Tuesday, August 11, 2026

BDA Apartments

Home Front Page ಕಾನೂನುಬಾಹಿರ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಮೇಲೆ ಕಾನೂನು ಕ್ರಮ- ಸಿಎಂ ಸಿದ್ದರಾಮಯ್ಯ

ಕಾನೂನುಬಾಹಿರ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಮೇಲೆ ಕಾನೂನು ಕ್ರಮ- ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಜನವರಿ 31,2025 (www.justkannada.in): ಆರ್ ಬಿಐ ನಿಯಮಾವಳಿ ಉಲ್ಲಂಘಿಸುವ ,ಹೆಚ್ಚಿನ ಬಡ್ಡಿದರ ವಸೂಲು ಮಾಡುವ ಹಾಗೂ ಕಾನೂನು ಬಾಹಿರವಾಗಿ ಕಾರ್ಯನಿರ್ವಹಿಸುತ್ತಿರುವ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಮೇಲೆ ಸರ್ಕಾರ ಕಾನೂನು ಕ್ರಮ ಕೈಗೊಳ್ಳಲಿದ್ದು, ಜನರು ಆತಂಕಕ್ಕೊಳಗಾಗಿ ಆತ್ಮಹತ್ಯೆಯಂತಹ ತಪ್ಪು ನಿರ್ಧಾರಗಳನ್ನು ಕೈಗೊಳ್ಳಬಾರದು ಎಂದು ರಾಜ್ಯದ ಜನರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿನಂತಿಸಿದರು.

ಇಂದು ಮೈಸೂರಿನಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮೈಕ್ರೋ ಫೈನಾನ್ಸ್ ನಿಂದ ಜನರಿಗಾಗುತ್ತಿರುವ ತೊಂದರೆ  ಹಾಗೂ ಬಿಜೆಪಿಯವರು ರಾಜ್ಯದಲ್ಲಿ ಗೂಂಡಾ ರಾಜ್ಯವಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯೆ ನೀಡಿದರು.

ಜನರು ಸಾಲ ಲಭ್ಯವಾಗುವ ಕಡೆ ಸಾಲ ಪಡೆಯುತ್ತಿದ್ದಾರೆ. ಖಾಸಗಿ ಹಣಕಾಸು ಸಂಸ್ಥೆ, ಲೇವಾದೇವಿಗಾರರು ನೀಡುವ ಸಾಲದ ಮೇಲೆ ಹೆಚ್ಚಿನ ಬಡ್ಡಿ ದರವನ್ನು ಹಾಕುವುದಲ್ಲದೇ, ಗೂಂಡಾಗಳ ಮೂಲಕ ಜನರನ್ನು ಹೆದರಿಸಿ, ಅಮಾನವೀಯ ರೀತಿಯಲ್ಲಿ ಸಾಲ ವಸೂಲಾತಿಯಲ್ಲಿ ತೊಡಗಿದ್ದಾರೆ. ಮೈಕ್ರೋ ಫೈನಾನ್ಸ್ ಸಂಸ್ಥೆಗಳು ವಾರ್ಷಿಕವಾಗಿ ಶೇ. 28 ರಿಂದ 30 ರಷ್ಟು ಬಡ್ಡಿ ವಸೂಲಿ ಮಾಡುತ್ತಿವೆ. ಇದರಿಂದ ಸಾಲ ಪಡೆದ ಜನರು ಬೇಸತ್ತು, ಆತ್ಮಹತ್ಯೆಗೆ ಶರಣಾಗುತ್ತಿರುವುದನ್ನು ಗಮನಿಸಲಾಗಿದೆ. ಮೈಕ್ರೋ ಫೈನಾನ್ಸ್ ವ್ಯವಸ್ಥೆಗಳು ಕೇಂದ್ರ ಸರ್ಕಾರದ ಅಧೀನದಲ್ಲಿ ಬರುವ ರಿಸರ್ವ್ ಬ್ಯಾಂಕ್ ನ ಮಾರ್ಗಸೂಚಿಯಂತೆ ಕಾರ್ಯನಿರ್ವಹಿಸುತ್ತವೆ. ಆದ್ದರಿಂದ ಮೈಕ್ರೋ ಫೈನಾನ್ಸ್ ನ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಸಧ್ಯದಲ್ಲಿಯೇ ಸುಗ್ರೀವಾಜ್ಞೆಯನ್ನು ಹೊರಡಿಸಲಿದ್ದು, ಕಿರುಕುಳ ನೀಡುತ್ತಿರುವ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿದೆ ಎಂದರು.

ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯ

ಕೇಂದ್ರದ ಬಜೆಟ್ ಅಧಿವೇಶನದಿಂದ ರಾಜ್ಯದ ನಿರೀಕ್ಷೆಗಳ ಬಗ್ಗೆ ಪ್ರತಿಕ್ರಿಯೆ ನೀಡಿ, ಕೇಂದ್ರಸರ್ಕಾರದವರು ರಾಜ್ಯಕ್ಕೆ ತಮ್ಮ ಬಜೆಟ್ ನಲ್ಲಿ ಘೋಷಣೆ ಮಾಡಿದ ಅನುದಾನವನ್ನು ನೀಡಿಲ್ಲ. 2023-24 ರ ಕೇಂದ್ರ ಬಜೆಟ್ ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ ಇಳಿಸಿದ್ದಾರೆ.ಡಿದ್ದಾರೆ.ಈ 5300 ಕೋಟಿ ರೂ. ಘೋಷಣೆ ಮಾಡಿದ್ದರು. ಆದರೆ ಇದುವರೆಗೂ ಒಂದು ರೂಪಾಯಿ ಬಿಡುಗಡೆಯಾಗಿಲ್ಲ.  ನಬಾರ್ಡ್ ನ ಅನುದಾನದಲ್ಲಿ ಶೇ.58 ರಷ್ಟು ಕಡಿತ ಮಾಡಿದ್ದು, ಕಳೆದ ವರ್ಷ ನಬಾರ್ಡ್ ನ ಅಡಿ ನೀಡಲಾಗಿದ್ದ 5800 ಕೋಟಿ ರೂ. ,ಈ ವರ್ಷ 2345 ಕೋಟಿ ರೂ. ಇಳಿಸಿದ್ದಾರೆ. ಕರ್ನಾಟಕ 4ಲಕ್ಷ ಕೋಟಿಯಷ್ಟು ಕೇಂದ್ರಕ್ಕೆ ತೆರಿಗೆ ನೀಡಿದರೆ, ರಾಜ್ಯಕ್ಕೆ ಕೇವಲ 60 ಸಾವಿರ ಕೋಟಿ ಮರಳಿ ಬರುತ್ತಿದ್ದುದ್ದು, ತೆರಿಗೆ ಹಂಚಿಕೆಯ ಪಾಲಿನಲ್ಲಿಯೂ ರಾಜ್ಯಕ್ಕೆ ಅನ್ಯಾಯವಾಗುತ್ತಿದೆ ಎಂದರು.

ಬಾಲಿಶ ಹೇಳಿಕೆ

ಕುಂಭಮೇಳದ ಬಗ್ಗೆ ಟೀಕೆ ಮಾಡುವವರು ಅಯೋಗ್ಯರು ಎಂದು ಪ್ರತಿಪಕ್ಷ ನಾಯಕರಾದ ವಿಜಯೇಂದ್ರರವರು ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ತಪ್ಪು ನಡೆದಾಗ ಟೀಕೆ ಮಾಡುವ ಸ್ವಾತಂತ್ರ್ಯ ಪ್ರತಿಯೊಬ್ಬರಿಗೂ  ಇರುತ್ತದೆ. ವಿಜಯೇಂದ್ರರವರ ಹೇಳಿಕೆ ಬಾಲಿಶವಾಗಿದೆ ಎಂದರು.

