ಬೆಂಗಳೂರು,ಮೇ,30,2025 (www.justkannada.in): ಜಿಲ್ಲಾವಾರು ರೈತರ ಆತ್ಮಹತ್ಯೆ ಅಂಕಿ ಅಂಶಗಳನ್ನು ಗಮನಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಇನ್ನೂ 13 ರೈತರ ಆತ್ಮಹತ್ಯೆ ಪ್ರಕರಣಗಳಲ್ಲಿ ಪರಿಹಾರ ಬಾಕಿ ಇರುವುದನ್ನು ನೋಡಿ ಗರಂ ಆಗಿ ಜಿಲ್ಲಾಧಿಕಾರಿಗಳಿಂದ ವರದಿ ಪಡೆದರು.
ಹಾವೇರಿ ಸೇರಿ ಇನ್ನೆರಡು ಜಿಲ್ಲೆಗಳಲ್ಲಿ ಒಟ್ಟು 13 ರೈತ ಆತ್ಮಹತ್ಯೆ ಪ್ರಕರಣಗಳಲ್ಲಿ ಪರಿಹಾರ ಬಾಕಿ ಇರುವುದನ್ನು ಆದಷ್ಟು ಬೇಗ ಬಗೆಹರಿಸಿ ಪರಿಹಾರ ಒದಗಿಸಿ ಎಂದು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು.
ಭೂಕುಸಿತ: ತಕ್ಷಣ ತೆರಳುವಂತೆ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಮತ್ತು DC ಅವರಿಗೆ ಸೂಚಿಸಿದ ಸಿಎಂ
ರಾತ್ರಿ ಬಿದ್ದ ಮಳೆಯಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭೂ ಕುಸಿತ, ಗೋಡೆ ಕುಸಿತ ಆಗಿ ಸಾವು ಸಂಭವಿಸಿರುವ ಬಗ್ಗೆ ಸಮಗ್ರ ಮಾಹಿತಿ ಸಂಗ್ರಹಿಸಿದ ಸಿಎಂ ಸಿದ್ದರಾಮಯ್ಯ, ತಕ್ಷಣ ಸ್ಥಳಕ್ಕೆ ತೆರಳಿ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಂಡು ವರದಿ ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಮತ್ತು ದ.ಕ ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.
ಅನರ್ಹ ಪಡಿತರ ಚೀಟಿಗಳು ಇನ್ನೂ ಹೇಗೆ ಉಳಿದುಕೊಂಡಿವೆ: ಸಿಎಂ ಪ್ರಶ್ನೆ
ಅನರ್ಹ ಪಡಿತರ ಚೀಟಿಗಳನ್ನು ರದ್ದುಗೊಳಿಸಲು ಈಗಾಗಲೇ ಕಟ್ಟುನಿಟ್ಟಿನ ಸೂಚನೆ ನೀಡಲಾಗಿತ್ತು. ಆದರೆ ಇದರಲ್ಲಿ ನಿರೀಕ್ಷಿತ ಪ್ರಗತಿ ಯಾಕೆ ಸಾಧ್ಯವಾಗಿಲ್ಲ. ರಾಜ್ಯದಲ್ಲಿ ಸುಮಾರು ಶೇ. 74ರಷ್ಟು ಬಿಪಿಎಲ್ ಕಾರ್ಡುಗಳಿದ್ದು, ಅನರ್ಹರನ್ನು ಗುರುತಿಸಿ ತೆಗೆದು ಹಾಕುವ ಮೂಲಕ ಅರ್ಹರಿಗೆ ಸವಲತ್ತು ಒದಗಿಸುವ ಕಾರ್ಯ ನಡೆಯಬೇಕಿದೆ ಎಂದು ಸೂಚನೆ ನೀಡಿಯಾಗಿತ್ತು. ಆದರೂ ಇದರಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಪ್ರಗತಿ ಆಗಿಲ್ಲ ಏಕೆ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು.
ಬಡವರ ಇಂದಿರಾ ಕ್ಯಾಂಟೀನ್ ಕಾರ್ಯ ಪೂರ್ಣಗೊಳಿಸಿ: ಸಿಎಂ ತಾಕೀತು
ನಮ್ಮ ಸರ್ಕಾರ ಹೊಸದಾಗಿ ಘೋಷಣೆ ಮಾಡಿರುವ ಎಲ್ಲಾ ಇಂದಿರಾ ಕ್ಯಾಂಟೀನ್ ಗಳು ಕಾರ್ಯಾರಂಭ ಮಾಡಲು ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಇಂದಿರಾ ಕ್ಯಾಂಟೀನ್ ಗಳಿಗೆ ಇನ್ನೂ 5ಕಡೆ ಸ್ಥಳ ಗುರುತಿಸಬೇಕಾಗಿದೆ. ತಕ್ಷಣ ನಿವೇಶನ ಗುರುತಿಸಬೇಕು. ಹೊಸದಾಗಿ ಘೋಷಣೆ ಮಾಡಲಾಗಿರುವ 186 ಇಂದಿರಾ ಕ್ಯಾಂಟೀನ್ ಗಳ ಪೈಕಿ ಕೇವಲ 103 ನಿರ್ಮಾಣ ಕಾರ್ಯ ಪೂರ್ಣಗೊಂಡಿವೆ. ಆಹಾರ ವಿತರಣೆ 43 ಇಂದಿರಾ ಕ್ಯಾಂಟೀನ್ ಗಳಲ್ಲಿ ಮಾತ್ರ ಪ್ರಾರಂಭವಾಗಿದೆ. ಎಲ್ಲಾ ಕಡೆ ಆಹಾರ ವಿತರಣೆ ಪ್ರಾರಂಭಿಸಲು ಜಿಲ್ಲಾಧಿಕಾರಿಗಳು ಕ್ರಮಕೈಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚಿಸಿದರು.
Key words: Farmer, suicide, case, provide, relief, CM Siddaramaiah