ಪ್ರಧಾನಿ ಮೋದಿ‌ ಸಲಹೆ ಮೇರೆಗೆ ಲಾಕ್ ಡೌನ್ ಮುಂದುವರಿಕೆ ನಿರ್ಧಾರ: ಆರ್ಥಿಕ ಪರಿಸ್ಥಿತಿ ಸರಿಪಡಿಸಲು ಹಲವು‌ ಕ್ರಮ ಎಂದ ಸಿಎಂ ಬಿಎಸ್ವೈ

ಬೆಂಗಳೂರು, ಏಪ್ರಿಲ್ 13, 2020 (www.justkannada.in): ರಾಜ್ಯದಲ್ಲಿ ಲಾಕ್ಡೌನ್ ಸಡಿಲಗೊಳಿಸಬೇಕೆ ಬೇಡವೆ ಎಂಬ ಬಗ್ಗೆ ಚರ್ಚೆ ನಡೆಸಲಾಗಿದೆ. ಪ್ರಧಾನಿ ಮೋದಿ ಸಲಹೆಯ ಬಳಿಕ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.

ಇಂದು ನಡೆದ ಸಚಿವ ಸಂಪುಟದ ಸಹದ್ಯೋಗಿಗಳು ಹಾಗೂ ವಿವಿಧ ಇಲಾಖೆಗಳ ಹಿರಿಯ ಅಧಿಕಾಾರಿಗಳ ಸಭೆಯಲ್ಲಿ ಈ‌ ನಿರ್ಧಾರ ತೆಗೆದುಕೊಳ್ಳಲಾಗಿದೆ.

1. ಇಂದು ಸಚಿವ ಸಂಪುಟದ ಸಹದ್ಯೋಗಿಗಳು ಹಾಗೂ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಯಿತು.

2. ಲಾಕ್ ಡೌನ್ ಸಡಿಲಗೊಳಿಸುವ ಸಾಧ್ಯತೆಗಳು ಹಾಗೂ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚೆ ನಡೆಸಲಾಯಿತು.

3. ಈ ಸಂದರ್ಭದಲ್ಲಿ ರಾಜ್ಯದ ಆರ್ಥಿಕ ಸ್ಥಿತಿ ಸುಧಾರಿಸುವ ನಿಟ್ಟಿನಲ್ಲಿ ಹಲವು ಸಲಹೆಗಳು ಬಂದವು. ಅವುಗಳನ್ನು ನಾವು ಜಾರಿಗೊಳಿಸಲು ತೀರ್ಮಾನಿಸಲಾಯಿತು.

4. ಉದಾಹರಣೆಗೆ ಅನಧಿಕೃತ ಕಟ್ಟಡಗಳ ಕುರಿತು ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರಯತ್ನಿಸುವಂತೆ ಸೂಚಿಸಲಾಯಿತು. ನ್ಯಾಯಾಲಯಗಳಲ್ಲಿ ಪ್ರಕರಣ ಇತ್ಯರ್ಥವಾದರೆ ನಾಗರಿಕರಿಗೂ ಅನುಕೂಲವಾಗಲಿದೆ. ರಾಜ್ಯಕ್ಕೂ ಸಂಪನ್ಮೂಲ ದೊರೆಯಲಿದೆ.

5. ಇದರೊಂದಿಗೆ ಬಿಡಿಎ ವ್ಯಾಪ್ತಿಯಲ್ಲಿರುವ 12 ಸಾವಿರ ಮೂಲೆ ನಿವೇóಶನಗಳನ್ನು ಹರಾಜು ಹಾಕಲು ಚಿಂತನೆ ನಡೆಸಲಾಗುತ್ತಿದೆ.

6. ಖಾಸಗಿ ಮತ್ತು ಸಹಕಾರಿ ಸಂಘಗಳ ಬಡಾವಣೆ ನಿರ್ಮಾಣ ಹಾಗೂ ನಿವೇಶನಕ್ಕೆ ಸಂಬಂಧಿಸಿದಂತೆ ಕಾನೂನು ತಿದ್ದುಪಡಿ ಮಾಡಲು ಕ್ರಮ ಕೈಗೊಳ್ಳಲಾಗುವುದು. ಇದರಿಂದ ಅನುಮತಿಗೆ ಕಾಯುತ್ತಿರುವ ನೂರಾರು ವಸತಿ ನಿರ್ಮಾಣ ಸೊಸೈಟಿಗಳಿಗೆ ಅನುಮತಿ ನೀಡಲು ಸಾಧ್ಯವಾಗುವುದು.

7. ಕೋವಿಡ್ 19 ರಿಂದಾಗಿ ರಾಜ್ಯದ ಆರ್ಥಿಕ ಪರಿಸ್ಥಿತಿಯಲ್ಲಿ ಕುಸಿತವಾಗಿದೆ. ಇದನ್ನು ಸರಿದೂಗಿಸಲು ಹಲವು ಮಾರ್ಗೋಪಾಯಗಳನ್ನು ಕಂಡು ಹಿಡಿಯುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ.

8. ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯದಲ್ಲಿ ಲಭ್ಯವಿರುವ 1000 ಕೋಟಿ ರೂಪಾಯಿಗಳನ್ನು ವೈದ್ಯಕೀಯ ಕಾಲೇಜುಗಳ ಮೂಲಸೌಲಭ್ಯ ಅಭಿವೃದ್ಧಿಗೆ ಬಳಸಲು ತೀರ್ಮಾನಿಸಲಾಯಿತು.

9. ಮುಂದಿನ ಒಂದು ವಾರಕ್ಕೆ ಉಚಿತ ಹಾಲು ವಿತರಣೆ ವಿಸ್ತರಿಸಲಾಗುವುದು.

10. ರಾಜ್ಯದ ಇತರ ನಗರಾಭಿವೃದ್ಧಿ ಪ್ರಾಧಿಕಾರಗಳಲ್ಲಿಯೂ ಮೂಲೆ ನಿವೇಶನಗಳು ಹಾಗೂ ಖಾಲಿ ಇರುವ ನಿವೇಶನಗಳನ್ನು ಹರಾಜು ಹಾಕಲು ಕ್ರಮ ವಹಿಸಲಾಗುವುದು.

11. ಪ್ರಸ್ತುತ ಕೋವಿಡ್ 19ಕ್ಕೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳಡಿ ಪೋರ್ಟಲ್ ಗಳನ್ನು ನಿರ್ವಹಿಸಲಾಗುತ್ತಿದ್ದು, ಇವುಗಳನ್ನು ಏಕೀಕೃತ ಪೋರ್ಟಲ್ ವ್ಯವಸ್ಥೆಯಡಿ ತರಲು ತೀರ್ಮಾನಿಸಲಾಯಿತು.