ಮುಡಾಪ್ರಕರಣ ರಾಜಕೀಯ ಪ್ರೇರಿತ

ಮುಡಾಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ವರದಿ ಬಂದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಜಾರಿನಿರ್ದೇಶನಾಲಯದ ವರದಿ ರಾಜಕೀಯಪ್ರೇರಿತವಾಗಿದೆ. ಮನಿಲ್ಯಾಂಡರಿಂಗ್ ಆಗಿರುವ ಬಗ್ಗೆ ಯಾವುದೇ ಸಾಕ್ಷಿಯಿಲ್ಲ. ಮುಡಾದ ಮಾಜಿ ಆಯುಕ್ತ ನಟೇಶ್ ಅವರ ಮೇಲೆ ಇಡಿಯವರ ಕ್ರಮ ಕಾನೂನು ಬಾಹಿರ ಮತ್ತು  ಮನಿಲ್ಯಾಂಡರಿಂಗ್  ಅಗಿಲ್ಲ ಎಂದು ಹೈಕೋರ್ಟ್ ಹೇಳಿದೆ.  ಇಡಿಯ ಸಂಪೂರ್ಣ ವರದಿಯನ್ನು ಮಾಧ್ಯಮದಲ್ಲಿ ಬಿಡುಗಡೆ ಮಾಡುವ ಮೂಲಕ ಸಂಪೂರ್ಣ ಪ್ರಕರಣವನ್ನು ಉದ್ದೇಶಪೂರ್ವಕವಾಗಿ ರಾಜಕೀಯ ಪ್ರೇರಿತವಾಗಿದೆ.  ಸರ್ಕಾರ ಹಾಗೂ ಮುಖ್ಯಮಂತ್ರಿಗಳ ವರ್ಚಸ್ಸಿಗೆ ಕುಂದು ತರುವಂತಹ ಪ್ರಯತ್ನ ನಡೆಯುತ್ತಿದೆ ಎಂದರು.

ವರ್ಚಸ್ಸು ಕುಂದಿಸುವ ಪ್ರಯತ್ನ

ಮುಡಾಪ್ರಕರಣದ ಮೂಲಕ ಸಿದ್ದರಾಮಯ್ಯನವರ ತೇಜೋವಧೆ ಮಾಡಲಾಗುತ್ತಿದೆಯೇ ಎಂಬ ಬಗ್ಗೆ ಉತ್ತರಿಸಿ, ಕರ್ನಾಟಕ ಮುಖ್ಯಮಂತ್ರಿಯಾಗಿರುವ ಕಾರಣದಿಂದ ನನ್ನ ತೇಜೋವಧೆ ಮಾಡಲಾಗುತ್ತಿದೆ. ನನ್ನ ಶ್ರೀಮತಿಯವರಿಗೆ ಇಡಿಯವರ ನೋಟೀಸ್ ಬಂದ ಹಿನ್ನೆಲೆಯಲ್ಲಿ ನ್ಯಾಯಾಲಯದಿಂದ ತಡೆಯಾಜ್ಞೆಯನ್ನು ತರಲಾಗಿದೆ. ನನ್ನ ವರ್ಚಸ್ಸಿಗೆ ಭಂಗ ತರಬೇಕೇಂಬ ದುರುದ್ದೇಶದಿಂದ, ಇಂತಹ ಕುಕೃತ್ಯಗಳನ್ನು  ಮಾಡಲಾಗುತ್ತಿದೆ. ಆದರೆ ಅವರ ಪ್ರಯತ್ನಗಳು ಸಫಲವಾಗಲು ಸಾಧ್ಯವಿಲ್ಲ ವೆಂದರು.

ವರಿಷ್ಠರ ತೀರ್ಮಾನವೇ ಅಂತಿಮ

ಮುಖ್ಯಮಂತ್ರಿಯಾಗಿ ಐದು ವರ್ಷ ಪೂರ್ಣಗೊಳಿಸುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ಈ ಬಗ್ಗೆ ಪಕ್ಷದ ವರಿಷ್ಠರ ತೀರ್ಮಾನವೇ ಅಂತಿಮ. ಪಕ್ಷದ ನಾಯಕರು ಸಭೆ ಮಾಡುವುದರಲ್ಲಿ ಯಾವುದೇ ರಾಜಕೀಯವಿಲ್ಲ. ಸತ್ಯಕ್ಕೆ ವಿರುದ್ಧವಾದ ಊಹೆಗಳು ತಪ್ಪು ಎಂದರು.

Key words: Legal action, against, illegal microfinance, institutions, CM Siddaramaiah