ಬೆಂಗಳೂರು, ಮೇ ,1,2025 (www.justkannada.in): ಕೇಂದ್ರ ಸರ್ಕಾರ ಜನಗಣತಿ ಜೊತೆಗೆ ಜಾತಿ ಗಣತಿ ಮಾಡುಲು ಕೈಗೊಂಡಿರುವ ನಿರ್ಧಾರವನ್ನು ಸ್ವಾಗತಿಸುತ್ತೇನೆ. ಕೇಂದ್ರ ಸರ್ಕಾರ ಜಾತಿ ಗಣತಿ ಜೊತೆ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆಯನ್ನೂ ನಡೆಸಲಿ ಎಂದು ಸಿಎಂ ಸಿದ್ದರಾಮಯ್ಯ ಆಗ್ರಹಿಸಿದರು.
ಇಂದು ಜಾತಿಗಣತಿ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಈ ವಿಚಾರದಲ್ಲಿ ಸಂಸದ ರಾಹುಲ್ ಗಾಂಧಿ ಹಾಗೂ ಕೇಂದ್ರ ಸರ್ಕಾರವನ್ನು ನಾನು ಅಭಿನಂದಿಸುವೆ. ಪ್ರಧಾನಿ ಮೋದಿ ಅವರಿಗಿಂತ ರಾಹುಲ್ ಗಾಂಧಿಯವರನ್ನು ನಾನು ಅಭಿನಂದಿಸುತ್ತೇನೆ. ಕಳೆದ ಎರಡೂವರೆ ವರ್ಷಗಳಿಂದ ಜಾತಿಗಣತಿ ನಡೆಸುವಂತೆ ಕೇಂದ್ರ ಸರ್ಕಾರಕ್ಕೆ ರಾಹುಲ್ ಗಾಂಧಿಯವರು ಒತ್ತಾಯಿಸಿದ್ದರು. ನಾಯಕ ರಾಹುಲ್ ಗಾಂಧಿಯವರನ್ನು ಅಭಿನಂದಿಸುತ್ತೇನೆ ಎಂದರು.
ಇದನ್ನೇ ನಾವು ಪ್ರಣಾಳಿಕೆಯಲ್ಲಿ ಭರವಸೆ ನೀಡಿದ್ದೆವು. ರಾಹುಲ್ ಗಾಂಧಿ ಅವರು ಪದೇಪದೆ ಒತ್ತಡ ಹಾಕಿದ್ದರಿಂದ ಜಾತಿಗಣತಿಗೆ ಮುಂದಾಗಿದ್ದಾರೆ. ಜನಸಂಖ್ಯೆ ಅನುಗುಣವಾಗಿ ಮೀಸಲಾತಿ ಪ್ರಮಾಣ ಹೆಚ್ಚಿಸಬೇಕು. ಕೇವಲ ಜನಗಣತಿ ಜೊತೆಗೆ ಜಾತಿಗಣತಿ ನಡೆಸಿದರೆ ಸಾಲದು, ಕೇಂದ್ರ ಸರ್ಕಾರ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯನ್ನೂ ನಡೆಸಲಿ ಎಂದು ಆಗ್ರಹಿಸಿದರು.
2015ರಲ್ಲೇ 192 ಕೋಟಿ ರೂ. ಖರ್ಚು ಮಾಡಿ ಸಮೀಕ್ಷೆ ನಡೆಸಿದ್ದೇವೆ. ಜಾತಿಗಣತಿ ವರದಿಯನ್ನು ಸ್ವೀಕರಿಸಿ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಲಾಗಿದೆ. ಸಚಿವರ ಅಭಿಪ್ರಾಯವನ್ನು ಪಡೆದು ಮುಂದೆ ನಿರ್ಧಾರ ಕೈಗೊಳ್ಳುತ್ತೇವೆ. ಬಿಜೆಪಿಯವರು ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿರುವವರು. ಎಲ್ಲ ಆಯೋಗಗಳ ವರದಿಯನ್ನೂ ಬಿಜೆಪಿಯವರು ವಿರೋಧಿಸಿದ್ದಾರೆ. ಇತಿಹಾಸ ನೋಡಿದರೆ ಎಂದೂ ಸಾಮಾಜಿಕ ನ್ಯಾಯದ ಪರವಾಗಿ ಬಿಜೆಪಿಯವರು ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹರಿಹಾಯ್ದರು.
Key words: CM Siddaramaiah, Centre, social, economic, educationa, survey , caste census