ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಅದರಂತೆ ಮೈಸೂರಿನ ಮಹಾನಗರ ಪಾಲಿಕೆ ಮುಂಭಾಗ ಪೌರ ಕಾರ್ಮಿಕರು ಮತ್ತು ಪಾಲಿಕೆ ಸಿಬ್ಬಂದಿ ಕರ್ತವ್ಯಕ್ಕೆ ಗೈರಾಗಿ ಅನಿರ್ದಿಷ್ಟಾವಧಿ ಧರಣಿಗೆ ಮುಂದಾಗಿದ್ದಾರೆ.
7 ನೇ ವೇತನ ಆಯೋಗದ ಸೌಲಭ್ಯವನ್ನ ಪೌರ ಕಾರ್ಮಿಕರಿಗೂ ವಿಸ್ತರಿಸಬೇಕು. ರಾಜ್ಯ ಸರ್ಕಾರಿ ನೌಕರರಿಗೆ ಜಾರಿ ಮಾಡಿರುವ ಕೆಜಿಐಡಿ, ಜಿಪಿಎಫ್, ಸೌಲಭ್ಯವನ್ನ ಮಹಾನಗರ ಪಾಲಿಕೆ ಸಿಬ್ಬಂದಿಗಳಿಗೂ ಜಾರಿಗೊಳಿಸಬೇಕು. ಸರ್ಕಾರಿ ನೌಕರರಿಗೆ ಕೊಡುವ ಆರೋಗ್ಯ ಸೌಲಭ್ಯ ಜ್ಯೋತಿ ಆರೋಗ್ಯ ಸಂಜೀವಿನಿ ಯೋಜನೆಯನ್ನು ನಮಗೂ ವಿಸ್ತರಣೆ ಮಾಡಬೇಕು. ನೇಮಕಾತಿ ನಿಯಮಗಳಲ್ಲಿ ತಿದ್ದುಪಡಿ ಮಾಡಬೇಕು.
ಹಾಗೆಯೇ ಸರ್ಕಾರಿ ನೌಕರರಿಗೆ ಪ್ರತಿ ವರ್ಷ ಆಯೋಜಿಸುವ ಕ್ರೀಡೆಯಲ್ಲಿ ನಮಗೂ ಅವಕಾಶ ಮಾಡಿಕೊಡಬೇಕು. ಹಿರಿತನದ ಆಧಾರದ ಮೇಲೆ ಬಡ್ತಿ ನೀಡಬೇಕು ಎಂಬ ಹಲವು ಬೇಡಿಕೆಗಳನ್ನು ಪಾಲಿಕೆ ಸಿಬ್ಬಂದಿಗಳು ಸರ್ಕಾರದ ಮುಂದಿಟ್ಟು ಪ್ರತಿಭಟನೆ ನಡೆಸುತ್ತಿದ್ದು, ಈ ಕೂಡಲೇ ನಮ್ಮ ಬೇಡಿಕೆ ಸರ್ಕಾರ ಈಡೇರಿಸಬೇಕು ಇಲ್ಲದಿದ್ದರೆ ನಮ್ಮ ಹೋರಾಟ ಮುಂದುವರೆಯುತ್ತದೆ ಎಂಬ ಎಚ್ಚರಿಕೆ ನೀಡಿದ್ದಾರೆ.
Key words: 10 City Corporation, employees, Staff , Protest