Sunday, August 2, 2026

BDA Apartments

Home Front Page ಅನಧಿಕೃತ ಬಡಾವಣೆಗಳು ಮತ್ತೆ ತಲೆ ಎತ್ತಿದ್ರೆ ನೀವೇ ಹೊಣೆ: ಇಂದಿನಿಂದಲೇ ಬಿ ಖಾತಾ ಕೊಡಲು ಶುರು...

ಅನಧಿಕೃತ ಬಡಾವಣೆಗಳು ಮತ್ತೆ ತಲೆ ಎತ್ತಿದ್ರೆ ನೀವೇ ಹೊಣೆ: ಇಂದಿನಿಂದಲೇ ಬಿ ಖಾತಾ ಕೊಡಲು ಶುರು ಮಾಡಿ – ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು,ಫೆಬ್ರವರಿ,18,2025 (www.justkannada.in): ಅನಧಿಕೃತ ಬಡಾವಣೆಗಳು ನಗರ, ಪಟ್ಟಣ, ಪಾಲಿಕೆ ವ್ಯಾಪ್ತಿ ಮತ್ತು ಹಳ್ಳಿಗಳಲ್ಲೂ ಇವೆ. ಇವೆಲ್ಲಕ್ಕೂ ನಾವು ಅಂತ್ಯ ಹಾಡುತ್ತಿದ್ದೇವೆ. ಅನಧಿಕೃತ ಬಡಾವಣೆಗಳು ಮತ್ತೆ ತಲೆ ಎತ್ತಿದರೆ ಜಿಲ್ಲಾಧಿಕಾರಿ, ಮುಖ್ಯ ಅಧಿಕಾರಿ, ನಗರ ಯೋಜನಾ ಅಧಿಕಾರಿಗಳು ಜವಾಬ್ದಾರಿ ಆಗುತ್ತೀರಿ. ನಿಮ್ಮ ಮೇಲೆ ಮುಲಾಜಿಲ್ಲದೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.

ವಿಡಿಯೊ ಕಾನ್ಫರೆನ್ಸ್  ಮೂಲಕ ಸಭೆ ನಡೆಸಿ ಮಾತನಾಡಿದ  ಸಿಎಂ ಸಿದ್ದರಾಮಯ್ಯ, ಅನಧಿಕೃತ ಬಡಾವಣೆಗಳು ನಗರ, ಪಟ್ಟಣ, ಪಾಲಿಕೆ ವ್ಯಾಪ್ತಿ ಮತ್ತು ಹಳ್ಳಿಗಳಲ್ಲೂ ಇವೆ. ಇವೆಲ್ಲಕ್ಕೂ ನಾವು ಅಂತ್ಯ ಹಾಡುತ್ತಿದ್ದೇವೆ. ಇನ್ನು ಮುಂದೆ ಅನಧಿಕೃತ ಬಡಾವಣೆಗಳಿಗೆ ರಾಜ್ಯದಲ್ಲಿ ಕಿಂಚಿತ್ತೂ ಅವಕಾಶ ಇಲ್ಲ. ಕಾಯ್ದೆ ಮೂಲಕ ಅನಧಿಕೃತ ಬಡಾವಣೆಗಳಿಗೆ ಅಂತ್ಯ ಹಾಡಿದ್ದೇವೆ.  ಅಧಿಕಾರಿಗಳು ಸ್ಪಷ್ಟವಾಗಿ ಅರ್ಥ ಮಾಡಿಕೊಂಡು ಕೆಲಸ ಮಾಡಿ. ಅನಧಿಕೃತ ಬಡಾವಣೆಗಳಿಂದ ಕಂದಾಯ ಬರುತ್ತಿಲ್ಲ, ಪರಿಣಾಮ‌ ಜನರಿಗೆ ನಾಗರಿಕ ಸವಲತ್ತುಗಳೂ ಸಿಗುತ್ತಿಲ್ಲ, ಸ್ಥಳೀಯ ಸಂಸ್ಥೆಗಳಿಗೆ ಆದಾಯವೂ ಬಂದ್ ಆಗಿದೆ. ಇವೆಲ್ಲಾ ಅನಾನುಕೂಲಗಳಿಗೂ ಅಂತ್ಯ ಹಾಡಬೇಕಿದೆ. ಕಂದಾಯ ಕಟ್ಟದಿರುವುದರಿಂದ ಇಷ್ಟೆಲ್ಲಾ ಸಮಸ್ಯೆಗಳಾಗಿವೆ. ಒಂದು ಬಾರಿ, ಇದೊಂದು ಬಾರಿ ಬಿ ಖಾತಾ ಕೊಟ್ಟು ಅಂತ್ಯ  ಹಾಡುತ್ತೇವೆ ಎಂದು ತಿಳಿಸಿದರು.

ನಿಮಗೆ 3 ತಿಂಗಳು ಮಾತ್ರ ಟೈಮ್ ಕೊಟ್ಟಿದ್ದೀವಿ. ಇಷ್ಟರೊಳಗೆ ಅಭಿಯಾನ ನಡೆಸಿ ಪೂರ್ಣಗೊಳಿಸಿ. ಯಾವುದೇ ರಾಜಿ ಇಲ್ಲ. ಅಧಿಕಾರಿಗಳು ರಾಜಿ ಮಾಡಿಕೊಂಡರೆ ಸಹಿಸಲ್ಲ. ಅನಧಿಕೃತ ಬಡಾವಣೆಗಳು ಮತ್ತೆ ತಲೆ ಎತ್ತಿದರೆ ಜಿಲ್ಲಾಧಿಕಾರಿ, ಮುಖ್ಯ ಅಧಿಕಾರಿ, ನಗರ ಯೋಜನಾ ಅಧಿಕಾರಿಗಳು ಜವಾಬ್ದಾರಿ ಆಗುತ್ತೀರಿ ನಿಮ್ಮ ಮೇಲೆ ಮುಲಾಜಿಲ್ಲದೆ ಕ್ರಮ  ತೆಗೆದುಕೊಳ್ಳುತ್ತೇವೆ ಎಂದು ಸೂಚಿಸಿದರು.

ಮಧ್ಯವರ್ತಿಗಳಿಗೆ, ಬ್ರೋಕರ್ ಗಳಿಗೆ ತಕ್ಷಣ  ಗೇಟ್ ಪಾಸ್ ಕೊಡಿ. ಇದನ್ನು ಮತ್ತು ಕಾಯ್ದೆಯ ದೂರದೃಷ್ಟಿಯನ್ನು ನೀವೆಲ್ಲರೂ ಸ್ಪಷ್ಟವಾಗಿ, ಖಚಿತವಾಗಿ ಅರ್ಥ ಮಾಡಿಕೊಳ್ಳಿ. ರಾಜ್ಯದಲ್ಲಿ ಇನ್ನೆಲ್ಲೂ ಅನಧಿಕೃತ ಬಡಾವಣೆಗಳು, ರೆವಿನ್ಯೂ ಬಡಾವಣೆಗಳು ತಲೆ ಎತ್ತಬಾರದು. ಅನಧಿಕೃತ , ರೆವಿನ್ಯೂ ಬಡಾವಣೆಗಳಲ್ಲಿ ಸೈಟು, ಮನೆ ಕಟ್ಟಿರುವವರಿಗೆ ತೊಂದರೆ ಆಗಬಾರದು.  ಒಟ್ಟಾರೆಯಾಗಿ ಬಡವರು, ಮಧ್ಯಮ ವರ್ಗದವರಿಗೆ ಅನುಕೂಲ ಮಾಡಿಕೊಡಲು one time solution ಕೊಟ್ಟಿದ್ದೀವಿ. 3 ತಿಂಗಳಲ್ಲಿ ಎಲ್ಲರಿಗೂ ಖಾತಾ ನೀಡಿ ಅಂತ್ಯ ಹಾಡಿ. ನಾನು ಮತ್ತು ಸಂಬಂಧಪಟ್ಟ ಎಲ್ಲಾ ಸಚಿವರೂ ಸ್ಪಷ್ಟಪಡಿಸಿದ್ದೇವೆ . ಹೊಸ ಗೊಂದಲಗಳಿಗೆ ಅವಕಾಶ ಮಾಡಿಕೊಡಬೇಡಿ. ಬಿ ಖಾತಾ ಇವತ್ತಿನಿಂದಲೇ ಕೊಡಲು ಶುರು ಮಾಡಿ ಎಂದು  ಸಿಎಂ ಸಿದ್ದರಾಮಯ್ಯ ಸೂಚಿಸಿದರು.

Key words:  B Khata, CM,  Siddaramaiah,  instructs